ನವದೆಹಲಿ: ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಇಂದಿಗೆ ಮೂರು ವರ್ಷ ಪೂರೈಸಿದೆ. ಇದರಡಿ 42 ಲಕ್ಷಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿಗೆ ಕನಿಷ್ಠ 10 ಸಾವಿರ ರೂ.ಗಳ ಬಡ್ಡಿ ರಹಿತ ಸಾಲ ನೀಡಲಾಗಿದೆ. ಲಕ್ಷಗಟ್ಟಲೆ ಬೀದಿಬದಿ ವ್ಯಾಪಾರಿಗಳು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಿರುವುದು ಯೋಜನೆಯ ದೊಡ್ಡ ಸಾಧನೆಯಾಗಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಯೋಜನೆಗೆ 468 ಕೋಟಿ ರೂ ಮೀಸಲಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೀದಿ ಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಜಾರಿಗೊಂಡ ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ), ಕೈಗೆಟುಕುವ ಕಾರ್ಯಸಾಧ್ಯತೆ ಬಂಡವಾಳ ಸಾಲವನ್ನು ಪಡೆಯಲು ಬೀದಿ ಬದಿ ವ್ಯಾಪಾರಿಗಳಿಗೆ ಅನುವು ಮಾಡಿಕೊಡುವ ಕೇಂದ್ರ ವಲಯದ ಯೋಜನೆಯಾಗಿದೆ. ಇದರಡಿ ವ್ಯಾಪಾರಿಗಳು ತಲಾ ರೂ.10,000ವರೆಗೆ ಸಾಲ ಪಡೆಯಬಹುದು. 50 ಲಕ್ಷ ಬೀದಿ ಬದಿ ವ್ಯಾಪಾರಿಗಳನ್ನು ತಲುಪುವ ಗುರಿಯನ್ನು ಈ ಯೋಜನೆ ಹೊಂದಿದೆ.
ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯು ಕರೋನಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಬೀದಿ ವ್ಯಾಪಾರಿಗಳಿಗೆ ಹಣಕಾಸಿನ ನೆರವು ನೀಡಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪ್ರಾರಂಭಿಸಿದೆ. ಈ ಯೋಜನೆಯಡಿ ಸಾಲ ಪಡೆದು ಬೀದಿ ಬದಿ ವ್ಯಾಪಾರಿಗಳು ಕೊರೋನಾ ಅವಧಿಯಲ್ಲಿ ನಿಂತಿದ್ದ ತಮ್ಮ ವಹಿವಾಟುಗಳನ್ನು ಮತ್ತೆ ಆರಂಭಿಸಿದ್ದಾರೆ. ಈ ಮೂಲಕ ಹೊಸ ಜೀವನವನ್ನು ಕಟ್ಟಿಕೊಂಡಿದ್ದಾರೆ. ನಷ್ಟದಲ್ಲಿದ್ದ ವ್ಯಾಪಾರಿಗಳಿಗೆ ಈ ಯೋಜನೆ ಸಂಜೀವಿನಿಯಂತೆ ಕಾರ್ಯನಿರ್ವಹಿಸಿದೆ.
2020ರ ಜೂನ್ 1ರಂದು ಆರಂಭಗೊಂಡ ಈ ಯೋಜನೆಗೆ, ಜುಲೈ 2ರಂದು ಸಾಲದ ಅರ್ಜಿ ಸಲ್ಲಿಕೆ ಪ್ರಾರಂಭವಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.