ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಕೇಂದ್ರ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದ್ದಾರೆ.
ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್ ಗೆ ರೂ 8/= , ಡೀಸೆಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್ ಗೆ ರೂ. 6/= ಕಡಿಮೆ ಮಾಡುತ್ತಿರುವುದರಿಂದ ಪೆಟ್ರೋಲ್ ಬೆಲೆಯಲ್ಲಿ ರೂ 9.50 ರಷ್ಟು ಹಾಗೂ ಡೀಸೆಲ್ ಬೆಲೆಯಲ್ಲಿ ರೂ. 7.50/= ರಷ್ಟು ಕಡಿಮೆಯಾಗಲಿದೆ. ರಾಜ್ಯದ ಜನತೆಯ ಪರವಾಗಿ ಕೇಂದ್ರದ ಬಿಜೆಪಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಅಡುಗೆ ಅನಿಲದ ಪ್ರತಿ ಸಿಲಿಂಡರ್ ಗೆ ರೂ 2೦೦/= ರಂತೆ ವಾರ್ಷಿಕವಾಗಿ ಒಟ್ಟು 12 ಸಿಲಿಂಡರ್ ಗಳಿಗೆ ಸಬ್ಸಿಡಿಯನ್ನು ನೀಡಲಿರುವುದು ಬಡವರ ಪಾಲಿಗೆ ಅತ್ಯಂತ ಮಹತ್ತರವಾಗಿದೆ. ಹಣದುಬ್ಬರ ನಿಯಂತ್ರಣ ಮತ್ತು ಬೆಲೆಯೇರಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವೆಂದು ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ.
ಬಿಜೆಪಿ ಆಡಳಿತದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಹಿತ ದೃಷ್ಠಿಯಿಂದ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತಮಾಡಿರುತ್ತವೆ, ಆದರೆ ವಿರೋಧ ಪಕ್ಷಗಳ ಆಡಳಿತದ ವಿವಿಧ ರಾಜ್ಯಗಳಲ್ಲಿ ಅದರಲ್ಲೂ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಿಂಚಿತ್ತೂ ದರ ಕಡಿಮೆ ಮಾಡುವ ಕ್ರಮ ಕೈಗೊಳ್ಳದಿರುವುದು ಅವರ ಜನವಿರೋಧಿ ನೀತಿಯನ್ನು ತೋರಿಸುತ್ತದೆ. ಇನ್ನಾದರೂ ಇವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಗೊಳಿಸುವ ಕ್ರಮ ಅನುಷ್ಠಾನ ಮಾಡಲಿ ಎಂದು ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.