ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೇ 6ರಂದು ಶನಿವಾರ ಬೆಂಗಳೂರಿನಲ್ಲಿ ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಮಲ್ಲೇಶ್ವರ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ರೋಡ್ ಶೋ ಕುರಿತು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ವಿವರಿಸಿದರು.
ಸಂಸದ ಪಿ.ಸಿ.ಮೋಹನ್ ಮಾತನಾಡಿ, ಕರ್ನಾಟಕದ ಜನತೆ 9 ವರ್ಷಗಳಿಂದ ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಲು ಪ್ರಧಾನಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ದೂರ ರೋಡ್ ಶೋ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ 10.1 ಕಿ.ಮೀ, ಸಂಜೆ 4ರಿಂದ ರಾತ್ರಿ 10 ರವರೆಗೆ 26.5 ಕಿ.ಮೀ ದೂರ ರೋಡ್ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಪಾಲ್ಗೊಳ್ಳಲಿದ್ದಾರೆ ಎಂದರು.
ಬೆಳಿಗ್ಗೆ ಸುರಂಜನ್ದಾಸ್ ರಸ್ತೆಯಿಂದ ಆರಂಭವಾಗುವ ಯಾತ್ರೆ, ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಾಂತಿನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ. ಸಂಜೆ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ವಿಜಯನಗರ, ಗೋವಿಂದರಾಜ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇ ಔಟ್, ಮಲ್ಲೇಶ್ವರ ಕ್ಷೇತ್ರಗಳಲ್ಲಿ ರೋಡ್ ಶೋ ಸಾಗಲಿದೆ. ಇಡೀ ಕರ್ನಾಟಕದ ಜನ ರೋಡ್ ಶೋ ನಲ್ಲಿ ಪಾಲ್ಗೊಳ್ಳುತ್ತಿದ್ದು, ರೋಡ್ ಶೋ ಸಾಗುವ ಮಾರ್ಗದ ಬಗ್ಗೆ ತಿಳಿಸಲಾಗುವುದು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂಜಾಗ್ರತೆಗಳನ್ನು ವಹಿಸಲಾಗಿದೆ ಎಂದು ತಿಳಿಸಿದರು.
ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಪ್ರಧಾನಿಯವರು ನಮ್ಮ ಮನೆ-ಬಾಗಿಲ ಹತ್ತಿರ ಬರುತ್ತಿರುವುದು ಇಡೀ ಬೆಂಗಳೂರಿಗರು ಖುಷಿ ಪಡುವ ಹಬ್ಬವಾಗಿದೆ. ನವ ಬೆಂಗಳೂರಿಗೆ ಪ್ರಧಾನಿಯವರು ಹಾಕಿರುವ ಅಡಿಪಾಯಕ್ಕಾಗಿ ಜನರು ಅವರನ್ನು ಹೂ ಮಳೆಯೊಂದಿಗೆ ಸ್ವಾಗತಿಸಲು ಕಾತರರಾಗಿದ್ದಾರೆ ಎಂದು ನುಡಿದರು.
ಬೆಂಗಳೂರು ಬಿಜೆಪಿ ಭದ್ರಕೋಟೆಯಾಗಿದ್ದು, ಸಬರ್ಬನ್ ರೈಲು, ಉಪ ನಗರ ಟೌನ್ ಶಿಪ್ ವರ್ತುಲ ರಸ್ತೆ, ಮೆಟ್ರೋ ರೈಲು ಮಾರ್ಗ 70 ಕಿ.ಮೀಗೆ ವಿಸ್ತರಣೆ, 1,500 ಎಲೆಕ್ಟ್ರಿಕ್ ಬಸ್ಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್, ಸ್ಟಾರ್ಟಪ್, ಯೂನಿಕಾರ್ನ್ಗೆ ಪ್ರೋತ್ಸಾಹ, ಪಿಎಂ ಆವಾಸ್ ಯೋಜನೆಯಡಿ 40 ಸಾವಿರ ಮನೆಗಳ ನಿರ್ಮಾಣ, ಸ್ವನಿಧಿ ಯೋಜನೆಯಡಿ ವ್ಯಾಪಾರಿಗಳಿಗೆ ಆರ್ಥಿಕ ನೆರವು, ಮೂರುವರೆ ವರ್ಷದಿಂದ ಉಚಿತ ಪಡಿತರ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ನಗರಕ್ಕೆ ನೀಡಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.