ಪುತ್ತೂರು : ಹೆಣ್ಣು ಮಕ್ಕಳು ಪುರುಷರಷ್ಟೇ ಸಮಾನರು. ಹೆಣ್ಣು- ಗಂಡು ಮಕ್ಕಳಿಗೆ ಸಮಾಜದಲ್ಲಿ ಸಮಾನವಾಗಿ ಬದುಕುವ ಹಕ್ಕಿದೆ. ಈ ನೆಲೆಯಲ್ಲಿ ಸಮಾಜದ ದೃಷ್ಟಿಕೋನ ಬದಲಾಗಬೇಕು. ಎಲ್ಲವನ್ನೂ ಕಾನೂನಿನ ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿ ನಾಗರಾಜ್ ಹೇಳಿದರು.
ಹೆಣ್ಣು ಮಗುವನ್ನು ಉಳಿಸಿ ಆಂದೋಲನದ ಅಂಗವಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವ ಸಮಿತಿ, ನ್ಯಾಯವಾದಿಗಳ ಸಂಘ ಪುತ್ತೂರು, ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಪುತ್ತೂರು ಸಾರ್ವಜನಿಕ ಆಸ್ಪತ್ರೆ ಆಶ್ರಯದಲ್ಲಿ ನಡೆದ `ಪ್ರಸವ ಪೂರ್ವ ಭ್ರೂಣ ಪತ್ತೆ ಕಾಯ್ದೆ-1994 ಮತ್ತು ಎಚ್ಐವಿ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ಇಂದು ಎಲ್ಲಾ ರಂಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರೂ ಹೆಣ್ಣು ಮಕ್ಕಳು ಬೇಡ ಎಂಬ ಭಾವನೆ ಎಲ್ಲೆಡೆ ಕಂಡುಬರುತ್ತಿದೆ. ಇದರಲ್ಲಿ ಶಿಕ್ಷಕತರು ಹೊರತಾಗಿಲ್ಲ. ಹೆಣ್ಣು ಮಕ್ಕಳೆಂದರೆ ತಾತ್ಸಾರ ಮನೋಭಾವ ಸಲ್ಲದು. ಸಾಮಾಜಿಕ ಹಾಗೂ ಆರ್ಥಿಕ ಕಾರಣಗಳಿಂದ ಕೆಲ ಸಂದರ್ಭದಲ್ಲಿ ಇಂತಹ ಘಟನೆ ನಡೆಯುತ್ತಿದೆ. ಗಂಡು ಮಕ್ಕಳಿಲ್ಲದಿದ್ದರೆ ತಮಗೆ ಸ್ವರ್ಗ ಸಿಗಲ್ಲ ಎನ್ನುವ ಮನೋಭಾವವೂ ಇಂದಿಗೂ ಜನರನ್ನು ಕಾಡುತ್ತಿದೆ. ಆದ್ದರಿಂದ ಹೆಣ್ಣು ಮಕ್ಕಳ ಮೇಲಿನ ದೃಷ್ಟಿಕೋನ ಬದಲಾಗಬೇಕು. ಅವರಿಗೂ ಬದುಕಲು ಸಾಮಾಜಿಕ ಭದ್ರತೆ ನೀಡಬೇಕು ಎಂದರು.
ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಕೃಷ್ಣ ರಾವ್ ಮಾತನಾಡಿ, ಕಾಯಿಲೆಗಳ ಸುಲಭ ಪತ್ತೆಗಾಗಿ ಆಧುನಿಕ ಯಂತ್ರ ಕಂಡುಹಿಡಿಯುತ್ತಾರೆ. ಅದನ್ನು ದುರ್ಬಳಕೆ ಮಾಡುವುದು ಸರಿಯಲ್ಲ. ನಾವು ಪ್ರಕೃತಿಗೆ ವಿರುದ್ಧವಾಗಿ ವರ್ತಿಸಬಾರದು. ಗಂಡು-ಹೆಣ್ಣು ಮಕ್ಕಳು ಒಂದೇ ನಾಣ್ಯದ ಎರಡು ಮುಖಗಳು. ಸಮಾಜದಲ್ಲಿ ಇಬ್ಬರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ಲಿಂಗ ಪತ್ತೆ ಮಾಡುವ ಕಾರ್ಯಕ್ಕೆ ಯಾರೂ ಮುಂದಾಗಬಾರದು. ಅದು ಕಾನೂನು ಬಾಹಿರ ಎಂದರು.
ವಕೀಲರ ಸಂಘದ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಿಟಿ ಆಸ್ಪತ್ರೆಯ ಸ್ತ್ರೀರೊಗ ತಜ್ಞ ಡಾ.ಅನಿಲ್ ಬೈಪಾಡಿತ್ತಾಯ, ವಕೀಲ ಮಹಾಬಲ ಗೌಡ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ದೀಪಕ್ ರೈ, ಐಸಿಟಿಸಿ ಆಪ್ತ ಸಮಾಲೋಚಕ ತಾರಾನಾಥ ರೈ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರತಾಪ್ ಕುಮಾರ್, ತಮ್ಮಣ್ಣ ಸಿ, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಬಿ.ವಿ.ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಮಂಜುನಾಥ ಎನ್.ಎಸ್, ವಕೀಲ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್, ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುರೇಂದ್ರನಾಥ ನಾಯಕ್ ಉಪಸ್ಥಿತರಿದ್ದರು.
ಮುಂಡೂರು ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಲಕ್ಷ್ಮೀ ಪ್ರಾರ್ಥಿಸಿ, ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಪದ್ಮಾವತಿ ಸ್ವಾಗತಿಸಿದರು. ವಕೀಲ ಸಂಘದ ಜತೆ ಕಾರ್ಯದರ್ಶಿ ರಮಾನಂದ ವಂದಿಸಿ, ಕಾರ್ಮಿಕ ಇಲಾಖೆಯ ಚಿದಾನಂದ ಕಾಮತ್ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.