ಸಕ್ಕರೆ ನಾಡು ಮಂಡ್ಯದಲ್ಲಿ ಸಂಜೀವಿನಿ ಸಾಮರ್ಥ್ಯ ಜೀವನೋಪಾಯ ವರ್ಷ 2022-23ರ ಉದ್ಘಾಟನೆ
ಆಗಸ್ಟ್ 11,2022: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ನಗರದ ಮಂಡ್ಯ ವಿವಿ ಆವರಣದಲ್ಲಿ ಗುರುವಾರ ‘ಸಂಜೀವಿನಿ ಸಾಮರ್ಥ್ಯ, ಜೀವನೋಪಾಯ ವರ್ಷ: 2022–23’ಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಅವರು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಜೀವನೋಪಾಯ ಉಪಸಮಿತಿ ತರಬೇತಿ ಮಾರ್ಗಸೂಚಿ ಕೈಪಿಡಿಯನ್ನು ಮುಖ್ಯಮಂತ್ರಿಗಳು ಬಿಡುಗಡೆಮಾಡಿದರು. ರಾಜ್ಯದ 226 ತಾಲೂಕುಗಳಲ್ಲಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನಕ್ಕಾಗಿ ತಾಲೂಕಾ ಸಾಮರ್ಥ್ಯ ಮಳಿಗೆಯನ್ನು ಇದೇ ವೇಳೆ ಉದ್ಘಾಟಿಸಿದರು.
ಇದೇ ವೇದಿಕೆಯಲ್ಲಿ ‘ಶುಚಿ ಸಂಜೀವಿನಿ’ ಪ್ಯಾಡ್ಗಳ ತಯಾರಿಕೆಗಾಗಿ Wager Hygiene ಸಂಸ್ಥೆಯೊಂದಿಗೆ ಒಡಂಬಡಿಕೆ ನಡೆಯಿತು. ಹಾಗೆಯೇ, ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟಕ್ಕೆ ನೆರವಾಗುವ ಉದ್ದೇಶದೊಂದಿಗೆ Grant Thornton Bharat LLP ಸಂಸ್ಥೆಯೊಂದಿಗೆ ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ಸಂಸ್ಥೆ ಒಪ್ಪಂದ ಮಾಡಿಕೊಂಡಿತು. ಇದರಿಂದಾಗಿ 40,000 ಸ್ವ ಸಹಾಯ ಸಂಘದ ಮಹಿಳೆಯರಿಗೆ ಅನುಕೂಲವಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಅವರು “60 ತಿಂಗಳ ಅಧಿಕಾರದಲ್ಲಿ 59 ತಿಂಗಳು ಅಭಿವೃದ್ಧಿ ಕೆಲಸ ಮಾಡಬೇಕು, 1 ತಿಂಗಳು ಮಾತ್ರ ರಾಜಕಾರಣ ಮಾಡಬೇಕು. ನಾವು ನುಡಿದಂತೆ ನಡೆಯುತ್ತಿದ್ದೇವೆ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದೇವೆ” ಎಂದರು.
“ಹೆಣ್ಣು ಮಕ್ಕಳಿಗೆ ದುಡಿಯುವ ಅವಕಾಶ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿ ಹಳ್ಳಿಯ ಒಂದು ಮಹಿಳಾ ಸ್ವಸಹಾರ ಸಂಘಕ್ಕೆ ₹ 1.50 ಲಕ್ಷ ಧನಸಹಾಯ ನೀಡಲಾಗುವುದು. ಅದಕ್ಕಾಗಿ ₹ 500 ಕೋಟಿ ಮೀಸಲಿಡಲಾಗಿದೆ. ಯುವಜನರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ ಪ್ರತಿ ಹಳ್ಳಿಯ ಒಂದು ಯುವ ಸಂಘಟನೆಗೂ ₹ 1.50 ಲಕ್ಷ ನೀಡಲಾಗುವುದು” ಎಂಬ ಭರವಸೆ ನೀಡಿದರು.
ಬಳಿಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾತನಾಡಿ “ಮಹಿಳಾ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ನೀಡಲು ಅಮೆಜಾನ್ ಕಂಪನಿ ವಾರ್ಷಿಕ ₹80 ಸಾವಿರ ಕೋಟಿ ಮೌಲ್ಯದ ಮಾರುಕಟ್ಟೆ ಒದಗಿಸಲು ಮುಂದೆ ಬಂದಿದೆ. ಫ್ಲಿಕ್ ಕಾರ್ಟ್, ಮಿಶೋ ಕಂಪನಿಗಳು ಕೂಡ ಮಾರುಕಟ್ಟೆ ಒದಗಿಸಲು ಮುಂದಾಗಿವೆ” ಎಂದು ಹೇಳಿದರು
“ಜೀವನೋಪಾಯ ಇಲಾಖೆಗೆ ಮುಖ್ಯಮಂತ್ರಿಗಳು ಬಜೆಟ್ನಲ್ಲಿ 1,200 ಕೋಟಿ ನೀಡುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ” ಎಂದು ನುಡಿದರು.
“460 ಕೋಟಿ ರೂಗಳನ್ನು ಗ್ರಾಮ ಪಂಚಾಯಿತಿ ಒಕ್ಕೂಟಗಳಿಗೆ ಬಿಡುಗಡೆ ಮಾಡಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಜೀವನೋಪಾಯಕ್ಕೆ ನೆರವು ನೀಡಿ ಅವರ ಪರಿಶ್ರಮಕ್ಕೆ ಶಕ್ತಿ ತುಂಬಲು ಮುಖ್ಯಮಂತ್ರಿಗಳು ಬದ್ಧರಾಗಿದ್ದಾರೆ” ಎಂದರು.
ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ, ಇಲಾಖೆಯ ಸಚಿವರಾದ ಡಾ. ಸಿಎನ್ ಅಶ್ವತ್ಥನಾರಾಯಣ ಮತ್ತಿತರ ಸಚಿವರು, ಶಾಸಕರಿಗೆ ರಾಖಿ ಕಟ್ಟಿ ರಕ್ಷಾಬಂಧನದ ಶುಭಾಶಯ ಕೋರಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಯುವಜನ ಮತ್ತು ಕ್ರೀಡಾ ಸಚಿವ ಕೆ. ಸಿ. ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಎಂ.ಶ್ರೀನಿವಾಸ್, ಕೆ.ಸುರೇಶ್ಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್. ಮಂಜು, ಜಿಲ್ಲಾಧಿಕಾರಿ ಎಸ್. ಅಶ್ವತಿ, ಜಿಲ್ಲಾ ಪಂಚಾಯತ್ ಸಿಇಓ ಶಾಂತ ಎಂ. ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.