
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.
“ಊರು ಕೊಳ್ಳೆ ಹೋದ ಮೇಲೆ ಡಿಡ್ಡಿ ಬಾಗಿಲು ಹಾಕಿದಂತೆ” ಎಂಬಂತೆ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಮತ್ತಿತರ ಪ್ರಮುಖರು ಭಾಗವಹಿಸಿ ಪಕ್ಷದ ನಿಲುವನ್ನು ಸಮರ್ಥವಾಗಿ ಮಂಡಿಸಿದ್ದಾರೆ ಎಂದು ಅವರು ವಿವರ ನೀಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ತಮಿಳುನಾಡಿಗೆ ನೀರನ್ನು ಬಿಟ್ಟು ಇದೀಗ ಸರ್ವ ಪಕ್ಷ ಸಭೆ ಕರೆದಿರುವುದು ಸರಿಯಲ್ಲ. 26ನೇ ತಾರೀಕು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ರಾಜ್ಯದ ಪರವಾಗಿ ವಾದ ಮಂಡನೆ ಮಾಡಬೇಕು. ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲವೆಂದು ಮನದಟ್ಟು ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ ಕರೆದಿರುವುದು ಸರಿಯಲ್ಲ. ಮೇಕೆದಾಟು ಯೋಜನೆ ಬಗ್ಗೆ ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ಮುಂದೆ ಸಾಗಬೇಕಿದೆ ತಮಿಳುನಾಡಿನಲ್ಲಿ ಇರುವ ಡ್ಯಾಮ್ಗಳ ನೀರಿನ ವಿವರ, ಅಲ್ಲಿನ ರೈತರ ಬೆಳೆ ಪದ್ಧತಿ, ಮೂರು ಬೆಳೆಯನ್ನ ಬೆಳೆಯುತ್ತಿರುವುದರ ಬಗ್ಗೆ ಅವರು ತಿಳಿಸಿದರು. ನಮ್ಮ ರೈತರು ಕೇವಲ ಎರಡು ಬೆಳೆ ಮಾತ್ರ ಬೆಳೆಯುತ್ತಿರುವುದರ ಬಗ್ಗೆ ಸುಪ್ರೀಂಕೋರ್ಟಿಗೆ ಮನದಟ್ಟು ಮಾಡಿಕೊಟ್ಟು ಮೇಕೆದಾಟು ಯೋಜನೆ ಬಗ್ಗೆ ಅನುಮತಿ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.
ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನೀರಾವರಿ ಸಭೆಯನ್ನೇ ಕರೆದಿಲ್ಲ. ಐಸಿಸಿ ಸಭೆಯಲ್ಲಿ ಕರ್ನಾಟಕದ ರೈತರಿಗೆ ರಾಗಿ ಬೆಳೆಯಿರಿ, ಹುರುಳಿ ಬೆಳೆಯಿರಿ ಎಂದು ಹೇಳಿ ತಮಿಳುನಾಡು ರೈತರಿಗೆ ನೀರು ಕೊಟ್ಟಿದ್ದೀರಾ ಎಂದು ಆಕ್ಷೇಪಿಸಿದರು. ಜೂನ್, ಜುಲೈ, ಆಗಸ್ಟ್ ತಿಂಗಳಿನಲ್ಲಿ ತಮಿಳುನಾಡಿಗೆ ಕೊಡಬೇಕಾಗಿರುವ ನೀರಿಗಿಂತಲೂ ಕಡಿಮೆ ನೀರನ್ನು ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ, ಕರ್ನಾಟಕದ ರೈತರಿಗೆ ಬಿಟ್ಟಿರುವ ನೀರು ಎಷ್ಟು ಎಂದು ಹೇಳುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇಕೆದಾಟು ಮತ್ತು ಮಹದಾಯಿ ಯೋಜನೆ ಬಗ್ಗೆ ಸರ್ವಪಕ್ಷದ ನಿಯೋಗವನ್ನು ಪ್ರಧಾನಮಂತ್ರಿ ಬಳಿಗೆ ಕೊಂಡೊಯ್ಯಲು ಸಲಹೆ ನೀಡಿದರು. ಆಗ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಎರಡು ಎರಡು ವಿಚಾರಗಳು ಸುಪ್ರೀಂ ಕೋರ್ಟ್ನಲ್ಲಿ ಇವೆ. ಗೋವಾ ಸರ್ಕಾರ ಮಹದಾಯಿ ವಿಚಾರವಾಗಿ ಅರಣ್ಯಾಧಿಕಾರಿ ಮೂಲಕ ಆಕ್ಷೇಪಣ ಪತ್ರವನ್ನು ನೀಡಿದೆ ಎಂದರು. ರಾಜ್ಯದ ರೈತರ ಹಿತವನ್ನು ಕಾಪಾಡಲು ಬಿಜೆಪಿ ಬದ್ಧವಾಗಿದೆ ಆದ್ದರಿಂದ ರೈತರ ಪರವಾಗಿ ನಾವು ಸಹಕಾರ ಕೊಡುತ್ತೇವೆ ರೈತರ ಹಿತ ಕಾಪಾಡಲು ಬಿಜೆಪಿ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.