ಬೆಂಗಳೂರು: ರಾಜ್ಯದ ಎಲ್ಲಾ ಕಂದಾಯ ವಿಭಾಗಗಳ ತಲಾ 100 ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನು ಆಗಸ್ಟ್ ಮಾಹೆಯೊಳಗೆ ವಿತರಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕೃಷಿ ಜಮೀನು ಮತ್ತು ಇತರೆ ಸ್ವತ್ತುಗಳ ಡ್ರೋನ್ ಆಧಾರಿತ ಸರ್ವೆ ಕಾರ್ಯವನ್ನು ಕೈಗೊಂಡು ದಾಖಲೆಗಳ ಡಿಜಿಟಲೀಕರಣವಾಗಬೇಕು. ಪೋಡಿ ಕೆಲಸಗಳು ಸೂಕ್ತವಾಗಿ ಆಗಬೇಕು ಎಂದು ಅವರು ತಿಳಿಸಿದರು.
ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ 59.45 ಲಕ್ಷ ಫಲಾನುಭವಿಗಳಿಗೆ ನೀಡುತ್ತಿರುವ ಮಾಶಾಸನ ಹೆಚ್ಚಳವಾಗಿದೆ. ಅವಿವಾಹಿತ, ವಿಚ್ಛೇದಿತ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ 1.32 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದರು. ಅಲ್ಲದೇ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಉತ್ತಮ ಕೆಲಸವಾಗಿರುವ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಆರ್.ಟಿ.ಸಿ ಗಳನ್ನು ಅಧಿಕೃತವಾಗಿ ನೀಡದಿದ್ದರೆ ವ್ಯಾಜ್ಯಗಳು ಬಗೆಹರಿಯುವುದಿಲ್ಲ. ಈ ಬಗ್ಗೆ ಪರಿಶೀಲನಾ ಕಾರ್ಯವನ್ನು ಹಂತ ಹಂತವಾಗಿ ಮಾಡಬೇಕು. ಭೂ ವಿವಾದಗಳ ಪ್ರಕರಣಗಳಿಂದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕು ಎಂದರು.
ಬದಲಾದ ಸನ್ನಿವೇಶದಲ್ಲಿ ಬದಲಾದ ಆಡಳಿತ ವ್ಯವಸ್ಥೆ ಇರಬೇಕು. ಹಳೆ ವ್ಯವಸ್ಥೆಯಲ್ಲಿ ಪ್ರತಿದಿನಕ್ಕೆ 3-4 ನೋಂದಣಿಯಾಗುತ್ತದೆ. ರಾಜ್ಯದ ಪ್ರತಿ ವಿಭಾಗದಲ್ಲಿ 4 ಅಥವಾ 5 ತಾಲ್ಲೂಕಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸೂಚಿಸಿದರು.
ಸಾರ್ವಜನಿಕರಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಹೆಚ್ಚಿನ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸುವ ಬಗ್ಗೆ ಕ್ರಮ ವಹಿಸಬೇಕು. ಎಲ್ಲಾ ಪಾರಂಪರಿಕ ನೋಂದಾಯಿತ ಶಾಶ್ವತ ದಾಖಲೆಗಳ ಆಧುನೀಕರಣ ಆಗಬೇಕು. ಪಂಡರಾಪುರದಲ್ಲಿ 7.50 ಕೋಟಿ ರೂ.ಗಳ ವೆಚ್ಚದಲ್ಲಿ ಅತಿಥಿಗೃಹ ನಿರ್ಮಾಣದಲ್ಲಿ ಕರ್ನಾಟಕದ ಸ್ಥಳ ಲಭ್ಯವಿದ್ದು, ಡಾರ್ಮಿಟರಿಗಳನ್ನು ಕಟ್ಟಲು ಹೆಚ್ಚಿನ ಆದ್ಯತೆ ನೀಡುವುದು. ಪ್ರಸ್ತಾವನೆ ಮರು ಯೋಜಿಸಿ ಜುಲೈ 2 ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಬೇಕು ಎಂದರು.
ಸಣ್ಣ ತಾಲ್ಲೂಕುಗಳಿಗೆ ಮಿನಿವಿಧಾನಸೌಧ ವಿನ್ಯಾಸಗೊಳಿಸುವಾಗ ಅಗತ್ಯವಿರುವ ಇಲಾಖೆಗಳನ್ನು ಗಮನದಲ್ಲಿ ಇಟ್ಟುಕೊಳ್ಳುವುದು. ಲಭ್ಯವಿರುವ ಸ್ಥಳಗಳ ಪಟ್ಟಿ ನೀಡಬೇಖು ಹಾಗೂ ಎರಡು ವರ್ಷಗಳ ಅವಧಿಗೆ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಬೇಕು. ಪ್ರಮುಖ ಇಲಾಖೆಗಳು ಕಟ್ಟಡದಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.