ಬೆಂಗಳೂರು: ದೇಶದಲ್ಲಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದುನಿಂತಿದೆ. ಅತಿ ಹೆಚ್ಚು ಶಾಸಕರಿರುವ, ಅತಿ ಹೆಚ್ಚು ಲೋಕಸಭಾ ಸದಸ್ಯರಿರುವ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರಿರುವ ಅಂದರೆ 19 ಕೋಟಿಗೂ ಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.
ತುಮಕೂರಿನಲ್ಲಿ ಜನಸ್ವರಾಜ್ ಯಾತ್ರೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ವಿಧಾನಪರಿಷತ್ತಿನಲ್ಲಿ ಬಹುಮತ ಪಡೆಯಲು ಹೆಚ್ಚು ಸದಸ್ಯರನ್ನು ಚುನಾಯಿಸಬೇಕು ಎಂದು ಅವರು ಮನವಿ ಮಾಡಿದರು. 25ರ ಪೈಕಿ 15ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಗ್ರಾಮ ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಮಾತ್ರವಲ್ಲದೆ ದೇಶದೆಲ್ಲೆಡೆ ಒಂದು ದೊಡ್ಡ ಶಕ್ತಿಯಾಗಿ ಬೆಳೆದುಬಂದಿದೆ. ಈ ಸಮಾವೇಶಗಳಿಗೆ ಸಿಗುತ್ತಿರುವ ಅಭೂತಪೂರ್ವ ಬೆಂಬಲವೇ ಇದಕ್ಕೆ ಉದಾಹರಣೆ ಎಂದು ತಿಳಿಸಿದರು.
ದೇಶದಲ್ಲಿ ಯಾವುದೇ ಬಿಕ್ಕಟ್ಟು ಬಂದಾಗ ಅದನ್ನು ಪರಿಣಾಮಕಾರಿಯಾಗಿ ಎದುರಿಸುವ ಕೆಲಸವನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಮಾಡಿದೆ. ಕೈಗಾರಿಕೆಗಳಿಗೆ ನೆರವು, ಕೋವಿಡ್ ಪರಿಣಾಮಕಾರಿಯಾಗಿ ಎದುರಿಸಿದ್ದು, ಸ್ಥಳೀಯವಾಗಿಯೇ ಲಸಿಕೆ ವಿತರಣೆ, ಉಚಿತ ಲಸಿಕೆ ಮೂಲಕ ಲಕ್ಷಾಂತರ ಕೋಟಿ ಹಣವನ್ನು ವ್ಯಯಿಸಿ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಮೋದಿಯವರ ನಾಯಕತ್ವಕ್ಕೆ ದೇಶ ಮಾತ್ರವಲ್ಲದೆ ಜಗತ್ತೇ ಮನ್ನಣೆ ನೀಡಿದೆ ಎಂದು ವಿವರಿಸಿದರು.
ಕರ್ನಾಟಕದಲ್ಲೂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗಿದೆ. ಬಿಜೆಪಿ ಎಲ್ಲೆಡೆ ಬೆಳೆದುನಿಂತಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷವನ್ನು ದುರ್ಬೀನು ಹಾಕಿ ಹುಡುಕುವ ಸ್ಥಿತಿ ಇದೆ ಎಂದು ತಿಳಿಸಿದರು.
ಜನಧನ್ ಖಾತೆ, ಕಿಸಾನ್ ಸಮ್ಮಾನ್ ಮೂಲಕ 6 ಸಾವಿರ, ಇದೇ ಯೋಜನೆಯಡಿ ಯಡಿಯೂರಪ್ಪ ಅವರು 4 ಸಾವಿರ ರೂಪಾಯಿ ನೀಡಿದ್ದು ಇವೆಲ್ಲದಕ್ಕೆ ಸ್ಪಷ್ಟ ಉದಾಹರಣೆ. ಪಾರದರ್ಶಕವಾಗಿ ಹಣ ಫಲಾನುಭವಿಗಳನ್ನು ತಲುಪುತ್ತಿದೆ ಎಂದು ವಿವರಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನಸ್ವರಾಜ್ ಯಾತ್ರೆ ಮೂಲಕ ಜನಜಾಗೃತಿ, ಗ್ರಾಮ ಪಂಚಾಯಿತಿ ಮತ್ತಿತರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳನ್ನು ಒಗ್ಗೂಡಿಸುವ ಕಾರ್ಯ ನಡೆಯುತ್ತಿದೆ. ಕಳೆದ ವರ್ಷ 45 ಸಾವಿರಕ್ಕೂ ಹೆಚ್ಚು ಜನ ಬಿಜೆಪಿ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.