ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ಆಧುನಿಕ ಶಕುನಿ’ ಎಂದು ಸಂಬೋಧಿಸಿ ಅವರ ಘನತೆಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮನವಿ ಮಾಡಿದೆ. ಈ ಕುರಿತು ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಇಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸುರ್ಜೇವಾಲಾ ಅವರು “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಧುನಿಕ ಶಕುನಿ, ಮೀಸಲಾತಿ ಮೂಲಕ ಜನರನ್ನು ಒಡೆದು ಸಂಘರ್ಷ ಸೃಷ್ಟಿಸಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ. ಅದು ಪತ್ರಿಕೆಗಳಲ್ಲೂ ಪ್ರಕಟವಾಗಿದೆ. ಈ ಹೇಳಿಕೆಯಿಂದ ಮುಖ್ಯಮಂತ್ರಿಗಳ ಗೌರವಕ್ಕೆ ಚ್ಯುತಿ ಉಂಟಾಗಿದೆ. ಈ ಹೇಳಿಕೆಯಿಂದ ಪಕ್ಷದ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗುವ ಮತ್ತು ಕೆರಳುವ ಸಂಭವವಿದೆ. ಆದ್ದರಿಂದ ಇಂಥ ಹೇಳಿಕೆ ಕೊಟ್ಟ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಕೋರಿದೆ.
ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ರಾಜ್ಯ ಸಮಿತಿ ಸದಸ್ಯ ವಸಂತ್ಕುಮಾರ್, ಜಿಲ್ಲಾ ಸಂಚಾಲಕ ಯಶವಂತ ಎಂ. ಅವರು ಈ ಮನವಿ ಪತ್ರಕ್ಕೆ ಸಹಿ ಮಾಡಿದ್ದಾರೆ.
ಇನ್ನೊಂದು ಮನವಿ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಆರ್ಬಿಐ ವಿಧಿಸಿದ ದಂಡವನ್ನು ಮೋದಿ ಅವರ ಬಿಜೆಪಿ ಸರಕಾರ ತಿರುಪತಿ ಮೇಲೆ ದಾಳಿ ಮಾಡಿಸಿದೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ವಿರುದ್ಧ ದುರುದ್ದೇಶಪೂರ್ವಕ ಹೇಳಿಕೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ವಿರುದ್ಧ ಈ ಸಂಬಂಧ ಇನ್ನೊಂದು ದೂರು ನೀಡಲಾಗಿದೆ.
ಸುರ್ಜೇವಾಲಾ ಅವರು ನಿನ್ನೆ, ತಿರುಪತಿ ತಿರುಮಲ ದೇವಸ್ಥಾನಕ್ಕೆ ಆರ್ಬಿಐ ವಿಧಿಸಿದ ದಂಡವನ್ನು ಮೋದಿ ಅವರ ಬಿಜೆಪಿ ಸರಕಾರ ತಿರುಪತಿ ಮೇಲೆ ದಾಳಿ ಮಾಡಿಸಿ 3.10 ಕೋಟಿ ದಂಡ ವಿಧಿಸಿದೆ ಎಂದು ಸುಳ್ಳು ಆರೋಪ ಮಾಡಿ, ಜನರ ಧಾರ್ಮಿಕ ಭಾವನೆಗಳು ಕೆರಳುವಂತೆ ಮಾಡಿದ್ದಾರೆ. ಈ ಮೂಲಕ ಸರಕಾರ ಮತ್ತು ಪಕ್ಷದ ವಿರುದ್ಧ ಜನತೆಯನ್ನು ಎತ್ತಿ ಕಟ್ಟುವ ಹುನ್ನಾರ ಮಾಡಿದ್ದಾರೆ. ಈ ರೀತಿಯ ಸುಳ್ಳು ಹೇಳಿಕೆಗಳು ಮುಂಬರುವ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಸಂಭವವಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕೊಟ್ಟ ದೂರಿನಲ್ಲಿ ತಿಳಿಸಲಾಗಿದೆ.
ರಿಸರ್ವ್ ಬ್ಯಾಂಕಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಉಲ್ಲಂಘನೆಗಾಗಿ ಈ ದಂಡ ವಿಧಿಸಲಾಗಿದೆ. ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಈ ರೀತಿ ಹೇಳಿಕೆ ಕೊಟ್ಟ ಸುರ್ಜೇವಾಲಾರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.