ಬೆಂಗಳೂರು: ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರ ಅಭಿವೃದ್ಧಿ ಕಾರ್ಯಗಳು ಇದಕ್ಕೆ ಪೂರಕ ಎನಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ರಾಜ್ಯ ಬಿಜೆಪಿ ಸರ್ಕಾರದ 3 ವರ್ಷಗಳ ಸಾಧನೆಯ ಸಂಬಂಧ ಇಂದು ದೊಡ್ಡಬಳ್ಳಾಪುರದ ಬಳಿ “ಜನಸ್ಪಂದನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ವಿದ್ಯಾನಿಧಿಯನ್ನು ಬೊಮ್ಮಾಯಿಯವರ ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ ಎಂದರು.
ಕಾಂಗ್ರೆಸ್ನ ಭ್ರಷ್ಟಾಚಾರ ಕುರಿತು ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್, ಡಿ.ಕೆ.ಶಿವಕುಮಾರ್ ಸೇರಿ ಎಲ್ಲರೂ ಜಾಮೀನಿನಡಿ ಇದ್ದಾರೆ. ಭ್ರಷ್ಟಾಚಾರಿಗಳ ಪಕ್ಷ ಕಾಂಗ್ರೆಸ್ ಎಂದು ಆರೋಪಿಸಿದರು. ಸಿದ್ದರಾಮಯ್ಯರ ಕಾಲದಲ್ಲಿ ಅತಿಹೆಚ್ಚು ಭ್ರಷ್ಟಾಚಾರ ಹಗರಣ ಆಗಿದೆ. 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿದ್ದು, ಗೋಹತ್ಯೆ ನಿರಂತರವಾಗಿತ್ತು. ಆದರೆ, ಗೋಹತ್ಯಾ ನಿಷೇಧ, ಮತಾಂತರ ನಿಷೇಧವನ್ನು ಬಿಜೆಪಿ ಸರಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.
ಸಿದ್ದರಾಮಣ್ಣನದು ಹಿಂದೂ ವಿರೋಧಿ ನಿಲುವು. ಬಿಜೆಪಿ ರೈತರ ಪರ ಇರುವ ಪಕ್ಷ. ಅಭಿವೃದ್ಧಿಗೆ ಹೆಸರಾಗಿ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಇದ್ದಾರೆ. ಬಿಜೆಪಿ ಸಶಕ್ತವಾಗುತ್ತಿದೆ. ಮುಂದಿನ ಬಾರಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋವಿಡ್ ನಿರ್ವಹಣೆಯನ್ನು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಸಮರ್ಥವಾಗಿ ಮಾಡಿದೆ. 60 ವರ್ಷ ಆಡಳಿತ ಮಾಡಿದ್ದ ಕಾಂಗ್ರೆಸ್ ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಿತ್ತು. ಮೋದಿಯವರ ಸರಕಾರವು ದೇಶದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.