ನವದೆಹಲಿ: ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಕಾಶ್ಮೀರದ ಬಗ್ಗೆ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಗುರುವಾರ ವಿದೇಶಾಂಗ ಸಚಿವಾಲಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಕಾಶ್ಮೀರ ಪಾಕಿಸ್ಥಾನದ “ಕಂಠನಾಳ” ಎಂದು ಮುನೀರ್ ಹೇಳಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ಥಾನ ಸೇನಾ ಮುಖ್ಯಸ್ಥರ ಹೇಳಿಕೆಯ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಖಂಡಿತ ವಿದೇಶಿಯೊಬ್ಬರ ಕಂಠನಾಳದಲ್ಲಿ ಹೇಗೆ ಇರಲು ಸಾಧ್ಯ? ಇದು ಭಾರತದ ಕೇಂದ್ರಾಡಳಿತ ಪ್ರದೇಶ. ಪಾಕಿಸ್ಥಾನದೊಂದಿಗಿನ ಅದರ ಏಕೈಕ ಸಂಬಂಧವೆಂದರೆ ಆ ದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳನ್ನು ಬಿಟ್ಟುಕೊಡುವುದು” ಎಂದಿದ್ದಾರೆ.
ಜನರಲ್ ಮುನೀರ್ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ಕಾಶ್ಮೀರದ ಬಗ್ಗೆ ನನ್ನ ನಿಲುವು ಸಂಪೂರ್ಣವಾಗಿ ಸ್ಪಷ್ಟವಾಗಿದೆ. ಅದು ನಮ್ಮ ಕಂಠನಾಳ, ನಾವು ಅದನ್ನು ಮರೆಯುವುದಿಲ್ಲ ಮತ್ತು ಭಾರತೀಯ ಆಕ್ರಮಣದ ವಿರುದ್ಧದ ವೀರೋಚಿತ ಹೋರಾಟದಲ್ಲಿ ನಮ್ಮ ಕಾಶ್ಮೀರಿ ಸಹೋದರರನ್ನು ನಾವು ಕೈಬಿಡುವುದಿಲ್ಲ” ಎಂದು ಹೇಳಿದ್ದರು.
ಪಾಕಿಸ್ತಾನದ ಸೃಷ್ಟಿಗೆ ಆಧಾರವಾಗಿರುವ ದ್ವಿರಾಷ್ಟ್ರ ಸಿದ್ಧಾಂತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೇ ಮುಸ್ಲಿಮರು ಜೀವನದ ಎಲ್ಲಾ ವಿಚಾರಗಳಲ್ಲಿ ಹಿಂದೂಗಳಿಗಿಂತ ಭಿನ್ನರು ಎಂದು ಹೇಳಿಕೆ ನೀಡಿದ್ದರು. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು, ನಾವು ಒಂದೇ ರಾಷ್ಟ್ರವಲ್ಲ. ಅದಕ್ಕಾಗಿಯೇ ನಮ್ಮ ಪೂರ್ವಜರು ಈ ದೇಶವನ್ನು ರಚಿಸಲು ಹೋರಾಡಿದರು. ನಾವು ಹಿಂದೂಗಳಿಗಿಂತ ತುಂಬಾ ವಿಭಿನ್ನರು, ನಮ್ಮ ಪೂರ್ವಜರು ಮತ್ತು ನಾವು ಈ ದೇಶದ ನಿರ್ಮಾಣಕ್ಕೆ ಸಾಕಷ್ಟು ತ್ಯಾಗ ಮಾಡಿದ್ದೇವೆ. ಅದನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ. ನನ್ನ ಪ್ರೀತಿಯ ಸಹೋದರರೇ, ಸಹೋದರಿಯರೇ, ಹೆಣ್ಣುಮಕ್ಕಳೇ ಮತ್ತು ಪುತ್ರರೇ, ದಯವಿಟ್ಟು ಪಾಕಿಸ್ತಾನದ ಈ ಕಥೆಯನ್ನು ಮರೆಯಬೇಡಿ. ಪಾಕಿಸ್ತಾನದೊಂದಿಗಿನ ಅವರ ಬಾಂಧವ್ಯ ಎಂದಿಗೂ ದುರ್ಬಲವಾಗದಂತೆ ಈ ಕಥೆಯನ್ನು ನಿಮ್ಮ ಮುಂದಿನ ಪೀಳಿಗೆಗೆ ಹೇಳಲು ಮರೆಯಬೇಡಿ ಎಂದು ಅವರು ಹೇಳಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಜೈಸ್ವಾಲ್, “ಪಾಕಿಸ್ತಾನವು ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ ಪಾಕಿಸ್ತಾನವೂ ಮುಂಬೈ ದಾಳಿಯ ಇತರ ಅಪರಾಧಿಗಳನ್ನು ಕೂಡ ಶಿಕ್ಷೆಗೆ ಒಳಪಡಿಸಬೇಕು. ಪಾಕಿಸ್ತಾನ ಎಷ್ಟೇ ಪ್ರಯತ್ನಿಸಿದರೂ ಅದು ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು ಎಂಬ ಅದರ ಕುಖ್ಯಾತಿ ಕಡಿಮೆಯಾಗುವುದಿಲ್ಲ” ಎಂದು ಜೈಸ್ವಾಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.