ಬೆಂಗಳೂರು: ಕುಡಿಯುವ ನೀರು ಪೂರೈಕೆಗೆ ನಲ್ಲಿ ಅಳವಡಿಕೆ ಮತ್ತು ಮೀಟರ್ ಅಳವಡಿಕೆ ಮೂಲಕ ನೀರು ವ್ಯರ್ಥವಾಗುವುದನ್ನು ತಪ್ಪಿಸುವುದರ ಜೊತೆಗೆ ಪಂಚಾಯಿತಿಗಳಿಗೆ ಆದಾಯವೂ ವೃದ್ಧಿಯಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಹೇಳಿದರು.
ಸಮ್ಮೇಳನದಲ್ಲಿ ಜಲ ಜೀವನ್ ಮಿಷನ್ ಕುರಿತು ಪ್ರಗತಿ ಪರಿಶೀಲನೆ ನಡೆಯುತ್ತಿದ್ದಾಗ ಸಚಿವರು ಮಧ್ಯ ಪ್ರವೇಶಿಸಿ ಮಾತನಾಡುತ್ತಿದ್ದರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಹಲಗಲಿ ಗ್ರಾಮದಲ್ಲಿ ಕಳೆದ 7-8 ವರ್ಷಗಳ ಹಿಂದೆ, ಪ್ರತಿನಿತ್ಯ 15 ಲಕ್ಷ ಲೀಟರ್ ನೀರು ಬಳಕೆಯಾಗುತ್ತಿತ್ತು. ಆದರೆ, ನಳ ಸಂಪರ್ಕ ಮತ್ತು ಮೀಟರ್ ಅಳವಡಿಕೆ ಮೂಲಕ ಈಗ ಕೇವಲ 5 ಲಕ್ಷ ಲೀಟರ್ ನೀರು ಮಾತ್ರ ಬಳಕೆಯಾಗುತ್ತಿದ್ದು, ಪಂಚಾಯಿತಿಗೆ 10 ಲಕ್ಷ ರೂಪಾಯಿ ಆದಾಯ ಗಳಿಕೆಯಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಬಾಗಲಕೋಟೆ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೂಬಾಲನ್ ಅವರು ಜಲ ಜೀವನ್ ಮಿಷನ್ ಪ್ರಗತಿಯನ್ನು ವಿವರಿಸಿ, ಜಿಲ್ಲೆಯಲ್ಲಿ 26.12.2021ರವರೆಗೆ 108% ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು. 2021-22ನೇ ಸಾಲಿನ 337 ಯೋಜನೆಗಳಲ್ಲಿ 293 ಯೋಜನೆಗಳು ಪೂರ್ಣಗೊಂಡಿದ್ದು ಶೇ.77% ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ಕೈಗೆತ್ತಿಕೊಂಡಿದ್ದ 48 ಗ್ರಾಮಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು. ಇನ್ನುಳಿದ 147 ಹಳ್ಳಿಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಜಲ ಜೀವನ್ ಮಿಷನ್ ಪ್ರಗತಿಯನ್ನು ಮಾನ್ಯ ಮುಖ್ಯಮಂತ್ರಿಗಳು ಪ್ರಶಂಸಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೂಬಾಲನ್ ಅವರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.