ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರು, ಆಟೊ, ಟ್ಯಾಕ್ಸಿ, ಬಸ್, ಟ್ರಕ್ ಚಾಲಕರ, ಕ್ಲೀನರ್ಗಳು ಅಪಘಾತದಲ್ಲಿ ಮೃತರಾದರೆ ಅವರ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ. ಪರಿಹಾರ ಒದಗಿಸಲು ಕಾಯ್ದೆ ರೂಪಿಸಲಾಗುವುದು ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.
ರಾಜ್ಯದ ಬಡ ಕಾರ್ಮಿಕರ ಬದುಕು ಹಸನಾಗಿಸುವ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕ ಅದಾಲತ್ ನಡೆಸುವುದಕ್ಕೂ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಮಿಕ ಮಕ್ಕಳಿಗೆ ಸಹಾಯಧನ, ಮಕ್ಕಳ ವಿದ್ಯಾಭ್ಯಾಸ, ಮದುವೆ – ಮುಂಜಿ ಮೊದಲಾದ ವಿಚಾರಗಳಿಗೆ ನೆರವಾಗುವ ದೃಷ್ಟಿಯಿಂದ ಧನ ಸಹಾಯ ಒದಗಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತದೆ. ಈ ಎಲ್ಲವುಗಳಿಗೂ ಆರ್ಥಿಕ ಸಂಪನ್ಮೂಲ ಸಂಗ್ರಹಣೆ ಮಾಡಲು ವಾಹನಗಳ ಮೇಲೆ ವಿಶೇಷ 0.5% ಸೆಸ್ ವಿಧಿಸಲು ಚಿಂತನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಒಂದು ವರ್ಷಗಳಿಂದ ಕಾರ್ಮಿಕ ಸಚಿವನಾಗಿರುವುದು, ಅವರ ಸಮಸ್ಯೆಗಳನ್ನು ಅರಿಯುವ ನಿಟ್ಟಿನಲ್ಲಿ ಹೆಚ್ಚು ಸಹಾಯವಾಗಿದೆ. ಸಂಘಟಿತ, ಅಸಂಘಟಿತ, ವಲಸೆ ಕಾರ್ಮಿಕರಿಗೆ ಪ್ರತ್ಯೇಕ ಕಾಯ್ದೆಗಳಿವೆ. ಎಲ್ಲಾ ಕಾರ್ಮಿಕರ ಅನುಕೂಲಕ್ಕಾಗಿ ಹೊಸ ಕಾಯ್ದೆ ಜಾರಿಗೆ ತರಲಾಗುವುದು. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಕಾರ್ಮಿಕರಿಗೆ ವಸತಿ ಯೋಜನೆ ರೂಪಿಸಲಾಗಿದ್ದು, ಬೆಂಗಳೂರು, ಬೆಳಗಾವಿ, ಹಾಸನ, ಶಿವಮೊಗ್ಗ, ಮೈಸೂರು ಸೇರಿ ಹಲವು ಕಡೆಗಳಲ್ಲಿ ವಸತಿ ಸಮುಚ್ಚಯ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೆಬ್ಬಾರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.