ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಇತ್ತೀಚೆಗೆ ಬಿಜೆಪಿ 4 ರಾಜ್ಯಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ ಈಚೆಗೆ ನಡೆದ ಉಪ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ಯಾತ್ರೆ ಮುಂದುವರಿಯಿತು. ಮುಂದಿನ ಚುನಾವಣೆಯಲ್ಲಿ ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ವಿಜಯಯಾತ್ರೆ ಮಾಡಿ ಅಧಿಕಾರ ಪಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲೊಪ್ಪಿಕೊಂಡಿತ್ತು. ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲೂ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್ ಅಲ್ಲಿಯೂ ಸೋಲಲಿದೆ ಎಂದು ನುಡಿದರು.
ಕರ್ನಾಟಕದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಅಧಿಕಾರ ಮುಂದುವರಿಸಲಿದೆ. ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ವಿರೋಧಿಗಳು. ಕಾಂಗ್ರೆಸ್ ಪಕ್ಷದ ಅಧಿಕಾರ ಇದ್ದಾಗ ಅದು ಪಿಎಫ್ಐ ಮುಖಂಡರನ್ನು ಬೆಂಬಲಿಸಿ ಹಿಂದೂಗಳ ಹತ್ಯೆಗೆ ಕಾರಣರಾದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ ಎಂದು ವಿವರಿಸಿದರು.
ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಸಿದ್ದರಾಮಯ್ಯ ಹೆಚ್ಚಿಸಲಿಲ್ಲ. ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.
ಸತೀಶ್ ಜಾರಕಿಹೊಳಿ ಅವರು ಹಿಂದೂ ಶಬ್ದದ ಅವಹೇಳನ ಮಾಡಿದ್ದು ಖಂಡನೀಯ. ಈ ಹಿಂದೂ ವಿರೋಧಿ ನೀತಿಯ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಸಮಾಪ್ತಿ ಆಗಲಿದೆ ಎಂದು ನುಡಿದರು.
ಮೋದಿಜಿ ಅವರು ಬನಾರಸ್, ಕಾಶಿ, ಅಯೋಧ್ಯೆ ವಿಚಾರಗಳಲ್ಲಿ ನಮ್ಮ ಸಂಸ್ಕೃತಿಯ ಗೌರವ ಹೆಚ್ಚಿಸಿದ್ದಾರೆ. ಹಿಂದೂಗಳನ್ನು ಅವಹೇಳನ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಜನರು ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.
ಲಕ್ಷಗಟ್ಟಲೆ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಸೌಲಭ್ಯ ಸಿಗುತ್ತಿದೆ. ರಾಜ್ಯದ ಬಿಜೆಪಿ ಸರಕಾರ ಹೆಚ್ಚುವರಿಯಾಗಿ ನಿಧಿ ನೀಡುತ್ತಿದೆ. ಈ ರೀತಿ ಅನೇಕ ಜನಪರ ಯೋಜನೆಗಳನ್ನು ಮೋದಿಜಿ ಮತ್ತು ರಾಜ್ಯದ ಬಿಜೆಪಿ ಸರಕಾರ ಜಾರಿಗೊಳಿಸಿವೆ. ಇದನ್ನು ಗಮನಿಸಿ ಜನರು ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.
ತಳಮಟ್ಟದ ಕಾರ್ಯಕರ್ತರೇ ಬಿಜೆಪಿ ಮಾಲೀಕರು. ಅದು ಇತರ ಪಕ್ಷಗಳಿಂದ ಭಿನ್ನವಾದುದು. ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದು ಅವರು ವಿವರಿಸಿದರು. ಪಕ್ಷವನ್ನು ಸಶಕ್ತವಾಗಿಸಿರುವ ಕಾರ್ಯಕರ್ತರಿಗೆ ನಮನಗಳು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.