ಬೆಂಗಳೂರು: ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪವಿತ್ರ ಮೃತ್ತಿಕೆ ಸಮರ್ಪಿಸುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಗೋಪಾಲಯ್ಯ ಅವರು ತಿಳಿಸಿದರು.
ನಗರದ ಕಾಳಿಕಾಂಭ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ ಅಂಗವಾಗಿ ಮಂಡ್ಯ ಜಿಲ್ಲೆಯ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನಾಡಪ್ರಭು ಕೆಂಪೇಗೌಡ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಎಲ್ಲಾ ಸಮುದಾಯ ಹಾಗೂ ಎಲ್ಲಾ ಕಸುಬುಗಳಿಗೆ ಬೆಂಗಳೂರಿನಲ್ಲಿ ಮಾರುಕಟ್ಟೆಯನ್ನು ಕಲ್ಪಿಸಿಕೊಟ್ಟರು. ನಾಡ ಪ್ರಭು ಕೆಂಪೇಗೌಡರ ರಥ ಅಕ್ಟೋಬರ್ 29 ರಿಂದ ನವೆಂಬರ್ 6 ರವರೆಗೆ ಜಿಲ್ಲೆಯ 233 ಗ್ರಾಮ ಪಂಚಾಯಿತಿಯ 1500 ಕ್ಕೂ ಹೆಚ್ಚಿನ ಗ್ರಾಮಗಳಲ್ಲಿ ಸಂಚರಿಸಿ ಪವಿತ್ರ ಮೃತ್ತಿಕೆ ಸಂಗ್ರಹಿಸಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ವ್ಯಾಪ್ತಿಯಲ್ಲಿರುವ ಧಾರ್ಮಿಕ, ಪಾರಂಪರಿಕ, ಕಲ್ಯಾಣಿ ಇನ್ನಿತರ ಪ್ರಸಿದ್ಧ ಸ್ಥಳದಲ್ಲಿ ಮಣ್ಣು ಸಂಗ್ರಹಿಸಿ ಸಮರ್ಪಿಸಿ ಎಂದರು.
ಕೆಂಗಲ್ ಹನುಮಂತಯ್ಯನವರ ಉದಾರತೆಯಿಂದ ವಿಧಾನಸೌಧ ನಿರ್ಮಾಣವಾಗಿ ಬೆಂಗಳೂರು ಖ್ಯಾತಿ ಪಡೆದಿದೆ. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಪ್ರಭು ಕೆಂಪೇಗೌಡ ಅವರಿಗೆ ವಿಶೇಷ ಗೌರವ ಸಲ್ಲಿಸಬೇಕು ಎನ್ನುವ ದೂರದೃಷ್ಟಿಯಿಂದ ರಾಜ್ಯದೆಲ್ಲೆಡೆಯಿಂದ ಪವಿತ್ರ ಮೃತ್ತಿಕೆ ಸಂಗ್ರಹಿಸಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದು ಶ್ಲಾಘನೀಯ ಕಾರ್ಯ. 700 ವರ್ಷಗಳ ಹಿಂದೆ ನಾಡು ಕಟ್ಟಿದ ಕೆಂಪೇಗೌಡರಂತಹ ದೊರೆಗೆ ಗೌರವ ಸಲ್ಲಿಸಲು ಜಾತಿ-ಮತ, ಪಕ್ಷ-ಬೇಧವಿಲ್ಲದೇ ಎಲ್ಲರೂ ಬೆಂಬಲಿಸುವ ಮೂಲಕ ಜಿಲ್ಲೆಯ ಗೌರವವನ್ನು ಎತ್ತಿ ಹಿಡಿಯೋಣ ಎಂದು ಕರೆ ನೀಡಿದರು.
ಇಂದು ಬೆಂಗಳೂರು ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಸಾಧನೆಗೈದಿದೆ ಎಂದರೆ ಅದರ ಕೀರ್ತಿ ನಾಡಪ್ರಭು ಕೆಂಪೇಗೌಡ ಅವರುಗೆ ಸಲ್ಲಬೇಕು. ಸಿಲಿಕಾನ್ ವ್ಯಾಲಿ ಎಂಬ ಗರಿಮೆಗೆ ಪಾತ್ರವಾಗಿರುವ ಬೆಂಗಳೂರಿನಲ್ಲಿ ವಿಶ್ವ ಹೂಡಿಕೆದಾರರ ಸಮ್ಮೇಳನ ಆಯೋಜನೆಯಾಗುತ್ತಿರುವುದು ಬೆಂಗಳೂರಿನ ಹಿರಿಮೆಯನ್ನು ಸಾಬೀತುಪಡಿಸುತ್ತದೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಬೃಹತ್ ಬೆಂಗಳೂರು ನಿರ್ಮಾತೃವಿಗೆ ಗೌರವ ಸಲ್ಲಿಸಲು ಸರ್ಕಾರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಹಾಗೂ ಥೀಂ ಪಾರ್ಕ್ ನಿರ್ಮಾಣಕ್ಕೆ ಮೃತ್ತಿಕೆ ಸಂಗ್ರಹಣೆಗೆ ಮುಂದಾಗಿದ್ದು, ಜನರು ಅಭಿಮಾನ ಹಾಗೂ ಭಕ್ತಿ ಗೌರವದಿಂದ ಈ ಕಾರ್ಯ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರು.
ವೇದಿಕೆ ಕಾರ್ಯಕ್ರಮದ ನಂತರ ಎಲ್ಲಾ ಗಣ್ಯರು ಕಾಳಿಕಾಂಭ ದೇವಸ್ಥಾನದಿಂದ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಿ ಪೂಜೆ ಸಲ್ಲಿಸಿ ನಾಡ ಪ್ರಭು ಕೆಂಪೇಗೌಡರ ರಥಕ್ಕೆ ಸಮರ್ಪಿಸಿ ಚಾಲನೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಚಂದ್ರವನ ಆಶ್ರಮದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಜಂಗಮ ಮಠದ ರೇಣುಕಾಶಿವಚಾರ್ಯ ಸ್ವಾಮೀಜಿ ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.