ಬೆಂಗಳೂರು : ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಸಭೆಯಲ್ಲಿ ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಹಾಗೂ ಎಷ್ಟು ಬಾಕಿ ಇದೆ ಎನುವುದನ್ನು ಸಭೆಯಲ್ಲಿ ಪರಿಶೀಲನೆ ಮಾಡಲಾಗಿದೆ. ಕೆಲವು ಯೋಜನೆಗಳಿಗೆ ಮಾತ್ರ ಬದಲಾವಣೆ ಮಾಡಿ ಉಳಿದುದಕ್ಕೆ ಅನುಮೋದನೆ ನೀಡಲಾಗಿದೆ. ಬಜೆಟ್ನಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ನಡೆದ ಉನ್ನತ ಮಟ್ಟದ ಪರಿಷತ್ತಿನ ಅನುಮೋದನೆ ದೊರೆತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ.ಗಳನ್ನು ಹೆಚ್ಚಿಗೆ ನೀಡಲಾಗಿದೆ. ಕೃಷಿ ಇಲಾಖೆಗೆ 851 ಕೋಟಿ ರೂ.ಗಳಿದ್ದ ಅನುದಾನವನ್ನು 1061 ಕೋಟಿ ರೂ.ಗಳಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ 142 ಕೋಟಿಗಳಿದ್ದ ಅನುದಾನವನ್ನು 187 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ 899 ಕೋಟಿ ರೂ.ಗಳನ್ನು ಕಳೆದ ವರ್ಷ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 1,300 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು. ಸಹಕಾರ ಇಲಾಖೆಯಲ್ಲಿ SC/ST ಸಮುದಾಯದ ಜನರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿಗಳ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ 2,900 ಕೋಟಿ ರೂ.ಗಳಿದ್ದ ಅನುದಾನವನ್ನು ಈ ಬಾರಿ 3,748 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 9,000 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಉಚಿತ ಬಸ್ ಪಾಸ್
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕರ್ನಾಟದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ ಒಟ್ಟು 20 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಮಕ್ಕಳಿಗೆ ಬಸ್ ಪಾಸ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅನುದಾನವನ್ನು ನೀಡುವುದಲ್ಲದೆ, ನಿಗಮ ಮಂಡಳಿಗಳಿಗೂ ಅನುದಾನವನ್ನು ಒದಗಿಸಲಾಗಿದೆ. ಅದನ್ನೂ ಹೆಚ್ಚಿಸಬೇಕೆಂದು ಎಲ್ಲರ ಅಭಿಪ್ರಾಯವಿದೆ. ಒಂದು ವಾರದಲ್ಲಿ ಅನುದಾನ ಹೆಚ್ಚಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿಯ ಶಾಸಕರಿಗೆ ಒಂದು ಕೋಟಿ ರೂ.ಗಳನ್ನು ನೀಡಲಾಗುವುದು. ಹಿಂದಿನ ಸರ್ಕಾರ ಅನುದಾನ ಒದಗಿಸುವುದಾಗಿ ಘೋಷಣೆ ಮಾಡಿತ್ತು. ಅನುದಾನ ಒದಗಿಸಿ ಕ್ರಿಯಾ ಯೋಜನೆ ರೂಪಿಸಲು ಅನುಮತಿ ನೀಡಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.