ನವದೆಹಲಿ: 2024ರ ವೇಳೆಗೆ ಭಾರತದ ರಸ್ತೆ ಜಾಲ ಮತ್ತು ಮೂಲಸೌಕರ್ಯ ವ್ಯವಸ್ಥೆ ಅತ್ಯಾಧುನಿಕವಾಗಿ ಮೇಲ್ದರ್ಜೆಗೆ ಏರಲಿದೆ ಎಂದು ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿಂದು ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರ ನೀಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ್ ಹಾಗೂ ಶಕ್ತಿಶಾಲಿ ಭಾರತ ನಿರ್ಮಾಣ ಪರಿಕಲ್ಪನೆಯಲ್ಲಿ ರಸ್ತೆ ಸಾರಿಗೆ ಮತ್ತು ಮೂಲಸೌಕರ್ಯ ವಲಯ ಮಹತ್ವದ ಪಾತ್ರ ನಿರ್ವಹಿಸಲಿವೆ ಎಂದರು.
ಇನ್ನೆರಡು ವರ್ಷಗಳಲ್ಲಿ ದೇಶದ ರಸ್ತೆ ಸಂಪರ್ಕ ಜಾಲ ಅಮೆರಿಕ ದೇಶದಂತಹ ಮುಂದುವರೆದ ರಾಷ್ಟ್ರಗಳಿಗೆ ಸಮನಾಗಲಿದೆ.ಇದರಿಂದ ಸಾರಿಗೆ ಸಂಪರ್ಕ ಉತ್ತಮಗೊಳ್ಳುವುದರ ಜೊತೆಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದ್ದು, ಕೃಷಿ ಮತ್ತು ಪ್ರವಾಸೋದ್ಯಮ ವಲಯಗಳೂ ಅಭಿವೃದ್ಧಿಗೊಳ್ಳಲಿವೆ ಎಂದು ಸಚಿವರು ತಿಳಿಸಿದರು.
ಜಮ್ಮು-ಕಾಶ್ಮೀರ, ಲಡಾಕ್ ನಲ್ಲಿ ರಸ್ತೆ ಅಭಿವೃದ್ಧಿಗಾಗಿ 7 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಲಾಗಿದ್ದು, ಲಡಾಕ್ ಮತ್ತು ಲೇಹ್ ನಡುವೆ ಝೋಜಿಲಾ ಸುರಂಗ 2024ರೊಳಗೆ ಪೂರ್ಣಗೊಳ್ಳಲಿದೆ. ಮನಾಲಿಯಲ್ಲಿ ನಿರ್ಮಿಸಲಾಗಿರುವ ಅಟಲ್ ಸುರಂಗದಿಂದಾಗಿ ಪ್ರಯಾಣ ಅವಧಿ ಗಣನೀಯ ಇಳಿಕೆಯಾಗಿದ್ದು, ಸಾರಿಗೆ ಸಂಪರ್ಕ ಉತ್ತಮಗೊಂಡಿದೆ ಎಂದು ಅವರು ತಿಳಿಸಿದರು.
ಪಶುಪಾಲನೆ ಮತ್ತು ಹೈನುಗಾರಿಕೆ ಖಾತೆ ಸಚಿವ ಪುರುಷೋತ್ತಮ ರೂಪಾಲ , ಹವಾಮಾನ ವೈಪರಿತ್ಯ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಮತ್ಸ್ಯಕೃಷಿ ಉತ್ಪಾದನೆ ಕಡಿಮೆಯಾಗಿದ್ದು, ಈ ವಲಯಕ್ಕೆ ಉತ್ತೇಜನ ನೀಡಲು ನದಿ ಮತ್ಯ್ಯಗಾರಿಕೆ- ರಿವರ್ ರಾಂಚಿಂಗ್ ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು, ಮಹತ್ವಾಕಾಂಕ್ಷೆಯೊಂದಿಗೆ ಕೃಷಿ ಮತ್ತು ಪಶುಪಾಲನೆ ವಲಯದಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದು, ರೈತರಿಗೆ ನೀಡುವ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪಶುಪಾಲಕರು ಮತ್ತು ಮೀನುಗಾರರಿಗೂ ವಿಸ್ತರಿಸಲಾಗಿದೆ ಎಂದು ಸಚಿವ ರೂಪಾಲ ತಿಳಿಸಿದರು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಗ್ರಾಮೀಣ ಭಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಹಲವು ಕ್ರಮ ಕೈಗೊಳ್ಳಲಾಗಿದೆ. ಸಕಾಲದಲ್ಲಿ ವಿದ್ಯಾರ್ಥಿ ವೇತನ ನೀಡಲು ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಪೋರ್ಟಲ್ ಆರಂಭಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಬಾಕಿ ಇದ್ದ 9 ಸಾವಿರದ 400 ಕೋಟಿ ರೂಪಾಯಿ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದ್ದು, ವಿವಿಧ ರಾಜ್ಯಗಳು ತಮ್ಮದೇ ನೀತಿ ಅನುಸಾರ ವಿದ್ಯಾರ್ಥಿ ವೇತನ ನೀಡಲು ಅವಕಾಶ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.