ನವದೆಹಲಿ: ರಾಜ್ಯಗಳ ಬಂಡವಾಳ ವೆಚ್ಚವನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಸಕ್ತ ತಿಂಗಳಲ್ಲಿ ಕೇಂದ್ರವು ರಾಜ್ಯಗಳಿಗೆ ಮುಂಗಡ ಕಂತು ಸೇರಿಸಿ ಒಟ್ಟು 95,082 ಕೋಟಿ ರೂಪಾಯಿಗಳನ್ನು ತೆರಿಗೆ ಹಂಚಿಕೆಯಾಗಿ ಬಿಡುಗಡೆ ಮಾಡಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಾಮಾನ್ಯವಾಗಿ ನ.22ಕ್ಕೆ ರಾಜ್ಯಗಳಿಗೆ 47,541 ಕೋಟಿ ತೆರಿಗೆ ಹಣ ಹಂಚಲಾಗುತ್ತದೆ. ಆದರೆ ರಾಜ್ಯಗಳು ಬಂಡವಾಳ ವೆಚ್ಚಕ್ಕೆ ಹೆಚ್ಚು ಹಣ ಕೇಳಿದ್ದರಿಂದ ಈ ಬಾರಿ ಮುಂಗಡ ಹಣವನ್ನು ಸೇರಿಸಿ ದುಪ್ಪಟ್ಟು ಹಣ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸೋಮವಾರ ಕೋವಿಡ್ 2ನೇ ಅಲೆ ಬಳಿಕ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಚಿವೆ ಸಭೆ ನಡೆಸಿದರು, ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ರಾಜ್ಯಗಳ ಕೈಗೆ ಹೆಚ್ಚು ಹಣ ಬಂದಲ್ಲಿ ಅದನ್ನು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ವಿನಿಯೋಗಿಸಬಹುದು’ ಎಂದರು.
‘ಸದ್ಯ ಶೇ.41ರಷ್ಟು ತೆರಿಗೆಯನ್ನು 14 ಕಂತುಗಳಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದು ಮುಂಗಡ ಬಿಡುಗಡೆಯಾಗಿದ್ದು, ಮಾರ್ಚ್ನಲ್ಲಿ ಬದಲಾವಣೆ ಮಾಡಲಾಗುತ್ತದೆ’ ಎಂದು ಇದೇ ವೇಳೆ ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ತಿಳಿಸಿದರು.
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 15 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಜಮ್ಮು-ಕಾಶ್ಮೀರ ಲೆ.ಗವರ್ನರ್ ಮತ್ತು 3 ರಾಜ್ಯಗಳ ಉಪ ಮುಖ್ಯಮಂತ್ರಿಗಳು ಈ ವರ್ಚುವಲ್ ಸಭೆಯಲ್ಲಿ ಭಾಗಿಯಾಗಿದ್ದರು. ಉಳಿದ ರಾಜ್ಯಗಳ ಹಣಕಾಸು ಮಂತ್ರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.