ಮಂಗಳೂರು : ಮಂಗಳೂರು ಮಹಾನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ 61 ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಸಂಭ್ರಮೋಲ್ಲಾಸದಿಂದ ಆಚರಿಸಲಾಯಿತು. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ, ಗುರುಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರೂ ಆದ ಶ್ರೀ ಭಾಸ್ಕರ ರೈ ಕುಕ್ಕುವಳ್ಳಿಯವರು ಸಮಾರಂಭದ ಮುಖ್ಯ ಅತಿಥಿಯಾಗಿದ್ದರು. ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು ಎನ್ನುವಂತೆ ನಮ್ಮ ನಾಡು-ನುಡಿಯ ಬಗ್ಗೆ ನಾವೆಲ್ಲರೂ ಅಭಿಮಾನವನ್ನು ಹೊಂದಿರುವುದು ಅಗತ್ಯದ ವಿಚಾರವಾಗಿದೆ. ಅತ್ಯಂತ ಪ್ರಾಚೀನ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯದ ಸಾಹಿತ್ಯಿಕ, ಸಾಂಸ್ಕೃತಿಕ ಸಮೃದ್ಧತೆಯನ್ನು ಹೊಂದಿರುವ ನಮ್ಮ ನಾಡ ನುಡಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕನ್ನಡಿಗರಾದ ನಮ್ಮೆಲ್ಲರ ಹೆಮ್ಮೆಯ ಕರ್ತವ್ಯವಾಗಿದೆ. ಪ್ರತಿಯೊಬ್ಬರಿಗೂ ಲೇಸನ್ನೇ ಬಯಸುವ ಕನ್ನಡಿಗರ ಸಂದೇಶವನ್ನು ನಾವೆಲ್ಲರೂ ಅರ್ಥೈಸಿಕೊಂಡು ಒಳಿತಿನತ್ತ ಮುನ್ನಡೆಯೋಣ ಎಂಬುದಾಗಿ ಶ್ರೀ ಭಾಸ್ಕರ ರೈ ಕುಕ್ಕುವಳ್ಳಿಯವರು ತಮ್ಮ ಭಾಷಣದಲ್ಲಿ ಸಂದೇಶವಿತ್ತರು.
ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸನ್ಮಾನ್ಯ ಪ್ರೊ| ಎಂ.ಬಿ.ಪುರಾಣಿಕರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಭಾಷೆ ಎನ್ನುವುದು ಪ್ರತಿಯೊಬ್ಬನ ನಡವಳಿಕೆ, ಸಂಸ್ಕೃತಿ, ಸಂಸ್ಕಾರವನ್ನು ಪ್ರತಿಬಿಂಬಿಸುತ್ತದೆ. ಬಹುಭಾಷಾ ವಿದ್ವಾಂಸನಾದರೂ ಮಾತೃಭಾಷೆಯ ಸಂಸ್ಕಾರ ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎಂಬ ವಿಚಾರವನ್ನು ಉದಾಹರಣೆಯ ಮುಖಾಂತರ ವಿವರಿಸಿದ ಅವರು ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸುವುದರ ಜತೆಗೆ ಇತರ ಭಾಷೆಗಳನ್ನು ಕಲಿಯುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಶಾರದಾ ವಿದ್ಯಾ ಸಂಸ್ಥೆಗಳ ಉಪಾಧ್ಯಕ್ಷರಾದ ಶ್ರೀ ಕೆ.ಎಸ್.ಕಲ್ಲೂರಾಯರು, ಎಸ್.ಕೆ.ಡಿ.ಬಿ. ಅಸೋಶಿಯೇಶನ್ನಿನ ಕಾರ್ಯದರ್ಶಿ ಶ್ರೀ ಸುಧಾಕರ ರಾವ್ ಪೇಜಾವರ, ಶಾರದಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಕೆ. ಬಾಲಕೃಷ್ಣ ಭಾರಧ್ವಾಜ್, ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಪತಿ ರಾವ್, ಶಾರದಾ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಸುನೀತಾ ವಿ ಮಡಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾಲಯದ ಉಪ-ಪ್ರಾಂಶುಪಾಲ ಶ್ರೀ ದಯಾನಂದ ಕಟೀಲ್ ಕಾರ್ಯಕ್ರಮ ಸಂಯೋಜನೆಯಲ್ಲಿ ಮಾರ್ಗದರ್ಶನವಿತ್ತರು.
ವಿದ್ಯಾಲಯದ ವಿದ್ಯಾರ್ಥಿನಿ ಕು| ಶ್ರಾವ್ಯ ಸ್ವಾಗತಗೈದರೆ ಕು| ಶಿವಾನಿ ವಂದನಾರ್ಪಣೆಗೈದಳು. ವಿದ್ಯಾರ್ಥಿ ಮಾ| ರಾಮಕಿಶನ್ ಕಾರ್ಯಕ್ರಮ ನಿರೂಪಣೆಗೈದರು. ಅಧ್ಯಾಪಕ ಶ್ರೀ ಬಾಲಕೃಷ್ಣ ಶೆಟ್ಟಿ ಅತಿಥಿ ಪರಿಚಯಗೈದರು. ಕಾರ್ಯಕ್ರಮದಂಗವಾಗಿ ಶಾರದಾ ವಿದ್ಯಾಲಯ, ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮತ್ತು ಶಾರದಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು| ಐಶ್ವರ್ಯ ರಾವ್ ಇವರಿಂದ ಕನ್ನಡಾಭಿಮಾನ ತುಂಬುವ ಸುಶ್ರಾವ್ಯ ಗೀತೆಗಳನ್ನು ಹಾಡಿ ಸಮಾರಂಭಕ್ಕೆ ಮೆರುಗು ನೀಡಿದರು. ರಾಷ್ಟ್ರಗೀತೆ ಹಾಡುವುದರೊಂದಿಗೆ ರಾಜ್ಯೋತ್ಸವ ಸಮಾರಂಭ ಶುಭ ಸಮಾಪ್ತಿಗೊಂಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.