ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್ನಾಥ್ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಇಂದು ಬೆಳಿಗ್ಗೆ ಕೊಟ್ಟಾರ ಚೌಕಿಯ ಮೂಲಕ ಮಂಗಳೂರು ಪುರಪ್ರವೇಶ ಮಾಡಿತು.ಕೊಟ್ಟಾರದಲ್ಲಿ `ನವನಾಥ್ ಝಂಡಿ’ಯನ್ನು ಜೋಗಿ ಸಮಾಜ ಬಾಂಧವರು ಸೇರಿದಂತೆ ಗಣ್ಯರು ಸಂಪ್ರದಾಯಿಕವಾಗಿ ಸ್ವಾಗತಿಸಿದರು. ಫೆ. 25 ರಂದು ಮೂಲ್ಕಿಯಿಂದ ಪಣಂಬೂರಿಗೆ ಬಂದ ಝುಂಡಿಯು ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ತಂಗಿತ್ತು. ಇಂದು ರಾಷ್ಟ್ರೀಯ ಹೆದ್ದಾರಿ ಮೂಲಕ ಕೊಟ್ಟಾರದಿಂದ ಮಂಗಳೂರು ಪ್ರವೇಶಿಸಿದೆ.
ಕೊಟ್ಟಾರದಲ್ಲಿ ವಿಠಲ್ದಾಸ್ ತಂತ್ರಿ, ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವ ಸಮಿತಿ ಅಧ್ಯಕ್ಷ ಹೆಚ್. ಕೆ. ಪುರುಷೋತ್ತಮ್, ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಜೋಗಿ, ಕಾರ್ಯದರ್ಶಿ ಸತೀಶ್ಮಾಲೆಮಾರ್, ಸಲಹೆಗಾರ ಡಾ. ಕೇಶವನಾಥ್, ಶಾಸಕ ಜೆ. ಆರ್. ಲೋಬೊ, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮಾಜಿ ಮೇಯರ್ಗಳಾದ ಶಶಿಧರ ಹೆಗ್ಡೆ, ಕೆ. ದಿವಾಕರ, ವಿಶ್ವ ಹಿಂದು ಪರಿಷತ್ ಬಜರಂಗದಳದ ಮುಂದಾಳುಗಳಾದ ಪ್ರೊ. ಎಂ. ಬಿ. ಪುರಾಣಿಕ್, ಜಗದೀಶ್ ಶೇಣವ, ಶರಣ್ ಪಂಪ್ವೆಲ್, ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಎಸ್. ಪ್ರಕಾಶ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಹರಿನಾಥ್, ಪಾಲಿಕೆ ಸದಸ್ಯ ಡಿ. ಕೆ. ಅಶೋಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಝುಂಡಿಯನ್ನು ಸ್ವಾಗತಿಸಿದರು.
ಕೊಂಬು ಕಹಳೆ, ನಾಸಿಕ್ ಬ್ಯಾಂಡ್, ಕಲ್ಲಡ್ಕ ಗೊಂಬೆಗಳನ್ನೊಳಗೊಂಡ ಝುಂಡಿ ಮೆರವಣಿಗೆಯು ಪೂರ್ಣಕುಂಭ ಸ್ವಾಗತದೊಂದಿಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನ, ಲೇಡಿಹಿಲ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಹಂಪನಕಟ್ಟ, ಪಿ.ವಿ.ಎಸ್, ಬಂಟ್ಸ್ ಹಾಸ್ಟೆಲ್, ಮಲ್ಲಿಕಟ್ಟೆ, ಕದ್ರಿ ಮಂಜುನಾಥ ದೇವಸ್ಥಾನಕ್ಕಾಗಿ ಕದಳೀ ಮಠ ತಲುಪಿದೆ. ಝುಂಡಿಯಲ್ಲಿ ಸಾಗಿ ಬಂದ ಯೋಗಿಗಳಿಗೆ ಅಲ್ಲಲ್ಲಿ ಸಾರ್ವಜನಿಕರು ಪಾದೆಪೂಜೆ ನೆರವೇರಿಸಿ ಹೂ ಹಾರ, ಹಣ್ಣು ಹಂಪಲು ಸಮರ್ಪಿಸಿ ಆರ್ಶೀವಾದ ಪಡೆದುಕೊಂಡರು. ಝುಂಡಿಯಲ್ಲಿ 2 ವೈದ್ಯ, 3 ಇಂಜಿನಿಯರ್, 19 ಸ್ನಾತಕೋತ್ತರ ಪದವೀದರ ಸನ್ಯಾಸಿಗಳಿದ್ದಾರೆ, ಅಲ್ಲದೆ ಹಠಯೋಗಿಗಳು ಸೇರಿದಂತೆ ಸುಮಾರು 500ಕ್ಕೂ ಅಧಿಕ ಸಾಧುಗಳು ಝಂಡಿಯಲ್ಲಿದ್ದಾರೆ. ಯೋಗಿ ರಾಜೇಂದ್ರನಾಥ್ ಕಳೆದ ೧೫ ವರ್ಷಗಳಿಂದ ನಿಂತುಕೊಂಡೇ ಹಠಯೋಗ ನಿರತರಾಗಿದ್ದ್ದಾರೆ.
ಇಂದಿನಿಂದ ಮಾ.7ರ ವರೆಗೆ ದಿನ ನಿತ್ಯ ಸಂಜೆ ಕದಳೀ ಮಠದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಫೆ.28ರಂದು ಸಂಜೆ 3-30ಕ್ಕೆ ಮಂಗಳಾದೇವಿ ದೇವಸ್ಥಾನದಿಂದ ಹೊರಡುವ “ಹೊರೆ ಕಾಣಿಕೆ” ಯಾತ್ರೆ ಕಂಕನಾಡಿ, ಮಲ್ಲಿಕಟ್ಟೆ, ಕದ್ರಿ ದೇವಸ್ಥಾನ ಮಾರ್ಗವಾಗಿ ಕದಳಿ ಮಠಕ್ಕೆ ತಲುಪಲಿದೆ.
ಮಾ. 7 ರಂದು ಮೇಷ ಲಗ್ನ ಸುಮುಹೂರ್ತದಲ್ಲಿ ಯೋಗಿ ನಿರ್ಮಲ್ನಾಥ್ಜೀಗೆ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ.
ಕದ್ರಿ ದೇವಸ್ಥಾನದ ಸಂಬಂಧ : ಕದಳಿ ಯೋಗೇಶ್ವರ (ಜೋಗಿ) ಮಠದ ಪೀಠಾಧಿಪತಿಗಳಿಗೆ ಕದ್ರಿ ದೇವಸ್ಥಾನದ ಜಾತ್ರೆಗಳಲ್ಲಿ ವಿಶಿಷ್ಟ ಪಾತ್ರವಿದೆ. ಕದ್ರಿ ರಥೋತ್ಸವದ ದಿನ ಪೀಠಾಧಿಪತಿಗಳು ಬ್ರಹ್ಮರಥದ ಎದುರಿನಲ್ಲಿ ಕುದುರೆಯನ್ನೇರಿ ರಥದ ಮುಂದೆ ಚಲಿಸುವ ಪದ್ಧತಿ ಮತ್ಸ್ಯೆಂದ್ರನಾಥ, ಗೋರಕ್ಷನಾಥರ ಸಮಯದಿಂದ ನಡೆದು ಬಂದಿದೆ. ಕದ್ರಿ ಮಂಜುನಾಥ ದೇವಸ್ಥಾನದ ಜಾತ್ರೆ ಪ್ರಾರಂಭದ ಮುನ್ನ ದಿನ ಕದಳೀ ಪೀಠಾಧಿಪತಿಗಳು ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ಫಲ, ಪುಷ್ಪ, ಸೀರೆ, ಅರ್ಪಿಸಿ ಕದ್ರಿ ದೇವಸ್ಥಾನದ ಜಾತ್ರೆ ನಿರ್ವಿಘ್ನವಾಗಿ ನಡೆಯಲಿ ಎಂದು ಪ್ರಾರ್ಥಿಸುವ ಪದ್ಧತಿ ಇಂದಿಗೂ ನಡೆದುಕೊಂಡು ಬಂದಿದೆ. ನವನಾಥ ಝುಂಡಿಯು ಮಂಗಳೂರು ನಗರದಲ್ಲಿ ಸಾಗುವ ದಾರಿ ನಡುವೆ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರ ಹಾಗೂ ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಅತಿಥ್ಯ ಸ್ವೀಕರಿಸಿ ಸ್ವಲ್ಪಹೊತ್ತು ವಿಶ್ರಮಿಸುತ್ತದೆ. ಇದು ನಾಥಪಂಥಕ್ಕೂ ಈ ಎರಡು ಕ್ಷೇತ್ರಗಳಿಗೂ ಇರುವ ಸಂಬಂಧವನ್ನು ತೋರಿಸುತ್ತದೆ. ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ ಶ್ರೀ ವೀರವೆಂಕಟೇಶ ದೇವರ ಮೂರ್ತಿ 1804 ನೇ ಇಸವಿಯಲ್ಲಿ ನಾಥ ಸನ್ಯಾಸಿಯೊಬ್ಬರು ನೀಡಿರುವುದಕ್ಕೆ ಪುರಾವೆ ಲಭ್ಯವಿದೆ.
28ರಂದು ಧಾರ್ಮಿಕ ಸಭೆ : ಫೆ. 28 ರಂದು ಸಂಜೆ ಕದಳೀ ಮಠದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ ಯೋಗಿ ಮಹಾಸಭಾ ಹರಿದ್ವಾರ ಇದರ ಅಧ್ಯಕ್ಷ ಯೋಗಿ ಶ್ರೀ ಮಹಂತ್ ಆದಿತ್ಯನಾಥ್ಜೀ ಆಶೀರ್ವಚನ ನೀಡಲಿದ್ದಾರೆ ಎಂದು ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವ ಸಮಿತಿ ಅಧ್ಯಕ್ಷ ಹೆಚ್. ಕೆ. ಪುರುಷೋತ್ತಮ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.