ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ದೊಡ್ಡ ಸಂಕಷ್ಟದಲ್ಲಿ ಸಿಲುಕಿದ್ದು, ದೆಹಲಿ ಸರ್ಕಾರದ ಸಚಿವ ರಾಜ್ ಕುಮಾರ್ ಆನಂದ್ ಅವರ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ನಿವಾಸದ ಮೇಲೆ ಗುರುವಾರ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ವರದಿಗಳ ಪ್ರಕಾರ, ದೆಹಲಿ ಸಚಿವರಿಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ಇಡಿ ಶೋಧ ನಡೆಸುತ್ತಿದೆ. ಮುಂಜಾನೆ ಆರಂಭವಾದ ಶೋಧ ಕಾರ್ಯ ಇನ್ನೂ ಮುಂದುವರಿದಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರ ಏಜೆನ್ಸಿಯಿಂದ ಕೇಜ್ರಿವಾಲ್ ಅವರ ನಿಗದಿತ ವಿಚಾರಣೆಗೂ ಮುಂಚಿತವಾಗಿ ದೆಹಲಿ ಸಚಿವರ ನಿವಾಸದ ಮೇಲೆ ದಾಳಿಗಳು ನಡೆದಿವೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಹಿಂದೆ ಏಪ್ರಿಲ್ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕರನ್ನು ವಿಚಾರಣೆಗೆ ಒಳಪಡಿಸಿದ ನಂತರ ಈ ಎಲ್ಲಾ ಬೆಳವಣಿಗೆಗಳು ನಡೆಯುತ್ತಿವೆ. ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಪ್ರಕರಣದಲ್ಲಿ ಏಜೆನ್ಸಿಗಳು ಬಂಧಿಸಿದ ರೀತಿಯಲ್ಲಿಯೇ ಕೇಜ್ರಿವಾಲ್ ಅವರನ್ನು ಬಂಧಿಸಬಹುದು ಎಂಬ ಆತಂಕವನ್ನು ಪಕ್ಷ ವ್ಯಕ್ತಪಡಿಸಿದೆ.
ಅಬಕಾರಿ ನೀತಿ ವಿಷಯದಲ್ಲಿ ಎಎಪಿಯನ್ನು ಆರೋಪಿಯನ್ನಾಗಿ ಮಾಡುವ ಕುರಿತು ಚಿಂತನೆ ನಡೆಸುತ್ತಿದ್ದೇವೆ ಎಂದು ಸಿಬಿಐ ಮತ್ತು ಇಡಿ ಈ ಹಿಂದೆ ಸುಪ್ರೀಂಕೋರ್ಟ್ಗೆ ತಿಳಿಸಿದ್ದವು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಸೋಮವಾರ, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೋನದ ತನಿಖೆ ನಡೆಸುತ್ತಿರುವ ಇಡಿ ದೆಹಲಿ ಮುಖ್ಯಮಂತ್ರಿಗೆ ಸಮನ್ಸ್ ನೀಡಿದೆ. 338 ಕೋಟಿ ರೂಪಾಯಿ ಹಣದ ಜಾಡನ್ನು ಪತ್ತೆ ಮಾಡಲಾಗುತ್ತಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.