ಬೆಂಗಳೂರು: ಕರ್ನಾಟಕದಲ್ಲಿ ಕ್ರೀಡೆಯ ಸಮಗ್ರ ಅಭಿವೃದ್ಧಿಗೆ, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ಬದ್ದವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಇಂದು ವಿಧಾನಸೌಧದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ಗೆ ಕಾರ್ಯಕ್ರಮಕ್ಕೆ ಚಾಲನೆ ಹಾಗೂ 2020ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಮ್ಮ ಸರ್ಕಾರ ಕ್ರೀಡೆಗೆ, ಕ್ರೀಡಾಪಟುಗಳಿಗೆ ಸಾಕಷ್ಟು ಉತ್ತೇಜನ, ಪ್ರೋತ್ಸಾಹ ನೀಡುತ್ತಿದೆ. ಇಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡುವ ಮೂಲಕ ಗ್ರಾಮೀಣ ಮಟ್ಟದಿಂದಲೂ ಕ್ರೀಡಾಪಟುಗಳು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದ್ದೇವೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೂಚನೆಯಂತೆ ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ದೇಸಿ ಕ್ರೀಡೆಗಳಾದ ಕುಸ್ತಿ, ಕಬ್ಬಡ್ಡಿ, ಖೋಖೋ ಮತ್ತು ಎತ್ತಿನಬಂಡಿ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
15 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ, 14 ಕ್ರೀಡಾಪಟುಗಳಿಗೆ ಕ್ರೀಡಾರತ್ನ ಪ್ರಶಸ್ತಿ, 05 ಜನರಿಗೆ ಜೀವಮಾನ ಸಾಧನೆ ಪ್ರಶಸ್ತಿ, 10 ಸಂಸ್ಥೆಗಳಿಗೆ ಕ್ರೀಡಾ ಪೋಷಕ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಪುರಸ್ಕಾರ ಯೋಜನೆಯಡಿ 750 ಯುವ ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷ ನಗದು ಪುರಸ್ಕಾರ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಡಾ.ನಾರಾಯಣಗೌಡ ಅವರು ಗೌರವಿಸಿದರು
ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆ ಪುನಾರಂಭ ಮಾಡಲಾಗಿದೆ. ಇದೇ ಮೊದಲ ಬಾರಿಗೆ 30 ಜನ ಕಡು ಬಡ ಕಾರ್ಮಿಕರ ಮಕ್ಕಳಿಗೆ ಉಚಿತ ಪೈಲಟ್ ತರಬೇತಿ ನೀಡುವ ಕೆಲಸ ಮಾಡುತ್ತಿದೆ. ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಕ್ರೀಡಾಪಟುಗಳಿಗೆ ತರಬೇತಿ, ಸಿದ್ದಿ ಜನಾಂಗದ ಮಕ್ಕಳಿಗೆ ವಿಶೇಷ ತರಬೇತಿ, ಸರ್ಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% , ಕ್ರೀಡಾ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ 50% ಮೀಸಲಾತಿ ಶೀಘ್ರದಲ್ಲೇ ಜಾರಿಗೆ, ಡಾ.ಆರ್.ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದ ಸಮಿತಿ ನೀಡಿರುವ ಯುವನೀತಿಯನ್ನೂ ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಕ್ರಾಂತಿಕಾರಕ ಯೋಜನೆಯಾಗಿದ್ದು, ದೇಶದಲ್ಲಿಯೇ ಇದೊಂದು ಮಹತ್ವದ ಯುವಶಕ್ತಿ ಯೋಜನೆಯಾಗಿದೆ. ಯುವನೀತಿ, ಯುವ ಸಬಲೀಕರಣ ಇಲಾಖೆಯ ಹಲವು ಯೋಜನೆಗಳ ಮೂಲಕ ಯುವ ಜನತೆಗೆ ಉಜ್ವಲ ಭವಿಷ್ಯ ಕಲ್ಪಿಸುವ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸು ನನಸಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೇತೃತ್ವವಹಿಸಿಕೊಂಡಿರುವ ಸಚಿವ ಡಾ.ನಾರಾಯಣಗೌಡ ಅವರಿಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾರಾಯಣಗೌಡರು ದಕ್ಷ, ಪ್ರಾಮಾಣಿಕತೆ, ದೂರದೃಷ್ಟಿ ಹೊಂದಿದ್ದು, ಅತ್ಯಂತ ಕ್ರಿಯಾಶೀಲರಾಗಿ ಇಲಾಖೆಯನ್ನು ಮುನ್ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.