ಶಿವಮೊಗ್ಗ: ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ವಿವರಿಸಿದರು.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂಬರ್ 1 ಆರ್ಸಿಬಿ ಅಲ್ಲ; ಆರ್ಸಿಬಿ, ಕೆಎಸಿಎ, ಡಿಎನ್ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಎಡರನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3; ನಂತರದ ಹೊಣೆಗಾರರು ಆರ್ಸಿಬಿ, ಕೆಎಸಿಎ, ಡಿಎನ್ಎ ಎಂದು ತಿಳಿಸಿದರು.
ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಬೇಕೆಂದು ಬಿಜೆಪಿ ಆಗ್ರಹಿಸಿತ್ತು. ಸಿಐಡಿ ತನಿಖೆಗೆ ಕೊಟ್ಟರು. ಮತ್ತೊಂದು ಕಡೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಿದ್ದಾರೆ. ಅವರಿಗೆ ಬೇಕಾದವರನ್ನು ನೇಮಿಸಿ ರಾಜ್ಯ ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟು ಅಧಿಕಾರಿಗಳ ಮೇಲೆ ಗೂಬೆ ಕೂರಿಸಿ ಹೊಣೆಯಿಂದ ತಪ್ಪಿಸಿಕೊಳ್ಳಲೆಂದೇ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರಕಾರಕ್ಕೆ ಕಿಂಚಿತ್ತಾದರೂ ಮಾನಮರ್ಯಾದೆ ಇದ್ದರೆ ಹೈಕೋರ್ಟ್ನ ಸಿಟ್ಟಿಂಗ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಲಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.
ಸಿಎಂ, ಡಿಸಿಎಂ ನಡುವೆ ಪೈಪೋಟಿ ಇತ್ತು. ತಮ್ಮ ಜನಪ್ರಿಯತೆಗಾಗಿ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಕಾರ್ಯಕ್ರಮ ಆಯೋಜಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಏರ್ಪಡಿಸಿದ್ದರು ಎಂದು ಪ್ರಶ್ನೆಗೆ ಉತ್ತರಿಸಿದರು. ಇವರ ಗೊಂದಲದಿಂದ ಬಲಿ ಆದುದು ಯಾರು? ಯಾರ ಮರ್ಯಾದೆ ಹೋಗಿದೆ? ಎಂದು ವಿಜಯೇಂದ್ರ ಅವರು ಕೇಳಿದರು.
ಚಿನ್ನಸ್ವಾಮಿ ಸ್ಟೇಡಿಯಂ ವಿಚಾರದಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸಿಎಂ, ಡಿಸಿಎಂ ನಡುವೆ ಸಂಬಂಧವೇ ಇಲ್ಲದ ಸರಕಾರ ಎಂದು ಮುಖ್ಯಮಂತ್ರಿಗಳು ಹೇಳಿಕೆ ಕೊಡಲಿ ಎಂದು ಅವರು ಒತ್ತಾಯಿಸಿದರು.
ವಿಧಾನಸೌಧದ ಮುಂದೆ ರಾಜಕಾರಣಿಗಳ ಉಪಟಳ ತಡೆಯಲು ಸಾಧ್ಯವಾಗದೆ ಆರ್ಸಿಬಿ ಅಭಿಮಾನಿಗಳು ವಿಧಾನಸೌಧದ ಮೆಟ್ಟಿಲ ಬಳಿ ಚಪ್ಪಲಿ, ಕಲ್ಲು ತೂರಿದ್ದಾರೆ. ಇವರಿಗೆ ಸೆಲ್ಫಿ ಚಟ, ಜನಪ್ರಿಯತೆಯ ಚಟ ಇತ್ತು. ರಾಜ್ಯದ ಗೌರವವನ್ನೂ ಹಾಳು ಮಾಡಿದ್ದಾರೆ ಎಂದು ಟೀಕಿಸಿದರು.
ಮಾನ್ಯ ರಾಜ್ಯಪಾಲರನ್ನು ತಪ್ಪು ದಾರಿಗೆ ಎಳೆದು ಅವರನ್ನೂ ಕೂರಿಸಿಕೊಂಡಿದ್ದರು. ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಲು ನಾವು ಹೇಳಿದ್ದೇವಾ? ನಾವು ಮೆರವಣಿಗೆಗೆ ಅವಕಾಶ ಕೋರಿದ್ದೆವು. ಮೆರವಣಿಗೆ ಮಾಡಿದ್ದರೆ ಬಹುಶಃ ದುರ್ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು. ನಾವು ಅಭಿಮಾನಿಗಳ ಪರವಾಗಿ ಕರೆ ಕೊಟ್ಟಿದ್ದೇವೆ. ಆದರೆ, ಸರಕಾರಕ್ಕೆ ಜವಾಬ್ದಾರಿ ಇಲ್ಲವೇ ಎಂದು ಕೇಳಿದರು. ಕಾನೂನು- ಸುವ್ಯವಸ್ಥೆ ಸರಕಾರದ ಹೊಣೆಯಲ್ಲವೇ? ಅದು ವಿಪಕ್ಷದ ಜವಾಬ್ದಾರಿಯೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ದೇಶದ- ನಾಡಿನ ಜನರ ಭಾವನೆಯನ್ನು ರಾಜ್ಯದ ಮುಖ್ಯಮಂತ್ರಿಗಳಿಗೆ ತಿಳಿಸುವ ಉದ್ದೇಶದಿಂದ ಇವತ್ತು ಸಿಎಂಗೆ ಬಹಿರಂಗ ಪತ್ರ ಬರೆದಿರುವುದಾಗಿ ಅವರು ಹೇಳಿದರು. ಪ್ರಾಣ ಕಳಕೊಂಡ, ನೊಂದ ಕುಟುಂಬಗಳ ಸದಸ್ಯರ ಭಾವನೆಯು ರಾಜ್ಯದ ಸಿಎಂ, ಡಿಸಿಎಂ, ರಾಜ್ಯ ಸರಕಾರಕ್ಕೆ ಅರ್ಥ ಆಗಬೇಕೆಂಬ ನಿಟ್ಟಿನಲ್ಲಿ ಪತ್ರ ಬರೆದುದಾಗಿ ಸ್ಪಷ್ಟಪಡಿಸಿದರು. ಪತ್ರ ನೋಡಿ ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸ ನನಗಿಲ್ಲ; ರಾಜ್ಯ ಸರಕಾರ ದಪ್ಪ ಚರ್ಮದ್ದು ಎಂದು ವಿಜಯೇಂದ್ರ ಅವರು ವ್ಯಂಗ್ಯವಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.