ಮಂಗಳೂರು : ಯಕ್ಷಗಾನ ವೃತ್ತಿರಂಗದಲ್ಲಿ ಸೇವೆ ಸಲ್ಲಿಸುವ ಅಶಕ್ತ ಕಲಾವಿದರ ಸಮಗ್ರ ಕಲ್ಯಾಣದ ಸದುದ್ದೇಶವನ್ನಿಟ್ಟುಕೊಂಡು ಸಪ್ಟೆಂಬರ್ ತಿಂಗಳಲ್ಲಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ಉದ್ಘಾಟನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಎಂಬ ಸೇವಾ ಸಂಸ್ಥೆ ಅನೇಕ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈಗಾಗಲೇ ತೆಂಕು ಹಾಗೂ ಬಡಗುತಿಟ್ಟಿನ ೧೧ ಮಂದಿ ಅಶಕ್ತ ಕಲಾವಿದರಿಗೆ ತಲಾ ರೂ. 50,000/-ಗಳ ಗೌರವ ಧನ ಹಾಗೂ ವಿಧಿವಶರಾದ ಐವರು ಕಲಾವಿದರ ಕುಟುಂಬಕ್ಕೆ ತಲಾ ರೂ. 50,000/-ಗಳ ಪರಿಹಾರ ಧನ, ಅಪಘಾತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ 4 ಜನ ಕಲಾವಿದರಿಗೆ ತಲಾ ರೂ. 25,000/-ಗಳ ಚಿಕಿತ್ಸಾ ವೆಚ್ಚವನ್ನು ನೀಡಿ ಕಲಾವಿದರಲ್ಲಿ ಹಾಗೂ ಅವರ ಕುಟುಂಬದಲ್ಲಿ ಸ್ಥೈರ್ಯ ತುಂಬಿಸುವ ಕೆಲಸವನ್ನು ಮಾಡಲಾಗಿದೆ. ಟ್ರಸ್ಟಿನ ಇನ್ನಷ್ಟು ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೇ 22ರ ಭಾನುವಾರದಂದು ‘ಯಕ್ಷಧ್ರುವ ಪಟ್ಲ ಸಂಭ್ರಮ’ವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮಂಗಳೂರಿನ ಪುರಭವನದ ಕಲ್ಲಾಡಿ ವಿಠಲ ಶೆಟ್ಟಿ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 9ರಿಂದ ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಕಲಾವಿದರುಗಳಿಂದ ಯಕ್ಷಗಾನ ಪೂರ್ವರಂಗ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 9.45 ಕ್ಕೆ ಗಣ್ಯಾಥಿ-ಗಣ್ಯರ ಸಮಕ್ಷಮದಲ್ಲಿ ಸಮಾರಂಭವು ಉದ್ಘಾಟನೆಗೊಳ್ಳಲಿದೆ. ಪೂರ್ವಾಹ್ನ 10 ರಿಂದ ಟ್ರಸ್ಟ್ನ ಸದಸ್ಯರು ಹಾಗೂ ಯಕ್ಷಾಭಿಮಾನಿಗಳಿಂದ ರಕ್ತದಾನ ಶಿಬಿರ ಮತ್ತು ಯಕ್ಷಗಾನ ಕಲಾವಿದರಿಗೆ ಹಾಗೂ ಅವರ ಮನೆಯವರಿಗೆ ಉಚಿತ ವೈದ್ಯಕೀಯ ತಪಾಸಣೆ, ಔಷಧ ವಿತರಣೆ ಜರಗಲಿದೆ.
ಪೂರ್ವಾಹ್ನ 11 ರಿಂದ 1ರ ವರೆಗೆ ಯಕ್ಷ ಸಪ್ತಸ್ವರ ಕಾರ್ಯಕ್ರಮ ನಡೆಯಲಿದ್ದು, ಕರಾವಳಿಯ ಪ್ರಸಿದ್ಧ ಏಳು ಭಾಗವತರಿಂದ ಭಾಗವತಿಕೆ ನಡೆಯಲಿದೆ. ಮಧ್ಯಾಹ್ನ 1.30 ರಿಂದ ಅಪರಾಹ್ನ 2.30ರ ವರೆಗೆ ರಾಧಾ ವಿಲಾಸ ಯಕ್ಷಗಾನ ನಾಟ್ಯ ವೈಭವ, ಅಪರಾಹ್ನ 2.30ರಿಂದ ತುಳುನಾಡಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತುಳು ತಾಳಮದ್ದಳೆ.
ಸಂಜೆ 5 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ಷೇತ್ರದ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ತೆಂಕುತಿಟ್ಟಿನ ಪ್ರಖ್ಯಾತ ಕಲಾವಿದರಾದ ಶ್ರೀ ಪೆರುವಾಯಿ ನಾರಾಯಣ ಶೆಟ್ಟರಿಗೆ 2016ನೇ ಸಾಲಿನ ಪಟ್ಲ ಪ್ರಶಸ್ತಿ ಪ್ರದಾನ, ಖ್ಯಾತ ಅರ್ಥಧಾರಿಗಳಾದ ಶ್ರೀ ಜಬ್ಬಾರ್ ಸಮೋ ಸಂಪಾಜೆ ಇವರಿಗೆ ಯಕ್ಷ ಗೌರವ ಮನ್ನಣೆ, ಯಕ್ಷಗಾನ ಕಲಾವಿದರಿಗೆ ಅಪಘಾತ ವಿಮಾ ಯೋಜನೆಗೆ ಚಾಲನೆ, ತೆಂಕು-ಬಡಗುತಿಟ್ಟಿನ 15 ಅಶಕ್ತ ಕಲಾವಿದರಿಗೆ ತಲಾ 50 ಸಾವಿರ ರೂ. ಗಳ ಗೌರವ ಧನ ಸಹಾಯ ವಿತರಣೆ, ಯಕ್ಷಗಾನ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಮೇಲ್ಪಟ್ಟು ಗರಿಷ್ಠ ಅಂಕ ಗಳಿಸಿದ ಕಲಾವಿದರ ಮಕ್ಕಳಿಗೆ ಚಿನ್ನದ ಪದಕ ಪ್ರದಾನ ಕಾರ್ಯಕ್ರಮಗಳು ಜರಗಲಿದೆ.
ಸಮಾರಂಭದಲ್ಲಿ ವಿಶೇಷ ಆಕರ್ಷಣೆಯಾಗಿ ಕನ್ನಡ ಚಿತ್ರರಂಗದ ಪ್ರಸಿದ್ಧ ನಟ-ನಟಿಯರುಗಳಾದ ದರ್ಶನ್, ತಾರಾ, ನಂದಿನಿ, ಅನೂಪ್ ಭಂಡಾರಿ, ನಿರೂಪ್ ಭಂಡಾರಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ರಾತ್ರಿ ೭.೩೦ರಿಂದ ಹೊಸನಗರ ಮೇಳದ ಕಲಾವಿದರಿಂದ ಮಾನಿಷಾದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಗಂಧರ್ವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಇಂದು ಅಪಾರ ಸಂಖ್ಯೆಯ ಸದಸ್ಯರನ್ನು ಹೊಂದಿದೆ. ಪಟ್ಲ ಸತೀಶ್ ಶೆಟ್ಟಿ ಅವರು ತೆಂಕುತಿಟ್ಟಿನ ಯಕ್ಷಗಾನ ಇತಿಹಾಸದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದವರು. ಯಕ್ಷಗಾನದಿಂದ ವಿಮುಖರಾಗುತ್ತಿದ್ದ ಯುವಜನತೆಯನ್ನು ತಂಡೋಪತಂಡವಾಗಿ ಸೆಳೆದವರು. ಹಸಿದು ಬಂದವರಿಗೆ ಅನ್ನವೀಯುವ ಹೃದಯವಂತನಾಗಿ, ಸ್ನೇಹಕ್ಕೆ ಹಂಬಲಿಸಿದವರಿಗೆ ಆಪ್ತ ಮಿತ್ರನಾಗಿ, ಸಹಾಯ ಬೇಡಿ ಬಂದವರಿಗೆ ಆಪ್ತ ರಕ್ಷಕನಾಗಿ, ಹಲವರಿಗೆ ಹಲವು ರೂಪದಲ್ಲಿ ಕಾಣ ಸಿಗುವ ಇವರ ವ್ಯಕ್ತಿತ್ವ ಒಂದು ಅನನ್ಯವಾದುದು.
ಯಕ್ಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಟ್ರಸ್ಟಿನ ವತಿಯಿಂದ ನಡೆಯುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.