ಬೆಂಗಳೂರು: ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ 4 ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಾಲ್ಕು ಸ್ಥಳಗಳಿಂದ ಆರಂಭವಾಗಲಿದೆ. ಮಾರ್ಚ್ 1 ರಂದು ಮಲೆ ಮಹದೇಶ್ವರ ಬೆಟ್ಟ, ಹನೂರು ತಾಲ್ಲೂಕಿನಿಂದ ಮೊದಲನೇ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ಚಾಲನೆ ನೀಡಲಿದ್ದಾರೆ. ಮಾರ್ಚ್ 2ರಂದು ಸಂಗೊಳ್ಳಿ ರಾಯಣ್ಣ ಸ್ಮಾರಕ, ನಂದಗಢದಿಂದ ಯಾತ್ರೆಗೆ ಕೇಂದ್ರರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಚಾಲನೆ ಸಿಗಲಿದೆ. ನಂದಗಢದಿಂದ ಹೊರಡುವ ಯಾತ್ರೆಯು ಕಿತ್ತೂರು ಚೆನ್ನಮ್ಮನ ಹುಟ್ಟೂರಾದ ಕಿತ್ತೂರಿಗೂ ಹೋಗಲಿದೆ.
ಮಾರ್ಚ್ 3ರಂದು ನೂತನ ಅನುಭವ ಮಂಟಪ ನಿರ್ಮಾಣವಾಗುತ್ತಿರುವ ಸ್ಥಳ, ಬಸವಕಲ್ಯಾಣ, ಬೀದರ್ ಜಿಲ್ಲೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಚಾಲನೆ ನೀಡಲಿದ್ದೇವೆ. ಅಲ್ಲದೆ ನಾಡಪ್ರಭು ಕೆಂಪೇಗೌಡ ಪ್ರತಿಮೆ, ದೇವನಹಳ್ಳಿ, ಬೆಂಗಳೂರು. ಈ ಯಾತ್ರೆಗೂ ಕೇಂದ್ರಗೃಹ ಸಚಿವ ಅಮಿತ್ ಶಾ ಅವರೇ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರುಗಳು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
50ಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಳ್ಳುತ್ತಾರೆ. ರಾಜ್ಯದ ಎಲ್ಲಾ 31 ಜಿಲ್ಲೆಗಳು ಮತ್ತು 224 ವಿಧಾನಸಭಾ ಕ್ಷೇತ್ರಗಳ ಸಂಪರ್ಕ ನಡೆಯಲಿದೆ. ನಾಲ್ಕು ರಥಗಳ ಮೂಲಕ ಒಟ್ಟು 8,000 ಕಿ.ಮೀ . ಯಾತ್ರೆ ಸಂಚರಿಸಲಿದೆ. ಯಾತ್ರೆಯ ಉದ್ದಕ್ಕೂ ಒಟ್ಟು 80ಕ್ಕೂ ಹೆಚ್ಚು ರ್ಯಾಲಿ ಮತ್ತು 75 ಸಾರ್ವಜನಿಕ ಸಭೆಗಳು ನಡೆಯಲಿವೆ. 150ಕ್ಕೂ ಹೆಚ್ಚು ರೋಡ್ ಶೋಗಳು ಸಹಾ ನಡೆಯಲಿವೆ. ಈ ಮೂಲಕ ನಾಡಿನ 4 ಕೋಟಿ ಜನರನ್ನು ಸಂಪರ್ಕಿಸಲಾಗುವುದು. ಯಾತ್ರೆಯ ಅವಧಿ 20 ದಿನಗಳು ಎಂದ ಅವರು, 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಮತ್ತು ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ದಾಖಲೆ ಸೃಷ್ಟಿಸುವುದು ಇದರ ಗುರಿ ಎಂದು ವಿವರಿಸಿದರು.
ಮಾರ್ಚ್ 25ರಂದು ದಾವಣಗೆರೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಈ ಮೆಗಾ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು. ಬಿಜೆಪಿ ಸರಕಾರಗಳ ಸಾಧನೆ, ಕಾಂಗ್ರೆಸ್ನ ಹುಸಿ ಭರವಸೆ- ದೇಶ ಕೊಳ್ಳೆ ಹೊಡೆದುದನ್ನು ತಿಳಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.
ಯಡಿಯೂರಪ್ಪ ಅವರ ಮಾರ್ಗದರ್ಶನದೊಂದಿಗೆ ಪಕ್ಷ ಮುನ್ನಡೆಯುತ್ತದೆ. ಅವರ ನೇತೃತ್ವದ ಕುರಿತು ಪಕ್ಷಕ್ಕೆ ಹೆಮ್ಮೆ ಇದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.
ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಜಿಲ್ಲಾ ಪ್ರಭಾರಿ ಮತ್ತು ಯಾತ್ರೆಯ ಸಹ ಸಂಚಾಲಕ ಸಚ್ಚಿದಾನಂದಮೂರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.