ಬೆಂಗಳೂರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಕನಸಿನಂತೆ ಕ್ರೀಡೆಯನ್ನು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮವಹಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಡಾ.ನಾರಾಯಣಗೌಡ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಯಶಸ್ವಿಗೊಳಿಸಲು ನಮ್ಮ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದು, ದೇಶದ ಹಲವು ವಿವಿಗಳಿಂದ 8000 ಕ್ರೀಡಾಪಟುಗಳು, ಸಿಬ್ಬಂದಿ ಬಂದಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಾರತದಲ್ಲಿ ಕ್ರೀಡೆಯನ್ನು ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಎಂಬುಂದು ಮೋದಿಯವರ ಕನಸು. ಮೋದಿಯವರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವನಾದ ಮೇಲೆ ಇಲಾಖೆ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಬಜೆಟ್ ಅನುದಾನದಲ್ಲಿ ಶೇಕಡಾ 100 ರಷ್ಟು ಪ್ರಗತಿ ಸಾಧಿಸಲಾಗಿದೆ. ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆ ಪುನಾರಂಭ ಮಾಡಲಾಗಿದೆ. ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತಿದೆ. ಸಿದ್ದಿ ಜನಾಂಗದ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ನೂತನ ಯುವ ನೀತಿ ರೂಪಿಸಲು ಡಾ.ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಉತ್ತಮ ಯುವ ನೀತಿಯನ್ನು ರೂಪಿಸಲಾಗುತ್ತದೆ. ಸರ್ಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2 % ಮೀಸಲಾತಿ ಮತ್ತು ಕ್ರೀಡಾ ಇಲಾಖೆಯಲ್ಲಿ 50 % ಮೀಸಲಾತಿ ಜಾರಿಗೆ ಪ್ರಯತ್ನಿಸಲಾಗುತ್ತಿದೆ. ಇದರ ಜೊತೆಗೆ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಯಲಹಂಕದಲ್ಲಿ 100 ಎಕರೆ ಜಾಗ ಗುರುತಿಸಲಾಗಿದೆ. ಮಾಜಿ ಕುಸ್ತಿಪಟುಗಳ ಮಾಸಾಶನ ಹೆಚ್ಚಳ. ನರೇಗಾ ಯೋಜನೆಯಲ್ಲಿ ಗ್ರಾಮೀಣ ಭಾಗದಲ್ಲಿ ಕ್ರೀಡಾ ಅಂಕಣ ನಿರ್ಮಿಸಲು ಸೂಚಿಸಲಾಗಿದೆ. ಕಂಠೀರವ ಕ್ರೀಡಾಂಗಣದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಹೊಸ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇದರ ಜೊತೆಗೆ ರೇಷ್ಮೆ ಇಲಾಖೆಯಲ್ಲೂ ಸುಧಾರಣೆಗೆ ಹಲವು ಕ್ರಮವಹಿಸಲಾಗಿದೆ. ರೇಷ್ಮೆ ಗೂಡಿಗೆ ದಾಖಲೆ ಪ್ರಮಾಣದಲ್ಲಿ ಬೆಲೆ ಸಿಕ್ತಿದೆ. 1 ಕೆಜಿ 1200 ರೂಪಾಯಿವರೆಗೂ ಬೆಲೆ ಸಿಕ್ಕಿದೆ. ಸದ್ಯ ಸರಾಸರಿ ಕೆಜಿಗೆ 800 ರೂ ಸಿಕ್ತಿದ್ದು, ಒಂದು ಕೆಜಿ ಸಿಲ್ಕ್ಗೆ 5500 ರೂ.ಸಿಕ್ತಿದೆ. 1.39 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ, ಪಾಸ್ಬುಕ್ ನೀಡಲಾಗಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ರೇಷ್ಮೆ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಲಾಗಿದೆ. ರಾಮನಗರದಲ್ಲಿ ಸುಮಾರು 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತದೆ. ಹಾವೇರಿ ಮತ್ತು ಕಲಬುರಗಿಯಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲಾಗುತ್ತದೆ. ರಾಮನಗರ ಮಾದರಿಯಲ್ಲಿ ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ಉನ್ನತಿಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಹ್ಲಾದ್ ಜೋಷಿಯವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಇದೇ ವೇಳೆ ಹಳೇ ಮೈಸೂರು ಭಾಗದಲ್ಲಿರೋ ನಾಯಕರನ್ನ ಬಿಜೆಪಿಗೆ ಕರೆತರುವ ಬಗ್ಗೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ. ನಾರಾಯಣಗೌಡ ಅವರು, ಹಳೆ ಮೈಸೂರು ಭಾಗದಲ್ಲಿ ಶಾಸಕರನ್ನ ಕರೆತರ್ತೀವಿ. ಮಂಡ್ಯದಲ್ಲಿ ನನ್ನಿಂದಲೇ ಖಾತೆ ಓಪನ್ ಆಗಿದೆ. ಮುಂದಿನ ಚುನಾವಣೆಯಲ್ಲಿ ನಾಲ್ಕರಿಂದ ಐದು ಎಂಎಲ್ಎ ಹಾಗೂ ಎಂಪಿಯನ್ನು ಗೆಲ್ಲಿಸಿಕೊಳ್ಳುತ್ತೇವೆ. ನಮ್ಮ ಜೊತೆ ಯಾರು ಸಂಪರ್ಕದಲ್ಲಿದ್ದಾರೆ ಅಂತ ಸ್ವಲ್ಪ ದಿನದಲ್ಲೇ ಗೊತ್ತಾಗುತ್ತೆ. ಹೈಕಮಾಂಡ್ ಏನ್ ಹೇಳುತ್ತೋ ಅದೇ ಫೈನಲ್ ಎಂದು ಸಚಿವ ಡಾ.ನಾರಾಯಣಗೌಡ ಅವರು ಉತ್ತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.