ನವದೆಹಲಿ: ಪ್ರಸ್ತುತ ನಡೆಯುತತಿರುವ ಚಳಿಗಾಲದ ಅಧಿವೇಶನದಿಂದ 12 ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಿದ ಕ್ರಮವನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಸಮರ್ಥಿಸಿಕೊಂಡಿದ್ದು, ಅಮಾನತು ಆದೇಶವನ್ನು ಹಿಂಪಡೆಯಬೇಕೆಂಬ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ವೆಂಕಯ್ಯ ನಾಯ್ಡು ಅವರು, ಕಳೆದ ಅಧಿವೇಶನದಲ್ಲಿ ನಡೆದ ಕಹಿ ಘಟನೆ ಇನ್ನೂ ಮಾಸಿಲ್ಲ. ಸದನದ ಕೆಲವು ಹಿರಿಯರು ಘಟನೆಯ ವಿರುದ್ಧವಾಗಿ ತಮ್ಮ ಆಕ್ರೋಶ ಹೊರಹಾಕುತ್ತಾರೆ, ಇಂತಹ ವರ್ತನೆಗಳನ್ನು ಸೂಕ್ತವಾಗಿ ನಿಭಾಯಿಸಲು ನನಗೆ ಸಹಾಯ ಮಾಡುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ ದುರದೃಷ್ಟವಶಾತ್ ಅದು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ವೆಂಕಯ್ಯ ನಾಯ್ಡು ಅವರಲ್ಲಿ ಸಂಸದರ ಅಮಾನತು ಆದೇಶ ಹಿಂಪಡೆಯುವಂತೆ ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ವೆಂಕಯ್ಯ ನಾಯ್ಡು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ಪರಿಗಣಿಸುವುದಿಲ್ಲ ಮತ್ತು ಅಮಾನತು ಹಿಂಪಡೆಯುವುದಿಲ್ಲ ಎಂದು ಹೇಳಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸದಸ್ಯರು ಸದನದಿಂದ ಹೊರನಡೆದು ಪ್ರತಿಭಟನೆ ನಡೆಸಿದ್ದಾರೆ.
ಈ ನಡುವೆ 12 ರಾಜ್ಯಸಭಾ ಸದಸ್ಯರ ಅಮಾನತು ಆದೇಶ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಲೋಕಸಭೆಯಲ್ಲೂ ಗದ್ದಲವುಂಟಾಗಿದ್ದು, ವಿಪಕ್ಷಗಳು ಸದನವನ್ನು ಬಹಿಷ್ಕರಿಸಿ, ಹೊರನಡೆದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.