ಬೆಂಗಳೂರು: ರಾಜ್ಯ ಸಾರಿಗೆ ನಿಗಮವು ತನ್ನ ಸಂಸ್ಥೆಯ ಕಾರ್ಮಿಕರಿಗಾಗಿ 50 ಲಕ್ಷ ರೂಪಾಯಿಗಳ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಈ ವಿಮಾ ಯೋಜನೆ ಸೌಲಭ್ಯದಿಂದ ಸಂಸ್ಥೆಯ ಕಾರ್ಮಿಕರ ಕುಟುಂಬಕ್ಕೆ ಆರ್ಥಿಕ ಭದ್ರತೆ ಸಿಗಲಿದೆ.
ಈ ಹಿಂದೆ ಸಾರಿಗೆ ನಿಗಮದ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ / ಭಾಗಶಃ ಅಂಗವೈಕಲ್ಯತೆಗೆ ತುತ್ತಾದರೆ ಯಾವುದೇ ದೊಡ್ಡ ಮೊತ್ತದ ಪರಿಹಾರದ ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ. ಆದರೆ ಹೊಸ ವಿಮಾ ಯೋಜನೆಯಿಂದ ದೊಡ್ಡ ಮೊತ್ತ ಅವಲಂಬಿತರಿಗೆ ಸಿಗಲಿದೆ.
ಹೊಸ ವಿಮಾ ಯೋಜನೆಯಿಂದ ಪಾಲಿಸಿದಾರರು ಅಫಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂಪಾಯಿ ಸಿಗಲಿದೆ. ಅಫಘಾತದಲ್ಲಿ ಸಿಬ್ಬಂದಿ ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ 20 ಲಕ್ಷ ರೂ. ಹಣ ಸಿಗಲಿದೆ ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯ ಉಂಟಾದಲ್ಲಿ 10 ಲಕ್ಷ ರೂ. ವಿಮಾ ಪರಿಹಾರ ದೊರೆಯಲಿದೆ.
ಸಿಬ್ಬಂದಿ ಅಪಘಾತದಲ್ಲಿನ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ 10 ಲಕ್ಷ ರೂ ಸಿಗಲಿದೆ. ಔಷಧಗಳ ಆಮದಿಗಾಗಿ ಗರಿಷ್ಠ 5 ಲಕ್ಷ ರೂ ಸಿಗಲಿದೆ. ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿಯಾಗಿ 2 ಲಕ್ಷ ರೂ. (ರೂ.50 ಲಕ್ಷ + ರೂ.2 ಲಕ್ಷ), ಏರ್ ಆ್ಯಂಬುಲೆನ್ಸ್ ಸೇವೆಗೆ 10 ಲಕ್ಷ ರೂ. ವಿಮಾ ಪರಿಹಾರ ಸಿಗಲಿದೆ.
ಸಾರಿಗೆ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಠ 5 ಲಕ್ಷ ರೂ. ಹಾಗೂ ಹೆಣ್ಣು ಮಗಳ ವಿವಾಹಕ್ಕೆ ಗರಿಷ್ಟ 5 ಲಕ್ಷ ರೂ. ವರೆಗೆ ಆರ್ಥಿಕ ಸಹಾಯವನ್ನು ಈ ವಿಮಾ ಯೋಜನೆ ಒಳಗೊಂಡಿರುತ್ತದೆ.
ರಾಜ್ಯ ಸಾರಿಗೆ ನಿಗಮ, 50 ಲಕ್ಷ ರೂ.ಗಳ ಅಪಘಾತ ವಿಮಾ ಯೋಜನೆ ಸೌಲಭ್ಯ ಕಲ್ಪಿಸುವ ಮೂಲಕ ಸಂಸ್ಥೆಯ ಕಾರ್ಮಿಕರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ಮುಂದಾಗಿರುವುದು ಒಂದು ಐತಿಹಾಸಿಕ ನಿರ್ಧಾರವಾಗಿದೆ. 1/5
— B Sriramulu (@sriramulubjp) October 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.