ಬೆಂಗಳೂರು: ನಾನು, ನಮ್ಮ ವಿಪಕ್ಷ ನಾಯಕರು, ನಮ್ಮ ಶಾಸಕ ಮಿತ್ರರ ತಂಡ ಇವತ್ತು ಮದ್ದೂರಿಗೆ ಭೇಟಿ ನೀಡಲಿದ್ದೇವೆ. ಅಲ್ಲಿನ ಪರಿಸ್ಥಿತಿ, ಸತ್ಯಾಸತ್ಯತೆ ಕುರಿತು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಲ್ಲಿ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತರಿಗೆ ಧೈರ್ಯ ತುಂಬಲಿದ್ದೇವೆ. ರಾಜ್ಯದಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಇದಕ್ಕೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳು ಗಣೇಶನ ಹಬ್ಬವನ್ನು ನೆಮ್ಮದಿಯಿಂದ ಆಚರಿಸಲು ಸಾಧ್ಯ ಇಲ್ಲವಾಗಿದೆ. ಕಾಂಗ್ರೆಸ್ ಸರಕಾರ ಯಾವ ಪರಿಸ್ಥಿತಿಗೆ ನಮ್ಮ ಹಿಂದೂಗಳನ್ನು ತಳ್ಳುತ್ತಿದೆ ಎಂದು ಆಕ್ಷೇಪಿಸಿದರು. ಹಬ್ಬ ಹರಿದಿನವನ್ನು ನೆಮ್ಮದಿಯಿಂದ ಆಚರಿಸಲು ಸಾಧ್ಯ ಇಲ್ಲದ ಸ್ಥಿತಿ ನಿರ್ಮಾಣವಾಗಲು ರಾಜ್ಯ ಸರಕಾರದ ಬೇಜವಾಬ್ದಾರಿಯೇ ಕಾರಣ ಎಂದು ಟೀಕಿಸಿದರು.
ನಿನ್ನೆ ದಿನ ಭದ್ರಾವತಿ ಶಾಸಕರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಮುಂದಿನ ಜನ್ಮದಲ್ಲಿ ಏನಾಗಿ ಹುಟ್ಟಬೇಕು ಎಂಬುದು ಒಂದು ಕಡೆಯಾದರೆ, ತಡ ಯಾಕೆ ಮಾಡುತ್ತೀರಿ? ಈಗಲೇ ಮುಸ್ಲಿಂ ಆಗಿ ಮತಾಂತರ ಆಗಬಹುದಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯ ಸರಕಾರದ ಕುಮ್ಮಕ್ಕಿನಿಂದಲೇ ದುಷ್ಟ ಶಕ್ತಿಗಳಿಂದ ಹಿಂದೂಗಳ ಮೇಲೆ ಕಲ್ಲು ತೂರಾಟ, ಹಿಂದೂ ಕಾರ್ಯಕರ್ತರ ಮೇಲೆ ಅಟ್ಟಹಾಸ ಮೆರೆಯುವಂತಾಗಿದೆ. ಇದಕ್ಕೆ ಪೂರಕ ವಾತಾವರಣವನ್ನು ರಾಜ್ಯ ಸರಕಾರ ನಿರ್ಮಾಣ ಮಾಡುತ್ತಿದೆ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳಿಗೆ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬೇಕೆಂಬ ಭಯ ಇಲ್ಲವೇನೋ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ. ಧರ್ಮಸ್ಥಳದ ವಿಚಾರ, ಚಾಮುಂಡಿ ಬೆಟ್ಟ, ನಿನ್ನೆ ಮದ್ದೂರಿನ ಘಟನೆಗಳು ಇದನ್ನು ಸಾಬೀತುಪಡಿಸುವಂತಿದೆ. ಚಿತ್ರದುರ್ಗದಲ್ಲಿ ಡಿಜೆ, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳು ತೀರ್ಮಾನ ಮಾಡಿದ್ದಾಗಿ ಮಾಹಿತಿ ಬರುತ್ತಿವೆ. ಭಜರಂಗದಳದ ಕಾರ್ಯಕರ್ತ ಚಿತ್ರದುರ್ಗಕ್ಕೆ ಬರಬಾರದೆಂದು ಗಡೀಪಾರು ಮಾಡಿದ ವಿಚಾರವೂ ಕೂಡ ಕೇಳಿಸುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.