ಮಂಗಳೂರು: ವಿಜ್ಞಾನದ ವಿದ್ಯಾರ್ಥಿಗಳು ಯಾವಾಗಲೂ ವಿಶ್ವದ ವಿವಿಧ ವಸ್ತು-ವಿಷಯಗಳನ್ನು ಕುರಿತು ಏನು? ಏಕೆ? ಎಲ್ಲಿ? ಹೇಗೆ? ಎನ್ನುವ ಪ್ರಶ್ನೆಗಳನ್ನು ತಮ್ಮಲ್ಲೇ ಕೇಳಿಕೊಂಡು ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಹಾಗಾದಾಗ ಮಾತ್ರ ವಿಜ್ಞಾನದ ಬೆಳವಣಿಗೆ ಸಾಧ್ಯ. ವಿಜ್ಞಾನ ಕ್ಷೇತ್ರದಲ್ಲಿ ಮುನ್ನಡೆಯಬೇಕಾದರೆ ಕನಸುಗಳಿಂದ ಕೂಡಿದ ಕಣ್ಣು ಮತ್ತು ಕುತೂಹಲಭರಿತವಾದ ಮನಸ್ಸು ಬೇಕು. ಭಾರತೀಯ ವಿಜ್ಞಾನಿಗಳು ಇಂದು ತಮ್ಮ ಸಾಧನೆಗಳಿಂದ ಜಾಗತಿಕ ಮಟ್ಟದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ಪಿಲಿಕುಲ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರೂ, ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರೂ ಆದ ಡಾ| ಕೆ.ವಿ.ರಾವ್ ಅವರು ಹೇಳಿದರು.
ಅವರು ನಗರದ ಶಾರದಾ ಪದವಿ ಪೂರ್ವ ಕಾಲೇಜಿನ 2016-17ನೇ ಸಾಲಿನ ‘ವಿಜ್ಞಾನ ಸಂಘ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದ ಮೊದಲಿಗೆ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಡಿ. ಶ್ರೀಪತಿ ರಾವ್ ಅವರು ಸ್ವಾಗತಿಸಿದರು. ವೇದಿಕೆಯಲ್ಲಿ ಶಾರದಾ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಶ್ರೀ ಪ್ರದೀಪ ಕುಮಾರ್ ಕಲ್ಕೂರ, ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರಧ್ವಾಜ್, ಶಾರದಾ ಪ.ಪೂ.ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ಮಹಬಲೇಶ್ವರ ಭಟ್, ಶಿಕ್ಷಕ -ರಕ್ಷಕ ಸಂಘದ ಸದಸ್ಯೆ ಶ್ರೀಮತಿ ನಿಮಿತಾ ಶೆಣೈ ಉಪಸ್ಥಿತರಿದ್ದರು.
ವಿಜ್ಞಾನ ಸಂಘದ ಅಧ್ಯಕ್ಷೆ ಶ್ರೀಮತಿ ಅನುಪಮ ಜಿ.ಕೆ. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳ ಪರಿಚಯ ಮಾಡಿದರು. ಕು| ಅಚಲಾ ಮತ್ತು ತಂಡದವರು ಪ್ರಾರ್ಥನೆ ಗೀತೆಗಳನ್ನು ಹಾಡಿದರು.
ವಿದ್ಯಾರ್ಥಿನಿ ಕು| ಪ್ರತ್ಯುಷ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಕು| ಶುಭಾಂಗಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಿಸಿದ ರೂಪಕವನ್ನು ಪ್ರಸ್ತುತ ಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.