
ಬೆಂಗಳೂರು: ರಾಜ್ಯದ ವಿದ್ಯುದ್ದೀಕರಣ ಮತ್ತು ನಷ್ಟ ತಗ್ಗಿಸಲು RDSS ವಿಶೇಷ ಯೋಜನೆಯಡಿ ರಾಜ್ಯಕ್ಕೆ 8 ಸಾವಿರದ 298 ಕೋಟಿ ರೂಪಾಯಿ ಅನುದಾನ ನೀಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಯಲ್ಲಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆ, ಶಾಸಕ ಅವಿನಾಶ್ ಜಾಧವ್ ಅವರ ವಿದ್ಯುತ್ ಸಮಸ್ಯೆ ಕುರಿತ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವರು, ರಾಜ್ಯದ ವಿದ್ಯುತ್ ಆಧುನೀಕರಣ ಮತ್ತು ನಷ್ಟ ತಗ್ಗಿಸಲು ಕೇಂದ್ರ RDSS ವಿಶೇಷ ಯೋಜನೆ ಮೂಲಕ ರಾಜ್ಯಕ್ಕೆ 8 ಸಾವಿರದ 298 ಕೋಟಿ ರೂಪಾಯಿ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ ಎಂದರು.
ಇದರಲ್ಲಿ ಉತ್ತರ ಕರ್ನಾಟಕದ ವಿದ್ಯುತ್ ಆಧುನೀಕರಣಕ್ಕೆ ಹೆಚ್ಚಿನ ಅನುದಾನವನ್ನು ಬಳಸಿಕೊಳ್ಳುವುದಾಗಿ ಸಚಿವರು ಮಾಹಿತಿ ನೀಡಿದರು.
NEP ಕುರಿತು ಸದಸ್ಯ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಹಂತ ಹಂತವಾಗಿ NEPಯನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಚಿಸಲಾಗಿರುವ ಕಾರ್ಯಪಡೆ ಹಲವು ಬಾರಿ ಸಭೆಗಳನ್ನು ನಡೆಸಿದ್ದು, ಶೀಘ್ರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು.
2030ರ ವೇಳೆಗೆ ಎನ್ ಇಪಿ ಜಾರಿಗೊಳಿಸಲು ಕೇಂದ್ರ ಸೂಚಿಸಿದೆ. ಇದರನ್ವಯ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಲವು ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ಈ ಸಂಬಂಧ ಶಿಕ್ಷಕರಿಗೆ ಅಗತ್ಯತರಬೇತಿಯನ್ನು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಪೂರ್ವ ತಯಾರಿ ಇಲ್ಲದೆ NEP ಜಾರಿಗೊಳಿಸುವುದಿಲ್ಲ ಎಂದರು.
ಪೂರ್ವ ಪ್ರಾಥಮಿಕ ತರಗತಿಗಳನ್ನು ಅಂಗನವಾಡಿಯೊಂದಿಗೆ ವಿಲೀನಗೊಳಿಸುವ ಕುರಿತಂತೆಯೂ ಚಿಂತಿಸಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಈಗಾಗಲೇ ಅಂಗನವಾಡಿ ಶಿಕ್ಷಕರಿಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಾಸಕ ಶ್ರೀನಿವಾಸ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕಾಲೇಜು ಮೇಲ್ದರ್ಜೆಗೆ ಈಗಾಗಲೇ 30 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕೆಲವು ಅಡಚಣೆಗಳಿಂದ ಮೇಲ್ದರ್ಜೆಗೇರಿಸುವ ಕಾರ್ಯ ಕುಂಠಿತವಾಗಿದೆ. ಶೀಘ್ರ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಶ್ನೋತ್ತರ ಬಳಿಕ ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, 2021ನೇ ಸಾಲಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಿದರು.
ಬಳಿಕ, 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ ಹಾಗೂ2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣೆ, ನಿಯಂತ್ರಣ ಎರಡನೇ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



