ಬೆಳ್ತಂಗಡಿ : ಕೇಂದ್ರ ಸರಕಾರದ ಉದ್ದೇಶಿತ ಕಾರ್ಮಿಕ ನೀತಿಗಳ ತಿದ್ದುಪಡಿ ವಿರೋಧಿಸಿ ನಾನಾ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಭಾಗಶಃ ಯಶಸ್ವಿಯಾಗಿದ್ದು ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ.
ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗಳು, ಖಾಸಗಿ ಬಸ್ಗಳು, ಅಟೋ, ಟೆಂಪೋ ಸೇರಿದಂತೆ ಯಾವುದೇ ವಾಹನಗಳು ರಸ್ತೆಗಿಳಿಯಲಿಲ್ಲ. ಕೆಲವೆಡೆ ಮಾತ್ರ ಅಟೋಗಳು ಓಡಾಟ ನಡೆಸಿದೆ. ಬೆಳ್ತಂಗಡಿ ನಗರ ಪ್ರದೇಶದ ಅಂಗಡಿ-ಮುಗ್ಗಟ್ಟುಗಳು ಸಂಪೂರ್ಣ ಮುಚ್ಚಿದ್ದವು. ಆದರೆ ಗ್ರಾಮೀಣ ಭಾಗದಲ್ಲಿ ಅಂಗಡಿಗಳು ತೆರೆದಿದ್ದವು. ಅಟೋಗಳು, ಜೀಪುಗಳು ಓಡಾಟ ನಡೆಸಿದ್ದವು. ಉಜಿರೆ, ಗುರುವಾಯನಕೆರೆ ಮೊದಲಾದ ಪ್ರದೇಶಗಳಲ್ಲಿ ಬಂದ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬ್ಯಾಂಕ್ಗಳು ವ್ಯವಹಾರ ಸ್ಥಗಿತಗೊಳಿಸಿತ್ತು.
ಬೆಳ್ತಂಗಡಿ ನಗರ ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ವಾಹನಗಳು ರಸ್ತೆಗಿಳಿಯದ ಕಾರಣ ಜನ ಸಂಚಾರವಿರಲಿಲ್ಲ. ನಗರದ ಎಲ್ಲಾ ಅಂಗಡಿಗಳು ಬಂದ್ ಸಂಪೂರ್ಣ ಬೆಂಬಲ ಘೋಷಿಸಿತ್ತು.
ಬಸ್ ಕಲ್ಲು : ಭಟ್ಕಳ ಕಡೆಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಗುರುವಾಯನಕೆರೆ ಸಮೀಪ ಮೇಲಂತಬೆಟ್ಟು ಕ್ರಾಸ್ ಎಂಬಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಬಸ್ಸಿನ ಗಾಜು ಪುಡಿಯಾಗಿಯಾಗಿದೆ. ಯಾರಿಗೂ ಹಾನಿ ಸಂಭವಿಸಿಲ್ಲ. ಬಸ್ ಚಾಲಕ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಅದೇ ರೀತಿ ಸರಕು ಹೊತ್ತೊಯ್ಯುತ್ತಿದ್ದ ಲಾರಿಗೂ ಕಿಡಿಗೇಡಿಗಳು ಕಲ್ಲು ಎಸೆದಿರುವುದಾಗಿಯೂ ತಿಳಿದುಬಂದಿದೆ. ಬೇರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಪೋಲಿಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತು ಮಾಡಲಾಗಿತ್ತು. ಅಲ್ಲಲ್ಲಿ ಪೋಲಿಸರನ್ನು ನಿಯೋಜಿಸಲಾಗಿತ್ತು. ಮುಷ್ಕರದ ಹಿನ್ನಲೆಯಲ್ಲಿ ರಾಜ್ಯ ಹಾಗೂ ಅಂತರ್ ರಾಜ್ಯಕ್ಕೆ ಧರ್ಮಸ್ಥಳ ಡಿಪೋದಿಂದ ಹೊರಡುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳನ್ನು ಸ್ಥಗಿತಗೊಳಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.