ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಕೇಂದ್ರ ಸರ್ಕಾರದಿಂದ 54,061.73 ಕೋಟಿ ರೂ. ಮತ್ತು ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಂದ 31,733.17 ಕೋಟಿ ರೂ. ಹಣಕಾಸು ಹಂಚಿಕೆಯೊಂದಿಗೆ 2021-22 ರಿಂದ 2025-26 ರ ವರೆಗಿನ ಐದು ವರ್ಷಗಳ ಅವಧಿಗೆ ಶಾಲೆಗಳಲ್ಲಿ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಮುಂದುವರಿಸಲು ಅನುಮೋದನೆ ನೀಡಿದೆ.
ಆಹಾರ ಧಾನ್ಯಗಳ ಮೇಲೆ ಸುಮಾರು 45,000 ಕೋಟಿ ರೂ. ಹೆಚ್ಚುವರಿ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಆದ್ದರಿಂದ, ಒಟ್ಟು ಯೋಜನಾ ಆಯವ್ಯಯ 1,30,794.90 ಕೋಟಿ ರೂ. ಆಗಲಿದೆ 2021- 26 ರ ವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ಊಟ ಒದಗಿಸುವ ʻಪಿಎಂ ಪೋಷಣ್ʼ ಯೋಜನೆಯನ್ನು ಸಿಸಿಇಎ ಇಂದು ಅನುಮೋದಿಸಿದೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಸರ್ಕಾರಿ, ಅನುದಾನಿತ ಶಾಲೆಗಳ 1-8 ನೇ ತರಗತಿಗಳಲ್ಲಿ ಓದುತ್ತಿರುವ ಎಲ್ಲಾ ಶಾಲಾ ಮಕ್ಕಳನ್ನು ಒಳಗೊಂಡಿದೆ.
ಯೋಜನೆಯ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಾಥಮಿಕ ತರಗತಿಗಳ ಓದುತ್ತಿರುವ ಎಲ್ಲಾ 11.80 ಕೋಟಿ ಮಕ್ಕಳು ಮಾತ್ರವಲ್ಲದೆ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿನ ಪೂರ್ವ ಪ್ರಾಥಮಿಕ ಅಥವಾ ಬಾಲವಾಡಿಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ʻಸಮುದಾಯ ಭೋಜನʼ ಪರಿಕಲ್ಪನೆಯನ್ನು ವ್ಯಾಪಕವಾಗಿ ಪ್ರೋತ್ಸಾಹಿಸಲಾಗುವುದು. ʻಸಮುದಾಯ ಭೋಜನʼ ಎಂಬುದು ಸಮುದಾಯ ಪಾಲ್ಗೊಳ್ಳುವಿಕೆ ಕಾರ್ಯಕ್ರಮವಾಗಿದ್ದು, ಇದರಲ್ಲಿ ಜನರು ವಿಶೇಷ ಸಂದರ್ಭಗಳಲ್ಲಿ/ ಹಬ್ಬಗಳಲ್ಲಿ ಮಕ್ಕಳಿಗೆ ವಿಶೇಷ ಆಹಾರವನ್ನು ಒದಗಿಸುತ್ತಾರೆ.
ಮಕ್ಕಳಿಗೆ ಪ್ರಕೃತಿ ಮತ್ತು ತೋಟಗಾರಿಕೆಯ ಬಗ್ಗೆ ಪ್ರಾಥಮಿಕ ಅನುಭವ ನೀಡಲು ಶಾಲೆಗಳಲ್ಲಿ ʻಶಾಲಾ ಪೌಷ್ಟಿಕಾಂಶ ಉದ್ಯಾನʼಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತಿದೆ. ಈ ಉದ್ಯಾನಗಳ ಫಸಲನ್ನು ಹೆಚ್ಚುವರಿ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುವ ಯೋಜನೆಯಲ್ಲಿ ಬಳಸಲಾಗುತ್ತದೆ. ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ʻಶಾಲಾ ಪೋಷಕಾಂಶ ಉದ್ಯಾನʼಗಳನ್ನು ಅಭಿವೃದ್ಧಿಪಡಿಸಲಾಗಿದೆ. ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ.
ರಕ್ತಹೀನತೆಯ ಪ್ರಕರಣಗಳನ್ನು ಹೆಚ್ಚಾಗಿ ಹೊಂದಿರುವ ಜಿಲ್ಲೆಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಮಕ್ಕಳಿಗೆ ಪೂರಕ ಪೌಷ್ಟಿಕಾಂಶದ ಪದಾರ್ಥಗಳನ್ನು ಒದಗಿಸಲು ವಿಶೇಷ ಅವಕಾಶವನ್ನು ಈ ಯೋಜನೆಯಡಿ ಕಲ್ಪಿಸಲಾಗಿದೆ. ಸ್ಥಳೀಯವಾಗಿ ಲಭ್ಯವಿರುವ ಆಹಾರ ಪದಾರ್ಥಗಳು ಮತ್ತು ತರಕಾರಿಗಳನ್ನು ಆಧರಿಸಿ ಸಾಂಪ್ರದಾಯಿಕ ಪಾಕಪದ್ಧತಿ ಮತ್ತು ವಿನತೂನ ತಿನಿಸುಗಳ ತಯಾರಿಕೆಯನ್ನು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ಎಲ್ಲಾ ಹಂತಗಳಲ್ಲಿ ಅಡುಗೆ ಸ್ಪರ್ಧೆಗಳನ್ನು ಪ್ರೋತ್ಸಾಹಿಸಲಾಗುವುದು.
ʻಆತ್ಮನಿರ್ಭರ ಭಾರತ್ʼಗಾಗಿ ವೋಕಲ್ ಫಾರ್ ಲೋಕಲ್: ಯೋಜನೆಯ ಅನುಷ್ಠಾನದಲ್ಲಿ ರೈತರ ಉತ್ಪಾದಕ ಸಂಸ್ಥೆಗಳು (ಎಫ್ಪಿಒ) ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸಲಾಗುವುದು. ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲು ಸ್ಥಳೀಯವಾಗಿ ಬೆಳೆದ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ಬಳಸುವುದನ್ನು ಪ್ರೋತ್ಸಾಹಿಸಲಾಗುವುದು. ಪ್ರತಿಷ್ಠಿತ ವಿಶ್ವವಿದ್ಯಾಲಯಗಳು/ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಮತ್ತು ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳು (ಆರ್ಐಇ) ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ (ಡಿಇಟಿ) ತರಬೇತಿ ಹಂತದ ಶಿಕ್ಷಕರಿಂದ ಪ್ರಗತಿ ಮೇಲ್ವಿಚಾರಣೆ ಮತ್ತು ತಪಾಸಣೆಗಾಗಿ ಕ್ಷೇತ್ರ ಭೇಟಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.