
ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇವತ್ತು ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಯುವಜನತೆ ಕಳೆದ ಎರಡೂವರೆ ವರ್ಷದಿಂದ ಕಣ್ಣೀರು ಹಾಕುತ್ತಿದ್ದಾರೆ. ಪ್ರತಿಭಟನೆ- ಹೋರಾಟ ಮಾಡುತ್ತಿದ್ದಾರೆ; ಇದ್ಯಾವುದನ್ನೂ ಲೆಕ್ಕಿಸದೇ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲೂ ಇದೇ ವಿದ್ಯಾರ್ಥಿಗಳ ಒಕ್ಕೂಟ ಪ್ರತಿಭಟನೆ ಮಾಡಿದರೆ ಲಾಠಿ ಚಾರ್ಜ್ ಮಾಡಿದ್ದರು. ಆಗಲೂ ಸರಕಾರ ಎಚ್ಚತ್ತುಕೊಳ್ಳಲಿಲ್ಲ ಎಂದು ದೂರಿದರು. ಮುಖ್ಯಮಂತ್ರಿಗಳ ಜೊತೆ ಭೇಟಿಗೆ ಸಮಯ ನಿಗದಿಪಡಿಸಲು ರಾಜ್ಯ ಹೈಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು ಎಂದು ಅವರು ತಿಳಿಸಿದರು.
ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಕಾಳಗದಲ್ಲಿ ಬ್ಯುಸಿ ಆಗಿದ್ದಾರೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಕುರ್ಚಿ ಕಸಿದುಕೊಳ್ಳಲು ಮುಂದಾಗಿದ್ದಾರೆಯೇ ವಿನಾ ಈ ಯುವಜನತೆಯ ಸಮಸ್ಯೆ ಆಲಿಸಲು ಇವರಿಗೆ ಸಮಯ ಸಿಗುತ್ತಿಲ್ಲ ಎಂದು ಟೀಕಿಸಿದರು. ನನ್ನನ್ನು ವಿದ್ಯಾರ್ಥಿಗಳ ಒಕ್ಕೂಟದವರು ಬಂದು ಭೇಟಿ ಮಾಡಿದ್ದರು. 2 ಲಕ್ಷ 85 ಸಾವಿರ ಹುದ್ದೆಗಳು ಇವತ್ತಿಗೂ ಖಾಲಿ ಬಿದ್ದಿವೆ. ಕಾಂಗ್ರೆಸ್ ಸರಕಾರಕ್ಕೆ ಅವುಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮೀಸಲಾತಿ ಗೊಂದಲ ಬಳಸಿಕೊಂಡು ಕಾಲಹರಣ..
ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಒಂದೇ ಒಂದು ಹುದ್ದೆಯನ್ನೂ ಭರ್ತಿ ಮಾಡಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವಸಂಪುಟದ ಸದಸ್ಯರು ರಾಜ್ಯದುದ್ದಕ್ಕೂ ಭಾಷಣ ಬಿಗಿಯುತ್ತಿದ್ದಾರೆ. ಆದರೆ, ನಾಡಿನ ಯುವಜನತೆಗೆ ನ್ಯಾಯ ನೀಡಲು ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು. ಮೀಸಲಾತಿ ಗೊಂದಲ ಬಳಸಿಕೊಂಡು ರಾಜ್ಯ ಹೈಕೋರ್ಟ್ನಲ್ಲಿ ಸರಿಯಾಗಿ ವಾದ ಮಂಡಿಸದೇ ಕಾಲಹರಣ ಮಾಡಿಕೊಂಡು ಕಾಂಗ್ರೆಸ್ ಸರಕಾರ ಕುಳಿತಿದೆ. ಯುವಜನತೆಯ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಮಾಡುವ ಇಚ್ಛಾಶಕ್ತಿ ಈ ಸರಕಾರದಿಂದ ಕಾಣುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರಿನಲ್ಲೂ ಪ್ರತಿಭಟನೆ ಮಾಡಿತ್ತು. ಕಲಬುರ್ಗಿ, ಧಾರವಾಡದಲ್ಲೂ ಪ್ರತಿಭಟನೆ ಮಾಡಿದ್ದರು. ಇವತ್ತು ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅದೇ ಭಂಡತನದ ಪ್ರದರ್ಶನವನ್ನು ಮಾಡುತ್ತಿದ್ದಾರೆ. ಒಂದೆಡೆ ಅಭಿವೃದ್ಧಿ ಇಲ್ಲ; ಇನ್ನೊಂದೆಡೆ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೇಮಕಾತಿಯನ್ನೂ ಮಾಡದೇ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.
ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಾರೆ. ಸರಕಾರ ಅಧಿಕಾರಕ್ಕೆ ಬಂದು 3 ವರ್ಷವಾಗಿದೆ. ಇಷ್ಟು ಸಮಯ ಮಾಡದವರು ಇನ್ಮೇಲೆ ಮಾಡುತ್ತಾರಾ ಎಂದು ಕೇಳಿದರು. ಇನ್ನೂ ಎಷ್ಟು ದಿನ ಯುವಜನರ ತಾಳ್ಮೆ ಪರೀಕ್ಷೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅವರ ಕಣ್ಣೀರು ಸರಕಾರಕ್ಕೆ ಕಾಣುತ್ತಿಲ್ಲವೇ ಎಂದು ಕೇಳಿದರು.
ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು..
ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು. ಜೊತೆಗೆ ಕೆಪಿಎಸ್ಸಿ ವ್ಯವಸ್ಥೆ ಸುಧಾರಣೆ ಮಾಡಬೇಕು. ನಿಮ್ಮ ಸರಕಾರ ಇದ್ದಾಗ ಏನು ಮಾಡಿದ್ದೀರಿ ಎಂಬಂಥ ಮಾತುಗಳನ್ನು ಬದಿಗಿಟ್ಟು ಯುವಜನತೆಗೆ ನ್ಯಾಯ ಕೊಡುವ ಕೆಲಸ ಮಾಡಬೇಕೆಂದು ಅವರು ಆಗ್ರಹಿಸಿದರು. ಯುವಜನರ ವಯೋಮಿತಿ ಮೀರುತ್ತಿದೆ. ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಿ ಎಂದು ಒತ್ತಾಯಿಸಿದರು. ಹುಡುಗಾಟಿಕೆ ಮಾಡದೇ ಇದರ ಬಗ್ಗೆ ಗಮನ ಹರಿಸಿ ಎಂದರು.
ಈ ಸರಕಾರ ಕೇವಲ ಕಾಲಹರಣ ಮಾಡುತ್ತಿದೆ..
ಪ್ರಶ್ನೆಗೆ ಉತ್ತರಿಸಿದ ಅವರು, ಹುಬ್ಬಳ್ಳಿಯಲ್ಲಿ ಈಚೆಗೆ ಬಡವರಿಗೆ ಮನೆ ಕೊಡುವುದಾಗಿ ಹೇಳಿ ಸಾವಿರಾರು ಜನರನ್ನು ಸೇರಿಸಿ ದೊಡ್ಡ ಸಮಾರಂಭ ಮಾಡಿ ಅವರ ಬೆನ್ನನ್ನು ಅವರೇ ತಟ್ಟಿಕೊಂಡು ಮುಖ್ಯಮಂತ್ರಿಗಳು ಬಂದಿದ್ದರು. ಹಿಂದಿನ ಬಿಜೆಪಿ ಸರಕಾರ ಆ ಬಡವರಿಗೆ ಮನೆ ಕೊಡಲು ಅಲ್ಲಿನ ಪಾಲಿಕೆಯಲ್ಲಿ ನಿರ್ಣಯ ಅಂಗೀಕರಿಸಿ, ಇದು ಕೇಂದ್ರ ಸರಕಾರದ ಸಹಯೋಗದೊಂದಿಗೆ ಆಗಿರುವಂಥದ್ದು. ಇವರು ಬಂದು ಕಡಿದು ಕಟ್ಟೆ ಹಾಕಿದ್ದಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರ ಕೇವಲ ಕಾಲಹರಣ ಮಾಡುತ್ತಿದೆ. ಹಿಂದಿನ ಬಿಜೆಪಿ ಸರಕಾರ ಮಾಡಿದ್ದನ್ನು ತಾವು ಮಾಡಿದ್ದಾಗಿ ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಇವರೇನೂ ಮಾಡಿಲ್ಲ ಎಂದು ಟೀಕಿಸಿದರು.
ಸರಕಾರದ ಆದ್ಯತೆಯನ್ನು ಸ್ಪಷ್ಟಪಡಿಸಬೇಕು..
ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಒಬ್ಬ ಅನುಭವಿ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾರೆ. ಅವರು ಸರಕಾರದ ಆದ್ಯತೆಯನ್ನು ಸ್ಪಷ್ಟಪಡಿಸಬೇಕು. ಸರಕಾರದ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದ ಅವರು, ಶಿವಮೊಗ್ಗದಲ್ಲಿ 10ನೇ ತರಗತಿಯ ಬಾಲಕನ ಬರ್ಬರ ಹತ್ಯೆ ನಡೆದಿದೆ. ಇದನ್ನು ಬಿಜೆಪಿ ಖಂಡಿಸುವುದಾಗಿ ತಿಳಿಸಿದರು.
ಶಿವಾಜಿ ಜಯಂತಿ ಸಂದರ್ಭದಲ್ಲಿ ಕಲ್ಲು ತೂರಿದ ದೇಶದ್ರೋಹಿಗಳ ವರ್ತನೆ ತಮಗೆಲ್ಲ ತಿಳಿದಿದೆ. ದಕ್ಷಿಣ ಕನ್ನಡ, ಯಲ್ಲಾಪುರ, ಶಿವಮೊಗ್ಗದಲ್ಲಿ ಸೇರಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ. ಯಲ್ಲಾಪುರದಲ್ಲಿ ದಲಿತ ಮಹಿಳೆಯ ಬರ್ಬರ ಹತ್ಯೆ ನಡೆಸಲಾಗಿದೆ. ಇವನ್ನು ಗಮನಿಸಿದರೆ ಗೃಹ ಸಚಿವರು ರಾಜ್ಯದಲ್ಲಿ ಇದ್ದಾರಾ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುವಂತಾಗಿದೆ ಎಂದು ನುಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


