ಗದಗ: ರಾಜ್ಯದ ಕಾಂಗ್ರೆಸ್ ಸರಕಾರವು 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು, ರೈತರು, ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ವಿಚಾರವನ್ನು ಪ್ರಮುಖವಾಗಿ ತಿಳಿಸುತ್ತಿದ್ದೇವೆ. ಅಲ್ಪಸಂಖ್ಯಾತರ ಓಲೈಕೆ ಮಾಡುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಹಿಂದೂ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಿ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.
ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರವು ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ರೂಪಾಯಿಗಳನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿ ದುರುಪಯೋಗ ಮಾಡಿಕೊಂಡಿದೆÉ ಎಂದು ಆಕ್ಷೇಪಿಸಿದರು. ಇಂಥ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೇವೆ ಎಂದು ವಿವರಿಸಿದರು.
ಪೆಟ್ರೋಲ್ ಮೇಲೆ 3.50 ರೂ, ಡೀಸೆಲ್ ಮೇಲೆ 5.50 ರೂ. ಹೆಚ್ಚಿಸಿದ್ದಾರೆ. ಒಂದೆಡೆ ಗ್ಯಾರಂಟಿಗಳ ಬಗ್ಗೆ ನಿರಂತರವಾಗಿ ಜಾಹೀರಾತು ಕೊಡುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರಕಾರ ಜನಪ್ರಿಯ ಸರಕಾರವಲ್ಲ; ಇದು ಜಾಹೀರಾತಿನ ಸರಕಾರ ಎಂದು ಆರೋಪಿಸಿದರು.
ಪತ್ರಿಕೆಗಳಲ್ಲಿ, ಟಿ.ವಿಗಳಲ್ಲಿ ಕೇವಲ ಜಾಹೀರಾತು ನೀಡಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ. ಪೆಟ್ರೋಲ್ ಮೇಲೆ 3.50 ರೂ, ಡೀಸೆಲ್ ಮೇಲೆ 5.50 ರೂ. ಹೆಚ್ಚಿಸಿದರೂ ಇದರ ಲಾಭ ಕರ್ನಾಟಕಕ್ಕೆ ಸಿಗುತ್ತಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ದೂರಿದರು.
ಕಳೆದ 20 ತಿಂಗಳ ಸಿದ್ದರಾಮಯ್ಯನವರ ಸರಕಾರದ ಅವಧಿಯಲ್ಲಿ ಗದಗ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯಲ್ಲಿ ಹೊಸ ಯೋಜನೆಗಳು ಕಾರ್ಯಾರಂಭ ಮಾಡಿಲ್ಲ. ಹಿಂದೆ ಬಿಜೆಪಿಯ ಯಡಿಯೂರಪ್ಪನವರು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಿದ್ದಾಗ ಗದಗ ಜಿಲ್ಲೆಗೆ ನಾಲ್ಕರಿಂದ 5 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದರು. ಇವತ್ತು ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ಬಳಿಕ ಎಷ್ಟು ನೂರು ಕೋಟಿ ಹಣವನ್ನು ಗದಗ ಜಿಲ್ಲೆ ಅಭಿವೃದ್ಧಿಗೆ ನೀಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು.
ಇವರ ಯೋಗ್ಯತೆಗೆ ಕುಡಿಯುವ ನೀರಿನ ಹಾಹಾಕಾರವನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಇನ್ನು ಅಭಿವೃದ್ಧಿಗೆ ದುಡ್ಡು ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ತಿಳಿಸಿದರು. ನಮಗೆ ಸಿದ್ದರಾಮಯ್ಯನವರ ಕುರಿತು ಹೊಟ್ಟೆಕಿಚ್ಚಿಲ್ಲ. ಆದರೆ, ಗ್ಯಾರಂಟಿ ಬಗ್ಗೆ ಬಹಳಷ್ಟು ಚರ್ಚೆ ಆಗುತ್ತಿದೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ರೈತರು ಹೊಲಕ್ಕೆ ವಿದ್ಯುತ್ ಸಂಪರ್ಕ ಪಡೆಯಲು 25 ಸಾವಿರ ಕಟ್ಟಿದರೆ ಸಾಕಿತ್ತು. ಇವತ್ತು ಸಿದ್ದರಾಮಯ್ಯನವರ ಆಡಳಿತದಲ್ಲಿ 2.5 ಲಕ್ಷದಿಂದ 3 ಲಕ್ಷ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು. 20 ತಿಂಗಳಲ್ಲಿ ಹಾಲಿನ ದರ 9 ರೂ. ಹೆಚ್ಚಿಸಿದ್ದಾರೆ. ಬಡವರು ಏನು ಮಾಡಬೇಕು ಎಂದು ಕೇಳಿದರು.
ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರು ಮತ್ತು ಶಾಸಕರಾದ ಸಿ.ಸಿ. ಪಾಟೀಲ್, ಜಿ. ಜನಾರ್ಧನ್ ರೆಡ್ಡಿ, ಶಾಸಕ ಡಾ. ಚಂದ್ರು ಲಮಾಣಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಮಾಜಿ ಶಾಸಕ ಕಳಕಪ್ಪ ಬಂಡಿ, ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರಡಗಿ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.