ಬೆಂಗಳೂರು : ನಮ್ಮ ಗುರಿ ಒಂದೇ, ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಮಾಜದಲ್ಲಿ ಸ್ವಾಭಿಮಾನದ ಸ್ಥಾನ ಸಿಗಬೇಕು. ಸಮಾಜದ ಅಭಿವೃದ್ಧಿಯಲ್ಲಿ ಪಾಲು ಸಿಗಬೇಕೆನ್ನುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸವನ್ನು ಮಾಡುವ ಭರವಸೆಯನ್ನು ಕನ್ನಡದ ಮಹಾಜನತೆಗೆ ಈಗಾಗಲೇ ನೀಡಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು.
ಅವರು ಇಂದು ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು’ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಪಕ್ಷದ ವರಿಷ್ಠರು, ಶಾಸಕರು, ಕರ್ನಾಟಕದ ಮಹಾಜನತೆಯ ಆಶಯದಂತೆ ಕರ್ನಾಟಕದ ಅಧಿಕಾರ ವಹಿಸಿಕೊಂಡು 6 ತಿಂಗಳು ಕಳೆದಿದೆ. ಆರು ತಿಂಗಳಲ್ಲಿ ಹಲವಾರು ಜನಪರವಾದ ಕೆಲಸಗಳನ್ನು ಸರ್ಕಾರ ಮಾಡಿದೆ. ಮುಂಬರುವ ದಿನಗಳಲ್ಲಿ ಭವ್ಯ ಭವಿಷ್ಯ ಇರುವ ಕರ್ನಾಟಕವನ್ನು ಕಟ್ಟುವ ತೀರ್ಮಾನ ಮಾಡಿದ್ದೇವೆ. ನವ ಭಾರತಕ್ಕಾಗಿ ನವ ಕರ್ನಾಟಕ ಎಂಬ ಧ್ಯೇಯವನ್ನಿಟ್ಟುಕೊಂಡು ಸರ್ಕಾರ ಕೆಲಸ ಮಾಡುತ್ತಿದೆ. ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು, ಪಕ್ಷದ ಎಲ್ಲಾ ವರಿಷ್ಠರು, ಪದಾಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಿದ್ದಾರೆ. ಮಾಧ್ಯಮದ ಸ್ನೇಹಿತರೂ ಕೂಡ ಕೋವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ವಿಚಾರದಲ್ಲಿ ಸಂಪೂರ್ಣವಾದ ಸಹಕಾರವನ್ನು ಕೊಟ್ಟಿದ್ದಾರೆ.
ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು, ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಷಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದೇನೆ. ಎಲ್ಲರ ಶುಭಾಶಯಗಳು ರಾಜ್ಯವನ್ನು ಸುಭಿಕ್ಷತೆಯತ್ತ ತೆಗೆದುಕೊಂಡು ಹೋಗಲು, ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಲು ವಿಶೇಷವಾಗಿ ರಾಜ್ಯ ದಲ್ಲಿ ಬಡವರು, ರೈತರು ಮತ್ತು ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಮತ್ತು ಯುವಕರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಲು ದೊಡ್ಡ ಶಕ್ತಿ ಮತ್ತು ಪ್ರೇರಣೆಯನ್ನು ನೀಡಿದೆ ಎಂದರು.
ಜನರ ಸಮಸ್ಯೆಗಳನ್ನು ನಮಗೆ ತಲುಪಿಸಲು ಬಹಳ ದೊಡ್ಡ ಪ್ರಯತ್ನವನ್ನು ಯಶಸ್ವಿಯಾಗಿ ಮಾಡಿದ ಮಾಧ್ಯಮದ ಸಂಸ್ಥೆಗಳಿಗೆ ಹಾಗೂ ಸ್ನೇಹಿತರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಮುಖ್ಯಮಂತ್ರಿ @BSBommai ಅವರು ತಮ್ಮ ನೇತೃತ್ವದ ಸರ್ಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ 'ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
1/2#NewKarnataka4NewIndia pic.twitter.com/dsaE7PaW4C— CM of Karnataka (@CMofKarnataka) January 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.