ಬೆಂಗಳೂರು: ಆರ್ಥಿಕವಾಗಿ, ಆಡಳಿತದ ದೃಷ್ಟಿಯಿಂದ 2022 ಸವಾಲಿನ ವರ್ಷವಾಗಿದ್ದು, ಇದನ್ನು ಎಲ್ಲರೂ ಒಗ್ಗೂಡಿ ಸಮರ್ಥವಾಗಿ ಎದುರಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹೊಸವರ್ಷಧ ಸಂದರ್ಭದಲ್ಲಿ ಅಧಿಕಾರಿಗಳಿಗೆ ಶುಭಾಶಯ ಕೋರಿ ಮಾತನಾಡಿದರು. ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ. ಜೊತೆಗೆ ಆರ್ಥಿಕತೆಯೂ ಮುನ್ನಡೆಯಬೇಕಾಗಿದೆ. ಕೇವಲ ನಿರ್ಬಂಧಗಳನ್ನು ಜಾರಿಗೊಳಿಸಿ ಸುಮ್ಮನಿರಲಾಗದು. ನಾವು ಈ ಸವಾಲನ್ನು ವಿಭಿನ್ನ ಕಾರ್ಯತಂತ್ರದಿಂದ ಎದುರಿಸಬೇಕು. ಇದಕ್ಕಾಗಿ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.
ನಿಮ್ಮ ಇಲಾಖೆಯಲ್ಲಿ ಅನವಶ್ಯಕ ವೆಚ್ಚ ಕಡಿತಗೊಳಿಸಿ. ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯದ ಆರ್ಥಿಕತೆಯನ್ನು ಉತ್ತಮ ಪಡಿಸಬೇಕು.
ಸಕಾರಾತ್ಮಕ ಭಾವನೆಯಿಂದ ಈ ಸವಾಲು ಎದುರಿಸಬೇಕು. ಉತ್ತಮ ಚಿಂತನೆ ಉತ್ತಮ ಕೆಲಸಗಳಿಗೆ ಎಡೆ ಮಾಡುತ್ತವೆ. ಉತ್ತಮ ಕೆಲಸಗಳು ಉತ್ತಮ ಜೀವನಕ್ಕೆ ದಾರಿ. ಆದ್ದರಿಂದ ಸಕಾರಾತ್ಮಕವಾಗಿ ಯೋಚಿಸಿ, ನಿಮ್ಮ ಕೆಲಸವನ್ನು ಪ್ರೀತಿಸಿ. ಆಗ ಫಲಿತಾಂಶ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದರು.
ಕಳೆದ 5 ತಿಂಗಳಲ್ಲಿ ಆಡಳಿತದಲ್ಲಿ ಅತಿ ಕಡಿಮೆ ಹಸ್ತಕ್ಷೇಪ ಮಾಡಿದ ಸರ್ಕಾರ ನಮ್ಮದು. ನೀವು ಸ್ವತಃ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ನಿಮ್ಮ ಅನುಭವದ ಫಲ ರಾಜ್ಯದ ಬಡ ಜನತೆಗೆ ಅನುಕೂಲ ಮಾಡಿಕೊಡಲಿ ಎಂದು ಹಾರೈಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.