ಬೆಂಗಳೂರು: 2023 24 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ.
ಕೇಂದ್ರ ಸರ್ಕಾರದ ‘ಅಗ್ನಿವೀರ್’ ಯೋಜನೆಗೆ ಸೇರಲು ಬಯಸುವವರಿಗೆ ಉಚಿತ ತರಬೇತಿ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ವಿದ್ಯಾರ್ಥಿಗಳಿಗಾಗಿ ಮಕಾಲಾ ಬಸ್ ಎಂಬ ಹೊಸ ಬಸ್ ಯೋಜನೆ ಆರಂಭಿಸಲಾಗುವುದು ಎಂದಿದ್ದಾರೆ.
ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ಕರ್ನಾಟಕದ ತೆರಿಗೆ ಆದಾಯವು ಈ ವರ್ಷ 20% ರಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ದೇವಾಲಯಗಳು ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ 425 ಕೋಟಿ ರೂಪಾಯಿಗಳ ಹೊಸ ನಿಧಿಯನ್ನು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ವೃತ್ತಿಪರ ತೆರಿಗೆ ವಿನಾಯಿತಿ ಮಿತಿಯನ್ನು 15,000 ರಿಂದ 25,000 ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಹೊಸ ಯೋಜನೆಯಡಿ ಜೂನ್ 30 ರೊಳಗೆ ಪಾವತಿಸಿದರೆ ಜಿಎಸ್ಟಿ ಮತ್ತು ಅಬಕಾರಿ ತೆರಿಗೆ ಬಾಕಿ ಮತ್ತು ದಂಡವನ್ನು ಮನ್ನಾ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.
8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಚಿತ ಶಿಕ್ಷಣವನ್ನು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ISEC ಸಂಸ್ಥೆಯಲ್ಲಿ ಪಿಎಚ್ಡಿ ಮಾಡಲು ಎಸ್ಸಿ/ಎಸ್ಟಿ ಸಮುದಾಯದ 5 ವಿದ್ಯಾರ್ಥಿಗಳಿಗೆ ಡಾ. ಬಿಆರ್ ಅಂಬೇಡ್ಕರ್ ಫೆಲೋಶಿಪ್ ಸ್ಥಾಪಿಸಲು ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಪದವಿ ಶಿಕ್ಷಣ ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದೆ ಇದ್ದರೆ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ ನೀಡಲಾಗುವುದು. ‘ಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿಯಂತೆ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಘೋಷಿಸಲಾಗಿದೆ. ಕನ್ನಡ ಮಾಧ್ಯಮದಲ್ಲಿ ಶಾಲಾ ಶಿಕ್ಷಣ ಪೂರೈಸಿದ 500 ಅತ್ಯುತ್ತಮ ವಿದ್ಯಾರ್ಥಿಗಳ ಹೆಚ್ಚಿನ ಶಿಕ್ಷಣಕ್ಕೆ ಒತ್ತು. ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ. ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಎಸ್ಸಿ, ಎಸ್ಟಿ ಸಮುದಾಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಅಮರ್ ಜ್ಯೋತಿ ಯೋಜನೆಯಡಿ 75 ಯೂನಿಟ್ ಉಚಿತ ವಿದ್ಯುತ್ ಪೂರೈಸಲಾಗುವುದು. ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿಯಲ್ಲಿ ಶೇ. 24 ರ ವರೆಗೆ ಮೀಸಲಾತಿ ಒದಗಿಸಲಾಗುವುದು ಎಂದರು.
ಮನೆ ಮನೆಗೆ ಆರೋಗ್ಯ’ ಕಾರ್ಯಕ್ರಮದಡಿ ಹಳ್ಳಿಗಳಲ್ಲಿ ಎರಡು ಬಾರಿ ಆರೋಗ್ಯ ಶಿಬಿರ ಆಯೋಜನೆ. ಮನೆ ಬಾಗಿಲಿಗೆ ಔಷಧಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ವೈದ್ಯಕೀಯ ದಾಖಲಾತಿಗಳ ಡಿಜಿಟಲೀಕರಣಕ್ಕೆ ಒತ್ತು. ಎಲ್ಲಾ ಜಿಲ್ಲೆಗಳಲ್ಲಿ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು ಅನುದಾನ. 6 ಇಎಸ್ಐ ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು. ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ. ಜತೆಗೆ ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದರು.
‘ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ’ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬ ಆಯೋಜನೆ. ಗಡಿ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸಲಾಗುವುದು ಎಂದಿದ್ದಾರೆ.
ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರು, ಗ್ರಂಥ ಪಾಲಕರ ಗೌರವಧನ 1000 ಹೆಚ್ಚಳ. ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆಯ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ. ಎಲ್ಲ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.