ಮಂಗಳೂರು : ಪೊಲೀಸ್ ಇಲಾಖೆಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುತ್ತಿರುವುದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಮುಖ್ಯ ಕಾರಣವಾಗಿದೆ. ಕೋಮು ಗಲಭೆ ಆರೋಪಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಯ ವಿರುದ್ಧವೇ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಜನಪ್ರತಿನಿಧಿಗಳು ಪೊಲೀಸರ ಮೇಲೆ ಒತ್ತಡ ತಂದು ಆರೋಪಿಗಳನ್ನು ರಕ್ಷಿಸುತ್ತಿರುವ ಬಗ್ಗೆ ಬಿಜೆಪಿ ಹೋರಾಟ ನಡೆಸುತ್ತಲೇ ಬಂದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪೊಲೀಸರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಹಸ್ತಕ್ಷೇಪ ನಡೆಸುತ್ತಿರುವುದಕ್ಕೆ ಈ ಘಟನೆ ಸ್ಪಷ್ಟ ನಿದರ್ಶನವಾಗಿದೆ. ಪೊಲೀಸ್ ಇಲಾಖೆಯ ಕೆಲವು ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜಕೀಯ ಹಸ್ತಕ್ಷೇಪದಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದು ಸಂಘಟನೆಯ ಕಾರ್ಯಕರ್ತರ ಮೇಲೆ ವಿನಾ ಕಾರಣ ಕೇಸು ದಾಖಲಿಸಲು ಒತ್ತಡ ತರುವ ಕಾಂಗ್ರೆಸ್ ನಾಯಕರು, ಇನ್ನೊಂದೆಡೆ ಸಮಾಜ ಘಾತಕ ಕೃತ್ಯದಲ್ಲಿ ತೊಡಗಿದವರ ರಕ್ಷಣೆಗೆ ನಿಂತಿದ್ದಾರೆ. ಗಂಭೀರ ಪ್ರಕರಣಗಳಲ್ಲಿ ಭಾಗಿಯಾದವರನ್ನು ಸಾಕ್ಷಾಧಾರ ಸಹಿತ ಪೊಲೀಸರು ಬಂಧಿಸಿದರೂ, ಠಾಣೆಗೆ ತರುವ ಮೊದಲೇ ಸಚಿವರು, ಶಾಸಕರು ಬಿಡುಗಡೆ ಮಾಡಲು ಒತ್ತಡ ತರುತ್ತಾರೆ. ಇದರಿಂದ ಅಪರಾಧ ಮಾಡುವವರಿಗೆ ಜಿಲ್ಲೆಯಲ್ಲಿ ಯಾವುದೇ ಭಯ ಇಲ್ಲವಾಗಿದೆ ಎಂದು ಪಾಲೆಮಾರ್ ಆತಂಕ ವ್ಯಕ್ತ ಪಡಿಸಿದ್ದಾರೆ.
ಕಾರಾಗೃಹದಲ್ಲಿ ಸೇರಿದಂತೆ ಸರಣಿ ಕೊಲೆಗಳು, ಹಿಂದೂ ಯುವಕರ ಮೇಲೆ ಹಲ್ಲೆ, ದನಗಳ್ಳತನ, ಸರಗಳ್ಳತನ ಜಿಲ್ಲೆಯಲ್ಲಿ ನಿರಂತರ ನಡೆಯುತ್ತಲೇ ಇದೆ. ರಾಜಕೀಯ ಹಸ್ತಕ್ಷೇಪದಿಂದಾಗಿ ಪೋಲೀಸರು ಅಸಹಾಯಕರಾಗಿದ್ದಾರೆ. ಇಂತಹ ಭ್ರಷ್ಟ ವ್ಯವಸ್ಥೆ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಅನಿವಾರ್ಯವಾಗಿ ಪ್ರತಿಭಟಿಸಿದ್ದಾರೆ.
ಸಾರ್ವಜನಿಕರು ಅವರ ಬೆಂಬಲಕ್ಕೆ ನಿಂತಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಜಿಲ್ಲೆಯ ಎಲ್ಲೆಡೆ ಇಂತಹ ಪ್ರತಿಭಟನೆ ಮರುಕಳಿಸಬಹುದು. ಸಚಿವರ ತಾಳಕ್ಕೆ ಸರಿಯಾಗಿ ಕುಣಿಯುವ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಪಾಲೆಮಾರ್ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.