ಬೆಂಗಳೂರು : ‘ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿರುವ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಜನಸಂಘದ ಪ್ರಭಾವಿ ನಾಯಕರಾಗಿ, ವಕೀಲರಾಗಿ, ಪುತ್ತೂರು ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪ್ಕೊದ ಅಧ್ಯಕ್ಷರಾಗಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರಿನ ಶಾಸಕರಾಗಿ, ಭಾರತೀಯ ಜನತಾ ಪಾರ್ಟಿಯ ಮುಂಚೂಣಿಯ ಮುಖಂಡರಾಗಿ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ರಾಮ ಭಟ್ ಅವರು ತನ್ನ ಇಳಿ ವಯಸ್ಸಿನಲ್ಲಿಯೂ ಯುವಕರಂತೆ ಚಟುವಟಿಕೆಯಿಂದ ಕೂಡಿದ್ದರು. ಬಿಜೆಪಿ ವರಿಷ್ಠರಾಗಿದ್ದ ಲಾಲ್ಕೃಷ್ಣ ಅಡ್ವಾಣಿ ಸಹಿತ ಹಲವರ ಒಡನಾಡಿಯಾಗಿದ್ದ ರಾಮ ಭಟ್ಟರು ತುರ್ತು ಪರಿಸ್ಥಿತಿ ವಿರೋಧಿಸಿ ಹೋರಾಟ ನಡೆಸಿ ಜೈಲು ಸೇರಿದ್ದರು. 90ರ ಹರೆಯದಲ್ಲಿಯೂ ಅಗಾಧ ನೆನಪಿನ ಶಕ್ತಿ ಹೊಂದಿದ್ದ ರಾಮ ಭಟ್, ತಮ್ಮ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಜೀವನದ ಕುರಿತು ಮೆಲುಕು ಹಾಕುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಉರಿಮಜಲು ಎಂಬಲ್ಲಿಯ ಅವಿಭಕ್ತ ಹವ್ಯಕ ಕುಟುಂಬದ ಕೆ. ರಾಮ ಭಟ್ಟರವರು ತನ್ನ ಪ್ರೌಢಶಿಕ್ಷಣದ ವೇಳೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಸ್ವಯಂಸೇವಕರಾಗಿದ್ದವರು. ಆರ್.ಎಸ್.ಎಸ್. ಮೂಲಕ ಪುತ್ತೂರನ್ನು ಹಿಂದುತ್ವದ ಭದ್ರಕೋಟೆ ಮಾಡಲು ಅಡಿಪಾಯ ಹಾಕಿದ್ದವರು. ಜನಸಂಘ, ಬಿಜೆಪಿ ಮೂಲಕ ಪಕ್ಷವನ್ನು ಭದ್ರವಾಗಿ ಬೆಳೆಸಿದವರು. ವಕೀಲರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪ್ಕೊದ ಅಧ್ಯಕ್ಷರಾಗಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಧಾರಸ್ತಂಭವಾಗಿ, ವಿದ್ಯಾಸಂಸ್ಥೆಗಳ ನಿರ್ಮಾತೃವಾಗಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾರ್ಯ ನಿರ್ವಹಿಸಿದ್ದ ರಾಮ ಭಟ್ರವರು ಬಿಜೆಪಿಯ ಭೀಷ್ಮ ಎಂದೇ ಜನ ಜನಿತವಾಗಿದ್ದವರು ಎಂದು ಸ್ಮರಿಸಿದ್ದಾರೆ.
ಮೃತರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲಿ ಎಂದು ನಳಿನ್ ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.