ಯಲ್ಲಾಪುರ: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಅತ್ಯಂತ ಭ್ರಷ್ಟ ಸರಕಾರ ಎಂದು ನಾವು ಹೇಳಿಲ್ಲ. ಅದೇ ಪಕ್ಷದ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರ ಬಸವರಾಜ ರಾಯರೆಡ್ಡಿಯವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನರು ಭಾರಿ ಸಂಖ್ಯೆಯಲ್ಲಿ ಸೇರಿದ್ದರ ಕುರಿತು ಮೆಚ್ಚುಗೆ ಸೂಚಿಸಿದರು. ಬೆಲೆ ಏರಿಕೆ- ಭ್ರಷ್ಟಾಚಾರದ ಕಾಂಗ್ರೆಸ್ ಸರಕಾರದ ವಿರುದ್ಧ ಜನಜಾಗೃತಿ ಮೂಡಿಸಲು ನಾವು ಹೊರಟಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ ಮಾಡುವ ಕ್ರಮ ಎಂದು ಟೀಕಿಸಿದರು.
ದಲಿತರ ಅಭ್ಯುದಯಕ್ಕೆ ಬಳಕೆ ಆಗಬೇಕಿದ್ದ 38 ಸಾವಿರ ಕೋಟಿ ಎಸ್ಇಟಿ, ಟಿಎಸ್ಪಿ ಹಣವನ್ನು ಸಿದ್ದರಾಮಯ್ಯನವರು ಬೇರೆ ಕಡೆ ವರ್ಗಾವಣೆ ಮಾಡಿದ್ದಾರೆ; ಅಲ್ಲೂ ಕೂಡ ಭ್ರಷ್ಟಾಚಾರ ನಡೆಯುತ್ತಿದೆ. ಇದರ ವಿರುದ್ಧ ಜನಾಕ್ರೋಶ ವ್ಯಕ್ತಪಡಿಸುತ್ತಿದ್ದೇವೆ ಎಂದು ವಿವರಿಸಿದರು.
20 ತಿಂಗಳಲ್ಲಿ ಸಿದ್ದರಾಮಯ್ಯನವರು ಗರಿಷ್ಠ ಬೆಲೆ ಏರಿಕೆ ಮಾಡಿದ್ದಾರೆ. ಇವರು ಒಂದು ತಜ್ಞರ ಸಮಿತಿ ನೇಮಿಸಿಕೊಂಡಿದ್ದು, ಅದು ಅಭಿವೃದ್ಧಿ ಕಡೆ ಗಮನ ಕೊಡುವಂಥದ್ದಲ್ಲ. ಯಾವ ಅಗತ್ಯ ವಸ್ತುಗಳ ಮೇಲೆ ಬೆಲೆ ಹೆಚ್ಚಿಸಬಹುದೆಂದು ಅದು ಸಲಹೆ ನೀಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಅವರು ದೂರಿದರು.
ಗ್ಯಾರಂಟಿ ಹೆಸರು ಹೇಳಿಕೊಂಡು ಕಾಂಗ್ರೆಸ್ಸಿಗರು ಜನರ ಕಣ್ಣಿಗೆ ಬೂದಿ ಎರಚುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಕಳೆದ 20 ತಿಂಗಳಲ್ಲಿ 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ಸಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆಗೆ ಮೊದಲು ಕೃಷ್ಣೆಯ ಕಡೆಗೆ ಪಾದಯಾತ್ರೆ ಮಾಡಿದ್ದರು. ಆದರೆ, ಅಧಿಕಾರ ಬಂದರೂ ಒಂದು ರೂಪಾಯಿಯನ್ನು ನೀರಾವರಿ ಯೋಜನೆಗೆ ನೀಡಿಲ್ಲ. ಡಿ.ಕೆ.ಶಿವಕುಮಾರರು ಮೇಕೆದಾಟು ಪಾದಯಾತ್ರೆ ಮಾಡಿದರು. ಅಧಿಕಾರಕ್ಕೆ ಬರುವವರೆಗೆ ಮಾತ್ರ ಎಂಬಂತಾಯಿತು. ಅಧಿಕಾರ ಸಿಕ್ಕಿದ ಬಳಿಕ ಮೇಕೆದಾಟು ಮರೆತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರವು ಕಳೆದ 20 ತಿಂಗಳಲ್ಲಿ ಡೀಸೆಲ್ಗೆ ಏಳೂವರೆ ರೂಪಾಯಿ ಹೆಚ್ಚಿಸಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಬಳಸುವ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ರೈತರು ಟ್ರ್ಯಾಕ್ಟರ್ ಇತರ ಯಂತ್ರಗಳಿಗೆ ಡೀಸೆಲ್ ಬಳಸುತ್ತಾರೆ. ಅವರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.
ಶಕ್ತಿ ಯೋಜನೆ ಜಾರಿ ತಂದ ರಾಜ್ಯ ಸರಕಾರವು ಕೆಎಸ್ಆರ್ಟಿಸಿಗೆ 6,500 ಕೋಟಿ ರೂ. ಕೊಡಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಓಡಾಡುವ ಸಾವಿರಾರು ಸರಕಾರಿ ಬಸ್ಗಳ ಓಡಾಟ ಸ್ಥಗಿತವಾಗಿದೆ. ಶಾಲಾ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಈಗ ಬಸ್ ಸಿಗುತ್ತಿಲ್ಲ ಎಂದು ವಿಜಯೇಂದ್ರ ಅವರು ಬೇಸರ ವ್ಯಕ್ತಪಡಿಸಿದರು.
ಹಾಲಿನ ದರ 9 ರೂ. ಹೆಚ್ಚಿಸಿದ್ದು, ಬಡಜನರು ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಲು ಸಾಧ್ಯ ಆಗುತ್ತಿಲ್ಲ. ಕಾಂಗ್ರೆಸ್ ಸರಕಾರವು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.