ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಪಿಎಂ ಗತಿ ಶಕ್ತಿ ಮಾಸ್ಟರ್ ಪ್ಲ್ಯಾನ್’ ಯೋಜನೆಯನ್ನು ಘೋಷಿಸಿದ್ದಾರೆ.
ಈ ಯೋಜನೆ 100 ಲಕ್ಷ ಕೋಟಿ ರೂ. ಗಳದ್ದಾಗಿದ್ದು, ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಹಾಗೆಯೇ ದೇಶದ ಸಮಗ್ರ ಅಭಿವೃದ್ಧಿಗೆ ಇಲ್ಲಿನ ನಾಗರಿಕರೆಲ್ಲರೂ ಒಟ್ಟಾಗಿ ಶ್ರಮಿಸುವಂತೆ ಅವರು ಕರೆ ನೀಡಿದರು. ದೇಶದ ಸಂಪರ್ಕ ವ್ಯವಸ್ಥೆ ಹೆಚ್ಚಿಸಲು ಸುಧಾರಿತ ರೈಲು ಸೇವೆಗಳನ್ನು ಪ್ರಧಾನಿ ಘೋಷಿಸಿದರು.
ಈ ಯೋಜನೆಯು ಪ್ರಯಾಣದ ಎಲ್ಲಾ ಅಡೆತಡೆಗಳನ್ನು ದಾಟಿ ಸಮಯ ಉಳಿಕೆಗೆ ಅನುಕೂಲವಾಗಲಿದೆ ಮತ್ತು ಕೈಗಾರಿಕಾ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು. ಹೂಡಿಕೆದಾರರನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸುವ ನಿಟ್ಟಿನಲ್ಲಿಯೂ ಈ ಯೋಜನೆ ಮಹತ್ವ ಪಡೆಯಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಭಿವೃದ್ಧಿಯ ಈ ಹೊಸ ವಿಧಾನವು ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ. ತಂತ್ರಜ್ಞಾನ ಬೆಳವಣಿಗೆ ದೃಷ್ಟಿಯಿಂದಲೂ ಇದು ಹೆಚ್ಚು ಮಹತ್ವ ಪಡೆದಿದೆ ಎಂದರು.
ಜಾಗತಿಕವಾಗಿ ಸ್ಪರ್ಧೆ ಒಡ್ಡಲು, ಭವಿಷ್ಯದ ಆರ್ಥಿಕರ ವಲಯದ ಹೊಸ ಸಾಧ್ಯತೆಗಳನ್ನು ತೆರೆದುಕೊಳ್ಳಲು ಇದು ಅನುಕೂಲವಾಗಲಿದೆ. ಈ ಯೋಜನೆಯು ಭಾರತೀಯ ಕಂಪೆನಿಗಳಿಗೆ ವಿಶ್ವದರ್ಜೆಯ ಉತ್ಪನ್ನಗಳ ಉತ್ಪಾದನೆಯನ್ನು ಖಚಿತಪಡಿಸಿಕೊಳ್ಳುತ್ತದೆ ಎಂದು ಅವರು ತಿಳಿಸಿದರು.
ಹಾಗೆಯೇ ದೇಶದಲ್ಲಿ ಸುಧಾರಿತ ಜಲಮಾರ್ಗಗಳು, ರೈಲ್ವೆಗಳ ಅನುಷ್ಠಾನ ಘೋಷಿಸಿದರು. ದೇಶದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸಲು 75 ವಂದೇ ಭಾರತ್ ರೈಲುಗಳ ಆರಂಭ, ಉಡಾನ್ ಯೋಜನೆಯಡಿ ಸಂಪರ್ಕ ಸೌಲಭ್ಯ ಒದಗಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಿ ಮೋದಿ ಅವರು ಗೌರವ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.