ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ ದರ ಕೊರೋನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕೊರೋನಾ ಸಂದರ್ಭದಲ್ಲಿ ರೀಲರ್ಗಳು ರೇಷ್ಮೆ ಗೂಡು ಖರೀದಿಸದ ಹಿನ್ನೆಲೆಯಲ್ಲಿ ರೇಷ್ಮೆ ದರ ಕುಸಿದಿತ್ತು. ಇವೆಲ್ಲದರ ಜೊತೆಗೆ ರೇಷ್ಮೆ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿಯಿಂದಾಗಿ ಸೂಕ್ತ ದರ ಸಿಗದೇ ರೇಷ್ಮೆ ಬೆಳೆಗಾರರು ವಂಚನೆಗೊಳಗಾಗುತ್ತಿದ್ದರು. ಆದರೆ, ಡಾ.ನಾರಾಯಣಗೌಡ ಅವರು ರೇಷ್ಮೆ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡರು.
ಸಚಿವ ಡಾ.ನಾರಾಯಣ ಗೌಡ ಅವರು ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರ ಹೊಲಗಳಿಗೆ ಹೋಗಿ ರೇಷ್ಮೆ ಬೆಳೆಗಾರರ ಜೊತೆ ಸಂವಾದ ನಡೆಸಿದ ಸಂದರ್ಭದಲ್ಲಿ ರೇಷ್ಮೆ ಮಾರುಕಟ್ಟೆಗಳಲ್ಲಿ ರೈತರಿಗೆ ಆಗುತ್ತಿದ್ದ ಅನ್ಯಾಯ, ದಲ್ಲಾಳಿಗಳ ಕಿರುಕುಳ, ಮೋಸ ಸೇರಿದಂತೆ ತಮಗಾಗುತ್ತಿದ್ದ ಸಮಸ್ಯೆ ಬಗ್ಗೆ ರೇಷ್ಮೆ ಬೆಳೆಗಾರರು ಸಚಿವರ ಗಮನಕ್ಕೆ ತಂದಿದ್ದರು.
ತಕ್ಷಣವೇ ಕಾರ್ಯಪ್ರವೃತ್ತರಾದ ಸಚಿವರು ರೇಷ್ಮೆ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿದ್ರು. ರೇಷ್ಮೆ ಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳ ಕಡಿವಾಣಕ್ಕೆ ಸಚಿವ ಡಾ.ನಾರಾಯಣಗೌಡ ಅವರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದರು. ಕೆಲವು ಸಿಬ್ಬಂದಿಯ ಕುಮ್ಮಕ್ಕಿನಿಂದ ಅವ್ಯವಹಾರಗಳು ನಡೆಸುತ್ತಿದ್ದ ದಲ್ಲಾಳಿಗಳಿಗೆ ಸಚಿವರು ಎಚ್ಚರಿಕೆ ನೀಡಿ ಕಡಿವಾಣ ಹಾಕಿದ್ದರು. ರೇಷ್ಮೆ ಗೂಡು ಕಳ್ಳತನ ತಪ್ಪಿಸಲು ರೇಷ್ಮೆ ಮಾರುಕಟ್ಟೆಯಲ್ಲಿ ಸಿಸಿಟಿವಿ ಅಳವಡಿಸುವ ಕ್ರಮಕೈಗೊಂಡು, ಪೊಲೀಸ್ ಇಲಾಖೆಯ ನೆರವಿನೊಂದಿಗೆ ಅಕ್ರಮಗಳು ನಡೆಯದಂತೆ ಕ್ರಮ ತೆಗೆದುಕೊಂಡಿದ್ದರು.
ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆಗೆ ತೆರಳುವಾಗ ಪೊಲೀಸರು ಹಾಗೂ ಹಲವರಿಂದ ಆಗುತ್ತಿದ್ದ ಕಿರುಕುಳ ತಪ್ಪಿಸಲು ವಿಶೇಷ ಗುರುತಿನ ಚೀಟಿ ನೀಡುವ ಐತಿಹಾಸಿಕ ನಿರ್ಧಾರ ಕೈಗೊಂಡು, ರಾಜ್ಯಾದ್ಯಂತ 1.38 ಲಕ್ಷ ಬೆಳೆಗಾರರಿಗೆ ವಿತರಿಸಲಾಗುತ್ತಿದೆ. ಭ್ರಷ್ಟಾಚಾರ ಹಾಗೂ ಅವ್ಯವಹಾರ ತಡೆಗಟ್ಟಲು ಇ – ಪೇಮೆಂಟ್ ಜಾರಿಗೆ ತರಲಾಗಿದೆ. ರೇಷ್ಮೆ ಗೂಡು ಮಾರಾಟಕ್ಕೆ ತೊಂದರೆ ಆಗದಂತೆ ರೇಷ್ಮೆ ಮಾರುಕಟ್ಟೆಗಳನ್ನು ವಿಸ್ತರಣೆಗೊಳಿಸುವ ಕ್ರಮಗಳನ್ನು ಕೈಗೊಂಡಿದ್ದಾರೆ
ಇದರ ಜೊತೆಗೆ ರೇಷ್ಮೆ ಬೆಳೆಗಾರರ ಜೊತೆ ಅವರ ಹೊಲದಲ್ಲೇ ಸಂವಾದ ನಡೆಸುವ ಮೂಲಕ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು.
ಸಚಿವ ಡಾ. ನಾರಾಯಣಗೌಡ ಅವರ ಈ ಎಲ್ಲಾ ದಿಟ್ಟ ಕ್ರಮಗಳಿಂದಾಗಿ ರೇಷ್ಮೆ ಬೆಳೆಗಾರರಿಗೆ ನೈಜ ಬೆಲೆ ಸಿಗಲು ಕಾರಣವಾಗಿದೆ. ಈ ಮೂಲಕ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಕೆಜಿ ರೇಷ್ಮೆ ಗೂಡು 785 ರೂಪಾಯಿ ಮುಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.