ನವದೆಹಲಿ: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಪಾದಯಾತ್ರೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಇದೀಗ ಸಂಸತ್ತಿನಲ್ಲೂ ಎತ್ತಿನಹೊಳೆ ಯೋಜನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ಮೂಲಕ ದಕ್ಷಿಣಕನ್ನಡದ ಜನತೆಗೆ ನೀಡಿದ ಭರವಸೆಗೆ ಬದ್ಧರಾಗಿ ನಡೆದುಕೊಂಡಿದ್ದಾರೆ.
ಗುರುವಾರ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ನೇತ್ರಾವತಿ ನದಿಯನ್ನು ತಿರುಗಿಸುವ ಎತ್ತಿನಹೊಳೆ ಯೋಜನೆಗೆ ನೀಡಿರುವ ಅನುಮತಿಯನ್ನು ಕೇಂದ್ರ ರದ್ದುಪಡಿಸಬೇಕು. ಈ ಯೋಜನೆ ಪರಿಸರಕ್ಕೆ ಮಾರಕವಾಗಲಿದ್ದು, ಇದರಿಂದ ಪಶ್ಚಿಮಘಟ್ಟ ಪ್ರದೇಶಕ್ಕೆ ಆಪತ್ತು ಉಂಟಾಗಲಿದೆ. ದಕ್ಷಿಣಕನ್ನಡ ಜನತೆಯ ಕುಡಿಯುವ ನೀರಿಗೂ ಈ ಯೋಜನೆಯಿಂದ ಪೆಟ್ಟು ಬೀಳಲಿದೆ. ಇದಕ್ಕೆ ಸಂಬಂಧಿಸಿದ ವರದಿಗಳನ್ನು ಕೇಂದ್ರ ತರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ನೇತ್ರಾವತಿ ನದಿ ತಿರುವು ಯೋಜನೆಯ ಹೆಸರು ಬದಲಾಯಿಸಿ ಎತ್ತಿನಹೊಳೆ ಯೋಜನೆ ಎಂದು ಹೆಸರಿಡಲಾಗಿದೆ, ಇದರ ಹಿಂದೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆಯುವ ಹುನ್ನಾರವಿದೆ. ಪರಿಸರವಾದಿಗಳು , ಸಾರ್ವಜನಿಕರು ಈ ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ತನ್ನಿಷ್ಟದಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅಲ್ಲದೇ ಪರಿಸರಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡುವಂತೆ ಕೇಂದ್ರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು. ಈ ಯೋಜನೆಗೆ ಸಂಬಂಧ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅಧಿಕಾರಿಗಳು ಡಿಸೆಂಬರ್ 18 ರಂದು ಬೆಂಗಳೂರಿನ ಕೋರಮಂಗಲದಲ್ಲಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಯೋಜನೆಗೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಅವರು ಮನವಿ ಮಾಡಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.