ಯಾದಗಿರಿ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಂದು ಅವರು ತಿಳಿಸಿದ್ದಾರೆ.
ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಕೊಟ್ಟಿದ್ದು, 6ನೇ ಗ್ಯಾರಂಟಿಗೆ ಹೆಚ್ಚು ಪ್ರಚಾರ ಕೊಟ್ಟಿಲ್ಲ; ಅದುವೇ ಬೆಲೆ ಏರಿಕೆಯ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು. ರಾಜ್ಯದ ಕಾಂಗ್ರೆಸ್ ಸರಕಾರವು 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು, ರೈತರು, ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಟೀಕಿಸಿದರು.
ಕಾಶ್ಮೀರದಲ್ಲಿ ಹಿಂದೂ ಪಂಡಿತರಿಗೆ ಅವಮಾನ ಮಾಡಿದ, ಸೈನಿಕರ ಸಾವಿಗೆ ಕಾರಣವಾದ 370ನೇ ವಿಧಿಯನ್ನು ಬಿಜೆಪಿ ಸರಕಾರ ರದ್ದು ಮಾಡಿದೆ. ನಿನ್ನೆ ನಡೆದ ಭಯೋತ್ಪಾದಕರ ದಾಳಿ ಘಟನೆಯ ಮಾಹಿತಿ ತಿಳಿದ ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯದಿಂದ ಧಾವಿಸಿ ಬಂದಿದ್ದಾರೆ ಎಂದು ವಿಜಯೇಂದ್ರ ಅವರು ವಿವರಿಸಿದರು.
ಹಿಂದೂಗಳ ಮಾರಣಹೋಮದ ವಿಚಾರ ತಿಳಿದಾಕ್ಷಣ ಅಮಿತ್ ಶಾ, ಅಧಿಕಾರಿಗಳನ್ನು ಕಳಿಸಿದ್ದಾರೆ. ನಾವೆಲ್ಲರೂ ಹಿಂದೂಗಳು ಮೊದಲು. ಆ ಜಾತಿ, ಈ ಜಾತಿ ಅಲ್ಲ; 28 ಜನರ ಹತ್ಯೆಗೆ ಪಾಕಿಸ್ತಾನ ಬೆಲೆ ತೆರಲೇಬೇಕು ಎಂದು ನುಡಿದರು. ಉಗ್ರರ ವಿರುದ್ಧ ಪ್ರಧಾನಿಯವರು ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪೆಟ್ರೋಲ್, ಸ್ಟಾಂಪ್ ಡ್ಯೂಟಿ ದರ ಏರಿಸಿದ್ದಾರೆ ಎಂದು ಖಂಡಿಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರೈತರು ಹೊಲಕ್ಕೆ ವಿದ್ಯುತ್ ಸಂಪರ್ಕ ಪಡೆಯಲು 25 ಸಾವಿರ ಕಟ್ಟಿದರೆ ಸಾಕಿತ್ತು. ಇವತ್ತು ಕಾಂಗ್ರೆಸ್ಸಿನ ಸಿದ್ದರಾಮಯ್ಯನವರ ಆಡಳಿತದಲ್ಲಿ 2.5 ಲಕ್ಷದಿಂದ 3 ಲಕ್ಷ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು. ಬಡವರ, ರೈತರ ಮೇಲೆ ಹೊರೆ ಆಗಿದೆ ಎಂದು ಟೀಕಿಸಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರವು 6 ಸಾವಿರ ಹಾಗೂ ಯಡಿಯೂರಪ್ಪ ಅವರು 4 ಸಾವಿರ ಕೊಡುತ್ತಿದ್ದರು. ಅದನ್ನೂ ಈಗ ನಿಲ್ಲಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಬಡವರು ರಕ್ತಪರೀಕ್ಷೆ ಮಾಡಿಸಿಕೊಳ್ಳಲು 3ರಿಂದ 4 ಪಟ್ಟು ಹೆಚ್ಚು ದರ ಕೊಡಬೇಕಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹಾಲಿನ ಮೇಲೆ 9 ರೂ. ಹೆಚ್ಚಿಸಿದ್ದಾರೆ ಎಂದು ವಿವರಿಸಿದರು. ಪೆಟ್ರೋಲ್ ಮೇಲೆ 3 ರೂ, ಡೀಸೆಲ್ ಮೇಲೆ 5.50 ರೂ. ಹೆಚ್ಚಿಸಿದ್ದಾರೆ ಎಂದು ದೂರಿದರು.
ಅಭಿವೃದ್ಧಿ ಕೆಲಸ ಕಾರ್ಯ ಶೂನ್ಯವಾಗಿದೆ. ಸಮಾಜ- ಸಮಾಜಗಳ ನಡುವೆ ಈ ಸರಕಾರ ವಿಷಬೀಜ ಬಿತ್ತುತ್ತಿದೆ. ಜಾತಿ- ಜಾತಿಗಳ ನಡುವೆ ಕಂದಕ ನಿರ್ಮಿಸುವ ಕಾರ್ಯವನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಜಯೇಂದ್ರ ಅವರು ಟೀಕಿಸಿದರು.
ಈ ಸರಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿದ್ದು, ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಹಣ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ ಸರಕಾರ ಇದ್ದಾಗ ಯಡಿಯೂರಪ್ಪ ಅವರು ಯಾದಗಿರಿ ಜಿಲ್ಲೆ ಘೋಷಿಸಿ ನೂರಾರು ಕೋಟಿ ಅಭಿವೃದ್ಧಿ ಮೊತ್ತ ನೀಡಿದ್ದಾರೆ ಎಂದು ವಿವರಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.