ಮಂಗಳೂರು : ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ. ಕಾನೂನು ಬಾಹಿರ ಚಟುವಟಿಕೆ ನಡೆಸಿದಾತನನ್ನು ಬಂಧಿಸಿದ ಪೊಲೀಸ್ ಅಧಿಕಾರಿಯನ್ನೇ ರಜೆಯ ಮೇಲೆ ಕಳಿಸುವಷ್ಟರ ಮಟ್ಟಿಗೆ ರಾಜಕೀಯ ಹಸ್ತಕ್ಷೇಪವಾಗಿರುವುದು ಆತಂಕಕಾರಿ ಬೆಳವಣಿಗೆ. ಈ ಪ್ರಕರಣದ ಕುರಿತಂತೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸರಕಾರವನ್ನು ಒತ್ತಾಯಿಸಿದೆ.
ದ.ಕ.ಜಿಲ್ಲೆಯಲ್ಲಿ ರಾಜಕೀಯ ಹಸ್ತಕ್ಷೇಪ ಪೊಲೀಸ್ ಇಲಾಖೆಯನ್ನು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂಬುದನ್ನು ಜಿಲ್ಲಾ ಬಿಜೆಪಿ ನಿರಂತರವಾಗಿ ಹೇಳುತ್ತಲೇ ಬಂದಿದೆ. ಮರಗಳ್ಳತನ, ಮರಳು ಮಾಫಿಯಾ ಸೇರಿದಂತೆ ಕೊಲೆಯಂತಹ ಅಹಿತಕರ ಘಟನೆಗಳು ನಡೆದಾಗಲೂ ಇಲಾಖೆಯನ್ನು ಸ್ವತಂತ್ರವಾಗಿ ಕಾರ್ಯನಿರ್ವಯಿಸಲು ಕಾಂಗ್ರೆಸ್ ನಾಯಕರು ಬಿಡುತ್ತಿಲ್ಲ ಎಂಬುದು ಸಾಬೀತಾಗಿದೆ. ಅದಕ್ಕೆ ಪುಷ್ಠಿ ನೀಡುವಂತೆ ಕಾನೂನು ಬಾಹಿರ ಕೃತ್ಯ ನಡೆಸಿದಾತನನ್ನು ಬಂಧಿಸಿದ ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ರಜೆಯ ಶಿಕ್ಷೆ ನೀಡುವಷ್ಟರ ಮಟ್ಟಿಗೆ ಆಡಳಿತ ತಲುಪಿರುವುದು ದುರದೃಷ್ಟಕರ.
ಪ್ರಮೋದ್ ಅವರ ರಜಾಸಜಾ ಪ್ರಕರಣದ ಹಿಂದೆ ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರ ಒತ್ತಡ ಇದರ ಹಿಂದೆ ಇದೆ ಎಂಬುದನ್ನು ಸಾರ್ವಜನಿಕರೇ ಬೊಟ್ಟು ಮಾಡುತ್ತಿದ್ದಾರೆ. ಆದ್ದರಿಂದ ಸಮಗ್ರ ತನಿಖೆ ನಡೆಸುವ ಮೂಲಕ ಸತ್ಯಾಂಶವನ್ನು ಜನತೆಯ ಮುಂದಿಡಬೇಕು. ಜಿಲ್ಲೆಯ ಇತಿಹಾಸದಲ್ಲಿಯೇ ಪೊಲೀಸರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರೆ ಗಂಭೀರತೆಯನ್ನು ಸರಕಾರ ಮನಗಾಣಬೇಕು.
ದ.ಕ.ದಲ್ಲಿ ಜೈಲಿನೊಳಗೂ ಭದ್ರತೆಯಿಲ್ಲ. ಪೊಲೀಸರಿಗೂ ಭದ್ರತೆಯಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ರೀತಿಯ ಘಟನೆಗಳು ಮರುಕಳಿಸಿದರೆ ಜನತೆ ಇಲಾಖೆಯ ಮೇಲೆ ನಂಬಿಕೆ ಇಡುವುದಾದರೂ ಹೇಗೆ? ಸರಕಾರ ಗಂಭೀರತೆಯನ್ನು ಅರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.