ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯೋತ್ಸವವನ್ನು ಗ್ರಾಮ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಣೆ ಮಾಡುವಂತೆ ಪ್ರಧಾನಿ ಮೋದಿ ಸೂಚಿಸಿರುವುದಾಗಿ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.
75 ನೇ ಸ್ವಾತಂತ್ರ್ಯ ದಿನ ಕೇವಲ ಸರ್ಕಾರದ ಕಾರ್ಯಕ್ರಮವಾಗಿರಬಾರದು. ಅದು ಸಾರ್ವಜನಿಕರನ್ನು ಒಳಗೊಂಡಂತೆ ನಡೆಯುವ ಕಾರ್ಯಕ್ರಮವಾಗಬೇಕು ಎಂದು ಪ್ರಧಾನಿಗಳು ಸಂಸದೀಯ ಮಂಡಳಿಯ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಪ್ರತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪಕ್ಷದ ಇಬ್ಬರು ಕಾರ್ಯಕರ್ತರನ್ನೊಳಗೊಂಡಂತೆ ತಂಡವನ್ನು ರಚಿಸುವಂತೆ ಪ್ರಧಾನಿ ಸೂಚಿಸಿದ್ದಾರೆ. ಈ ತಂಡ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವ ಜೊತೆಗೆ 2047 ರ ವೇಳೆಗೆ ಸ್ವಾತಂತ್ರ್ಯ ದಿನದ ನೂರನೇ ವರ್ಷಾಚರಣೆ ಹೇಗಿರಬೇಕು ಎಂಬುದರ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡುವಂತೆಯೂ ಅವರು ಸೂಚಿಸಿದ್ದಾಗಿ ಮೇಘವಾಲ್ ತಿಳಿಸಿದ್ದಾರೆ.
ಜೊತೆಗೆ ಸ್ಥಳೀಯ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮ, ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಲು ಅವರು ಸಲಹೆ ನೀಡಿದ್ದಾರೆ. ಹಾಗೆಯೇ ಗ್ರಾಮೀಣ ಭಾಗದಲ್ಲಿ ಡಿಜಿಟಲ್ ಸಾಕ್ಷರತೆ ಮೂಡಿಸಲು ಒತ್ತು ನೀಡುವುದು, ಗ್ರಾಮೀಣ ಜನರಿಗೆ ಸರ್ಕಾರದ ಗರಿಷ್ಟ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ತಂಡಗಳು ಕಾರ್ಯಪ್ರವೃತ್ತವಾಗಬೇಕು ಎಂದು ಪ್ರಧಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೇಘವಾಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.