ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಕಮಾ೦ಡರ್ ಬುರ್ಹಾನ್ ಮುಜಫ್ಪರ್ ವಾನಿಯನ್ನು ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಕ್ಷಿಣ ಕಾಶ್ಮೀರದ ಹಲವೆಡೆ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಪುಲ್ವಾಮಾ, ಶ್ರೀನಗರ, ಜಮ್ಮು, ಅನಂತನಾಗ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಶ್ರೀನಗರ, ಅನಂತನಾಗ್, ಜಮ್ಮುವಿನಲ್ಲಿ ಯಾವುದೇ ಪರಿಸ್ಥಿತಿ ನಿರ್ಮಾಣವಾದರೂ ನಿಯಂತ್ರಿಸಲು ಸಿಆರ್ ಪಿಎಫ್ ಯೋಧರು, ತುರ್ತು ಪ್ರಹಾರ ದಳ, ಅಶ್ರುವಾಯು ದಳ, ಅರೆಸೇನಾ ಯೋಧರು ಸೇರಿದಂತೆ ಭದ್ರತಾ ಪಡೆಗಳು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾದ ಕಾರಣ ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗವಾಗಿ ಸಂಚರಿಸುವ ಯಾತ್ರೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎನ್ನಲಾಗಿದೆ. ಇದರಿಂದಾಗಿ ಅಮರನಾಥ ಯಾತ್ರೆ, ವೈಷ್ಣೋದೇವಿಗೆ ತೆರಳುವ ಭಕ್ತರು, ಯಾತ್ರಾರ್ಥಿಗಳು ಪರದಾಡುವಂತಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಬುರ್ಹಾನ್ ಮುಜಫ್ಪರ್ ವಾನಿ ಎಂದೇ ಪ್ರಖ್ಯಾತನಾಗಿದ್ದು, ಈತ ಫೇಸ್ಬುಕ್ ಮತ್ತು ವಾಟ್ಸಾಪ್ ಮೂಲಕ ಯುವಕರನ್ನು ಭಯೋತ್ಪಾದನೆಗೆ ಪ್ರಚೋದಿಸಿ ಅವರನ್ನು ಭಯೋತ್ಪಾದಕ ಸಂಘಟನೆಗೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನಿಗದಿ ಪಡಿಸಲಾಗಿತ್ತು. ಭದ್ರತಾ ಪಡೆಗಳು ಶುಕ್ರವಾರ ಅನ೦ತ್ನಾಗ್ ಜಿಲ್ಲೆಯಲ್ಲಿ ಬುರ್ಹಾನ್ ವಾನಿ ಮತ್ತು ಇಬ್ಬರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.